ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಏಕದಿನ ಪಂದ್ಯ ಅಹಮದಾಬಾದ್ನಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಮಾಡುವ ನಿರ್ಧಾರವನ್ನು ಮಾಡಿದೆ. ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಮೂರು ಬದಲಾವಣೆಗಳೊಂದಿಗೆ ಕಣಕ್ಕೆ ಇಳಿಯಲಿದೆ. ಈಗಾಗಲೇ ಏಕದಿನ ಸರಣಿಯನ್ನು ವಶಕ್ಕೆ ಪಡೆದಿರುವ ಭಾರತ ತಂಡದಲ್ಲಿ ಬದಲಾವಣೆ ಮಾಡಿದ್ದು, ಹಲವು ಆಟಗಾರರಿಗೆ ಆಡುವ ಅವಕಾಶವನ್ನು ನೀಡಿದೆ.
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಮಾಡಲು ಮುಂದಾಗಿದ್ದು, ಕೇವಲ ಒಂದು ಬದಲಾವಣೆಯನ್ನು ಮಾಡಿದೆ. ಇಂಗ್ಲೆಂಡ್ ತಂಡದಲ್ಲಿ ಟಾಮ್ ಬ್ಯಾಂಟನ್ ಬದಲಿಗೆ ಜೇಮೀ ಓವರ್ಟನ್ ಮೈದಾನ ಪ್ರವೇಶಿಸಲಿದ್ದಾರೆ. ಇನ್ನು ಜಡೇಜ ಮತ್ತು ಶಮಿಗೆ ವಿಶ್ರಾಂತಿ ನೀಡಲಾಗಿದೆ. ವರುಣ್ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ. ಕುಲದೀಪ್, ವಾಷಿಂಗ್ಟನ್ ಮತ್ತು ಅರ್ಶ್ದೀಪ್ ಆಡುವ ತಂಡವನ್ನು ಸೇರಿಕೊಂಡಿದ್ದಾರೆ.

ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇವರು ಈ ಸರಣಿಯಲ್ಲಿ ಆಡಿರುವ ಎರಡು ಪಂದ್ಯಗಳಲ್ಲಿ ಆರು ವಿಕೆಟ್ ಪಡೆದಿದ್ದಾರೆ. ಇವರ ಬದಲಿಗೆ ವಾಶಿಂಗ್ಟನ್ ಸುಂದರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಗಾಯದಿಂದ ಚೇತರಿಸಿಕೊಂಡಿರುವ ಮೊಹಮ್ಮದ್ ಶಮಿ ಅವರ ಸ್ಥಾನದಲ್ಲಿ ಅರ್ಷದೀಪ್ ಸಿಂಗ್ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಲಾಗಿದೆ.
ಇನ್ನು ಸರಣಿಯಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗುತ್ತಿರುವ ಸ್ಟಾರ್ ಆಟಗಾರ ಕನ್ನಡಿಗ ಕೆಎಲ್ ರಾಹುಲ್ಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಇವರು ವಿಕೆಟ್ ಕೀಪರ್ ಆಗಿಯೂ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಎರಡು ಪಂದ್ಯಗಳಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದು, ಇವರ ಬದಲಿಗೆ ರಿಷಭ್ ಪಂತ್ ಅವರಿಗೆ ಅವಕಾಶ ನೀಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಆದರೆ ಟೀಮ್ ಮ್ಯಾನೇಜ್ಮೆಂಟ್ ರಾಹುಲ್ ಅವರ ಮೇಲೆ ಭರವಸೆಯನ್ನು ಇಟ್ಟಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೇಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್, ಹರ್ಷಿತ್ ರಾಣಾ.
ಇಂಗ್ಲೆಂಡ್ ತಂಡ: ಬೆನ್ ಡಕೆಟ್, ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ಕ್ಯಾಪ್ಟನ್), ಟಾಮ್ ಬ್ಯಾಂಟನ್, ಲಿಯಾಮ್ ಲಿವಿಂಗ್ಸ್ಟೋನ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್.