ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡವಿನ ಎರಡನೇ ಟಿ20 ಪಂದ್ಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಎಲ್ಲರ ಚಿತ್ತ ಕದ್ದಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಯಾವ ಕಾಂಬಿನೇಷನ್ನಲ್ಲಿ ಅಂಗಳಕ್ಕೆ ಇಳಿಯುತ್ತದೆ ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿವೆ.
ಗ್ವಾಲಿಯರ್ನಲ್ಲಿ ನಡೆದಿದ್ದ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ಏಳು ವಿಕೆಟ್ ಜಯ ಸಾಧಿಸಿತ್ತು. ಎರಡನೇ T20 ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಗ್ವಾಲಿಯರ್ನಲ್ಲಿ ಜಯ ಸಾಧಿಸಿದ ತಂಡವನ್ನೇ ಮುಂದುವರೆಸುತ್ತದೋ, ಅಥವಾ ತಂಡದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆಯೋ ಎಂಬ ಪ್ರಶ್ನೆ ಉದ್ಭವಿಸಿದೆ. ಸ್ಟಾರ್ ಆಲೌರಂಡರ್ ಅವರ ಸ್ಥಾನದಲ್ಲಿ ತಂಡಕ್ಕೆ ಎಂಟ್ರಿ ಆದ ಮುಂಬೈ ಪ್ಲೇಯರ್ಗೆ ಆಡುವ ಅವಕಾಶ ಸಿಗುವ ಸಾಧ್ಯತೆ ಇದೆ.

ಈಗಾಗಲೇ ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಇಬ್ಬರು ಪದಾರ್ಪಣೆ ಮಾಡುವ ಅವಕಾಶ ಪಡೆದರು. ಇಬ್ಬರೂ ನಾಯಕನ ಭರವಸೆಯನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಒಬ್ಬರ ಸ್ಥಾನಕ್ಕೆ ಕತ್ತರಿ ಬೀಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹೀಗಿರುವಾಗ ಪ್ಲೇಯಿಂಗ್ ಇಲೆವೆನ್ನಲ್ಲಿ ಏನೆಲ್ಲಾ ಬದಲಾವಣೆ ಆಗಬಹುದು ಎಂಬ ಪ್ರಶ್ನೆ ಕಾಡಬಹುದು.
ಅಭಿಷೇಕ್ ಶರ್ಮಾ ಅವರೊಂದಿಗೆ ಸಂಜು ಸ್ಯಾಮ್ಸನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಇಬ್ಬರೂ ಮೊದಲ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ, ಮ್ಯಾನೇಜ್ಮೆಂಟ್ ಚಿತ್ತ ಕದ್ದಿದ್ದರು. ಈ ಇಬ್ಬರೂ ದೊಡ್ಡ ಇನಿಂಗ್ಸ್ ಕಟ್ಟದೇ ಇದ್ದರೂ ತಂಡಕ್ಕೆ ಆಧಾರವಾಗಿದ್ದರು. ಹೀಗಾಗಿ ಇವರ ಸ್ಥಾನದಲ್ಲಿ ಬದಲಾವಣೆ ತೀರಾ ಕಡಿಮೆ. ಆಲ್ರೌಂಡರ್ ರೂಪದಲ್ಲಿ ಕಾಣಿಸಿಕೊಳ್ಳುವ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಪ್ಲೇಯಿಂಗ್ ಇಲೆವೆನ್ನಿಂದ ಕೈ ಬಿಡುವ ಸಾಧ್ಯತೆ ಇದೆ. ಇವರ ಸ್ಥಾನದಲ್ಲಿ ತಿಲಕ್ ವರ್ಮಾ ಅವರಿಗೆ ಅವಕಾಶ ನೀಡಬೇಕು.

ಆಲ್ರೌಂಡರ್ ಶಿವಂ ದುಬೆ ಅವರ ಸ್ಥಾನದಲ್ಲಿ ತಂಡ ಸೇರಿರುವ ತಿಲಕ್ ವರ್ಮಾ ತಂಡದ ಪರ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ತಿಲಕ್ ವರ್ಮಾ ಈ ಹಿಂದೆ ಭಾರತ ಪರ ಆಡಿ ಸ್ಥಿರ ಪ್ರದರ್ಶನ ನೀಡಿದ್ದರು. ಇವರು ಮತ್ತೆ ತಂಡಕ್ಕೆ ಮರಳುವ ಸಾಧ್ಯತೆ ಇದೆ.
ವೇಗದ ಬೌಲಿಂಗ್ ವಿಭಾಗದಲ್ಲಿ ಅರ್ಷದೀಪ್ ಸಿಂಗ್ ಹಾಗೂ ಮಯಾಂಕ್ ಯಾದವ್ ಅವರನ್ನು ಕಾಣಬಹುದು. ಮೂರನೇ ವೇಗಿಯಾಗಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಈ ಪಂದ್ಯದಲ್ಲಿ ಹರ್ಷಿತ್ ರಾಣಾ ಆಡುವ ಸಾಧ್ಯತೆ ತೀರಾ ಕಡಿಮೆ. ಇವರು ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆಡಬಹುದು. ವರುಣ್ ಚಕ್ರವರ್ತಿ ಭರ್ಜರಿ ಕಂ ಬ್ಯಾಕ್ ಮಾಡಿದ್ದು, ಸ್ಪಿನ್ ಬೌಲರ್ ರೂಪದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ರವಿ ಬಿಷ್ಣೋಯಿ ಅವರಿಗೆ ಸ್ಥಾನ ಸಿಗುವ ಸಾಧ್ಯತೆಯೂ ಕಡಿಮೆ ಎಂದು ಹೇಳಲಾಗುತ್ತಿದೆ.