ಪಾಕಿಸ್ತಾನ ವಿರುದ್ಧ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಗೆದ್ದು ಬೀಗುತ್ತಿದ್ದ ಬಾಂಗ್ಲಾದೇಶ ತಂಡವನ್ನು ಭಾರತ ಬಗ್ಗು ಬಡಿದಿದೆ. ಸತತ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಎದುರು ಬಾಂಗ್ಲಾದೇಶ ಸೋಲು ಕಂಡಿದೆ.
ಇದೀಗ ಟಿ20 ಸರಣಿ ಮೇಲೆ ಟೀಮ್ ಇಂಡಿಯಾ ಕಣ್ಣಿಟ್ಟಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡವು ಟಿ20 ಸರಣಿಯಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಉಭಯ ತಂಡಗಳ ನಡುವಿನ ಸರಣಿಯ ಮೊದಲ ಪಂದ್ಯ ಅಕ್ಟೋಬರ್ 6 ರಂದು ಗ್ವಾಲಿಯರ್ನಲ್ಲಿ ನಡೆಯಲಿದೆ.

ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಂಡವನ್ನು ಪ್ರಕಟಿಸಿದೆ. ಭಾರತ ತಂಡದಲ್ಲಿ ಹಲವು ಯುವ ಆಟಗಾರರಿಗೆ ಅವಕಾಶ ಸಿಕ್ಕಿದೆ. ಇದೇ ವೇಳೆ ಕೆಲ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಯಶಸ್ವಿ ಜೈಸ್ವಾಲ್ ಮತ್ತು ಶುಭಮನ್ ಗಿಲ್ ಕೂಡ ಸ್ಥಾನ ಪಡೆದಿಲ್ಲ. ಕೆಲಸದ ನಿರ್ವಹಣೆ ಕಡಿಮೆ ಮಾಡಲು ಈ ಇಬ್ಬರು ಯುವ ಆಟಗಾರರಿಗೆ ಬಿಸಿಸಿಐ ಟಿ20 ಸರಣಿಯಿಂದ ವಿಶ್ರಾಂತಿ ನೀಡಿದೆ. ಇಂತಹ ಪರಿಸ್ಥಿತಿ ನಾಯಕ ಸೂರ್ಯಕುಮಾರ್ ಅವರಿಗೆ ಆಡುವ ಹನ್ನೊಂದರ ಬಳಗವನ್ನು ಆಯ್ಕೆ ಮಾಡುವುದು ಸವಾಲಾಗಿದೆ.
ಶುಭಮನ್ ಮತ್ತು ಜೈಸ್ವಾಲ್ ಅನುಪಸ್ಥಿತಿಯಲ್ಲಿ ಭಾರತಕ್ಕೆ ಇನ್ನಿಂಗ್ಸ್ ಆರಂಭಿಸುವ ಜವಾಬ್ದಾರಿಯನ್ನು ಯಾರು ನಿಭಾಯಿಸುತ್ತಾರೆ ಎಂಬುದು ಈಗ ದೊಡ್ಡ ಪ್ರಶ್ನೆಯಾಗಿದೆ. ಆರಂಭಿಕರಾಗಿ ಅಭಿಷೇಕ್ ಶರ್ಮಾ ಹೆಸರು ಖಚಿತವಾಗಿದೆ. ಅವರು ಬಿರುಸಿನ ಬ್ಯಾಟಿಂಗ್ಗೆ ಹೆಸರುವಾಸಿಯಾಗಿದ್ದಾರೆ. ಈಗಾಗಲೇ ಭಾರತಕ್ಕೆ ಪದಾರ್ಪಣೆ ಮಾಡಿರುವ ಅವರು ಅಂತರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಶತಕ ಬಾರಿಸಿದ್ದಾರೆ. ಅಭಿಷೇಕ್ ಏಕಾಂಗಿಯಾಗಿ ಪಂದ್ಯವನ್ನು ಕ್ಷಣಮಾತ್ರದಲ್ಲಿ ತಿರುಗಿಸಬಲ್ಲ ಸಾಮರ್ಥ್ಯವನ್ನು ಹೊಂದಿದ್ದಾರೆ.
ಬಾಂಗ್ಲಾದೇಶ ವಿರುದ್ಧ ಕೂಡ ಅಬ್ಬರಿಸಲು ಅಭಿಷೇಕ್ ಸಿದ್ಧರಾಗಿದ್ದಾರೆ. ಮತ್ತೊಬ್ಬ ಆರಂಭಿಕ ಬ್ಯಾಟರ್ ಅನ್ನು ಹುಡುಕುತ್ತಿರುವ ನಾಯಕ ಸೂರ್ಯ ಅವರಿಗೆ ಇರುವ ಏಕೈಕ ಆಯ್ಕೆ ಅಂದರೆ ಸಂಜು ಸ್ಯಾಮನ್ಸ್ ಮಾತ್ರ. ಏಕೆಂದರೆ ತಂಡದ ಇತರ ಆಟಗಾರರ ಪೈಕಿ ಸಂಜು ಓಪನಿಂಗ್ನಲ್ಲಿ ಹೆಚ್ಚಿನ ಅನುಭವವನ್ನು ಹೊಂದಿದ್ದಾರೆ. ಅವರು ಐಪಿಎಲ್ ಟೂರ್ನಿಯಲ್ಲಿ ಆನೇಕ ಪಂದ್ಯಗಳಲ್ಲಿ ಇನ್ನಿಂಗ್ಸ್ ತೆರೆದಿದ್ದಾರೆ.
ಶ್ರೀಲಂಕಾ ಪ್ರವಾಸ ವೇಳೆ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಸೈ ಎನಿಸಿಕೊಂಡ ರಿಯಾನ್ ಪರಾಗ್ ಮತ್ತು ವಾಷಿಂಗ್ಟನ್ ಸುಂದರ್ ಆಡುವ ಹನ್ನೊಂದರ ಬಳಗದಲ್ಲಿ ಸೇರಿಕೊಳ್ಳವ ಸಾಧ್ಯತೆಯಿದೆ. ಟಿ20 ವಿಶ್ವಕಪ್ ತಂಡದ ಭಾಗವಾಗಿದ್ದ ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅರ್ಷದೀಪ್ ಸಿಂಗ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ರಿಂಕು ಸಿಂಗ್ ಅವರು ಹಾರ್ದಿಕ್ ಪಾಂಡ್ಯ ಜೊತೆಗೆ ಫಿನಿಶರ್ ಆಗಲಿದ್ದು, ಸ್ಪಿನ್ ಬೌಲಿಂಗ್ ದಾಳಿ ನಡೆಯಲು ರವಿ ಬಿಷ್ಣೋಯ್ ಅವರಿಗೆ ತಂಡದಲ್ಲಿ ಸ್ಥಾನ ಸಿಗಬಹುದು. ಇನ್ನು ವೇಗಿ ಮಯಾಂಕ್ ಯಾದವ್ ಪಾರ್ದಾಪಣೆ ಪಂದ್ಯವನ್ನಾಡಲು ಸಿದ್ಧರಾಗಿದ್ದಾರೆ ಎನ್ನಲಾಗುತ್ತಿದೆ.
ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ರಿಯಾನ್ ಪರಾಗ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಮಯಾಂಕ್ ಯಾದವ್.
ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.