ಕೋಪ ತಗ್ಗಿಸಿಕೊಂಡಿದ್ದೇ ಗೆಲುವಿಗೆ ಕಾರಣ
ಭಾರತ ಮತ್ತು ಇಂಗ್ಲೆಂಡ್ ನಡುವೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಆಟಗಾರರು ಕೋಪವನ್ನು ತಗ್ಗಿಸಿಕೊಂಡು ಜವಾಬ್ದಾರಿಯುತ ಆಟವನ್ನು ಪ್ರದರ್ಶಿಸಿದ್ದೇ ಪಂದ್ಯ ಗೆಲ್ಲಲು ಪ್ರಮುಖ ಕಾರಣ ಎಂದು ಇಂಗ್ಲೆಂಡ್ ತಂಡದ ಹೆಡ್ ಕೋಚ್ ಸಿಲ್ವರ್ವುಡ್ ಅಭಿಪ್ರಾಯಪಟ್ಟಿದ್ದಾರೆ. ದ್ವಿತೀಯ ಟೆಸ್ಟ್ ಪಂದ್ಯದಂತೆ ಹೇಡಿಂಗ್ಲೆ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆಟಗಾರರು ರೋಷಾವೇಶದ ಪ್ರದರ್ಶನವನ್ನು ನೀಡಲಿಲ್ಲ ಬದಲಾಗಿ ಟೀಂ ಇಂಡಿಯಾ ಆಟಗಾರರ ಮೇಲೆ ಒತ್ತಡವನ್ನು ಹೇರುತ್ತಾ ಪಂದ್ಯವನ್ನು ತಮ್ಮ ಕೈವಶ ಮಾಡಿಕೊಂಡರು ಎಂದು ಸಿಲ್ವರ್ವುಡ್ ತಮ್ಮ ತಂಡದ ಆಟಗಾರರನ್ನು ಹೊಗಳಿದ್ದಾರೆ.
ಹೆಡಿಂಗ್ಲೆ ಪಂದ್ಯ ಗೆಲ್ಲುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದ ಇಂಗ್ಲೆಂಡ್
ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಮಳೆಯ ಕಾರಣದಿಂದಾಗಿ ಡ್ರಾನಲ್ಲಿ ಅಂತ್ಯಗೊಂಡಿತು ಹಾಗೂ ಲಾರ್ಡ್ಸ್ ಅಂಗಳದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ತಂಡ ಸೋಲು ಕಂಡಿತ್ತು. ಹೀಗೆ ಸರಣಿಯಲ್ಲಿ ಗೆಲುವಿನ ಖಾತೆ ತೆರೆಯದೇ ಹಿನ್ನಡೆಯನ್ನು ಅನುಭವಿಸಿದ್ದ ಇಂಗ್ಲೆಂಡ್ ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ತೃತೀಯ ಟೆಸ್ಟ್ ಪಂದ್ಯದಲ್ಲಿ 76 ರನ್ಗಳ ಇನ್ನಿಂಗ್ಸ್ ಗೆಲುವನ್ನು ದಾಖಲಿಸುವುದರ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದ್ದು ಕುತೂಹಲವನ್ನು ಸಾಕಷ್ಟು ಹೆಚ್ಚಿಸಿದೆ.
ಮೂರನೇ ಟೆಸ್ಟ್ ಪಂದ್ಯ ಯಾವಾಗ ಮತ್ತು ಎಲ್ಲಿ?
ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳು ಈಗಾಗಲೇ ಮುಗಿದಿದ್ದು ಎರಡೂ ತಂಡಗಳು 1-1 ಸಮಬಲ ಸಾಧಿಸಿವೆ. ಹೀಗಾಗಿ ಸರಣಿ ಮತ್ತಷ್ಟು ಕುತೂಹಲಕಾರಿ ಘಟ್ಟವನ್ನು ತಲುಪಿದ್ದು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬುದರ ಕುರಿತು ಈಗಾಗಲೇ ಚರ್ಚೆಗಳು ಆರಂಭವಾಗಿವೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಪ್ರತಿಷ್ಟಿತ ಓವಲ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 2ರಿಂದ ಸೆಪ್ಟೆಂಬರ್ 6 ರವರೆಗೆ ನಡೆಯಲಿದೆ.