ಪ್ರವಾಸಿ ಇಂಗ್ಲೆಂಡ್ ತಂಡದ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲೇ ಸೋಲು ಅನುಭವಿಸಿದ ಆತಿಥೇಯ ಭಾರತ ತಂಡ ಗೆಲ್ಲುವ ಸುಲಭ ಅವಕಾಶವನ್ನು ಕೈಚೆಲ್ಲಿತು ಮತ್ತು 28 ರನ್ಗಳ ಹೀನಾಯ ಸೋಲು ಕಂಡಿತು.
ಇದೀಗ ಉಳಿದ ನಾಲ್ಕು ಪಂದ್ಯಗಳಲ್ಲಿ ಪುನರಾಗಮನ ಮಾಡಲು ಎದುರು ನೋಡುತ್ತಿರುವ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡಕ್ಕೆ ಗಾಯದ ಮೇಲೆ ಬರೆ ಎಂಬಂತೆ ಇಬ್ಬರು ಸ್ಟಾರ್ ಆಟಗಾರರ ಅನುಪಸ್ಥಿತಿ ಎದ್ದು ಕಾಣುತ್ತಿದೆ.

ಮೊದಲ ಟೆಸ್ಟ್ ಪಂದ್ಯದ ವೇಳೆ ಭಾರತ ತಂಡದ ಆಲ್ರೌಂಡರ್ ರವೀಂದ್ರ ಜಡೇಜಾ ಮತ್ತು ಬ್ಯಾಟರ್ ಕೆಎಲ್ ರಾಹುಲ್ ಗಾಯಗೊಂಡರು. ಹೀಗಾಗಿ ಅವರಿಬ್ಬರೂ 2ನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ.
ಇದಕ್ಕೂ ಮೊದಲು ವಿರಾಟ್ ಕೊಹ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯಲು ನಿರ್ಧರಿಸಿದ್ದರು. ಅನುಭವಿ ಆಟಗಾರನ ಅಲಭ್ಯತೆ ಕಾರಣ ಹಿನ್ನಡೆ ಅನುಭವಿಸಿದ್ದ ಭಾರತ ತಂಡ ಇದೀಗ ಮತ್ತಿಬ್ಬರು ಪ್ರಮುಖ ಆಟಗಾರ ಸೇವೆ ಕಳೆದುಕೊಂಡಿದೆ.
ಫೆಬ್ರವರಿ 2ರಿಂದ ವಿಶಾಖಪಟ್ಟಣದ ವಿಡಿಸಿಎ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ತನ್ನ ಆಡುವ 11ರ ಬಳಗದಲ್ಲಿ ಒಂದಲ್ಲ ಮೂರು ಬದಲಾವಣೆ ಮಾಡುವ ಸಾಧ್ಯತೆ ಇದೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ತನ್ನ ಬೌಲಿಂಗ್ ವಿಭಾಗದಲ್ಲಿ ಇಬ್ಬರು ವೇಗಿಗಳನ್ನು ಕಣಕ್ಕಿಳಿಸಿದ ಕಾರಣ, ಮೂವರು ಸ್ಪಿನ್ನರ್ಗಳೊಂದಿಗೆ ಆಡಿತು. ಎರಡನೇ ವೇಗಿಯಾಗಿ ಆಡಿದ್ದ ಮೊಹಮ್ಮದ್ ಸಿರಾಜ್ ಎರಡೂ ಇನಿಂಗ್ಸ್ಗಳಲ್ಲಿ ವಿಕೆಟ್ ಪಡೆಯಲು ವಿಫಲರಾದರು.
ಹೀಗಾಗಿ ಎರಡನೇ ಟೆಸ್ಟ್ ಪಂದ್ಯಕ್ಕೆ ಮೊಹಮ್ಮದ್ ಸಿರಾಜ್ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದ್ದು, ಮತ್ತೊಬ್ಬ ಸ್ಪಿನ್ನರ್ನ ಆಯ್ಕೆ ಮಾಡಿಕೊಳ್ಳುವ ನಿರೀಕ್ಷೆ ಇದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಕೂಡ ನಾಲ್ಕು ಸ್ಪಿನ್ನರ್ಗಳೊಂದಿಗೆ ಆಡಿತ್ತು. ಭಾರತ ತಂಡದಲ್ಲಿ ನಾಲ್ಕನೇ ಸ್ಪಿನ್ನರ್ ಆಗಿ ಕುಲದೀಪ್ ಯಾದವ್ ಆಡುವ ಸಾಧ್ಯತೆ ಇದೆ.
ಭಾರತ ತಂಡದ ಆಡುವ 11ರ ಬಳಗದಲ್ಲಿ 3 ಬದಲಾವಣೆ ಮಾಡುವ ನಿರೀಕ್ಷೆ ಇದೆ. ಮೊದಲಿಗೆ ಕೆಎಲ್ ರಾಹುಲ್ ಸ್ಥಾನದಲ್ಲಿ ಸರ್ಫರಾಜ್ ಖಾನ್ ಅಥವಾ ರಜತ್ ಪಾಟಿದಾರ್ಗೆ ಭಾರತ ಟೆಸ್ಟ್ ತಂಡಕ್ಕೆ ಪದಾರ್ಪಣೆ ಮಾಡುವ ಅವಕಾಶ ಸಿಗಲಿದೆ.

ಇನ್ನು ಆಲ್ರೌಂಡರ್ ರವೀಂದ್ರ ಜಡೇಜಾ ಸ್ಥಾನದಲ್ಲಿ ವಾಷಿಂಗ್ಟನ್ ಸುಂದರ್ ಆಡುವ ಸಾಧ್ಯತೆ ಹೆಚ್ಚಾಗಿದೆ. ಮೊಹಮ್ಮದ್ ಸಿರಾಜ್ ಅವರನ್ನು ಕೈಬಿಟ್ಟರೆ ಕುಲದೀಪ್ ಯಾದವ್ ಆಡುವ 11ರ ಬಳಗ ಸೇರಿಕೊಳ್ಳಲಿದ್ದಾರೆ. ಇನ್ನು ಜಸ್ಪ್ರೀತ್ ಬುಮ್ರಾ ತಂಡದಲ್ಲಿ ಏಕೈಕ ವೇಗಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
ಇನ್ನು ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ಶುಭ್ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಅವರಲ್ಲಿ ಯಾರಾದರೂ ಒಬ್ಬರಿಗೆ ಕೊಕ್ ನೀಡಿದರೆ, ಸರ್ಫರಾಜ್ ಖಾನ್ ಅಥವಾ ರಜತ್ ಪಾಟಿದಾರ್ ಇಬ್ಬರೂ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡುವ ಅವಕಾಶ ಹೊಂದಿದ್ದಾರೆ.
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್/ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕೆಎಸ್ ಭರತ್ (ವಿಕೆಟ್ಕೀಪರ್), ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.