ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ಕ್ರಿಕೆಟ್ ಕಾಶಿ ಲಾರ್ಡ್ಸ್ನಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿದ್ದರಿಂದ ಮೂರನೇ ಪಂದ್ಯ ರೋಚಕತೆ ಹುಟ್ಟಿಸಿದೆ. ಈ ಮೈದಾನದಲ್ಲಿ ಟೀಮ್ ಇಂಡಿಯಾ ಮತ್ತೊಂದು ಗೆಲುವು ಸಾಧಿಸಿ, ಸರಣಿಯಲ್ಲಿ ಮುನ್ನಡೆ ಸಾಧಿಸುವ ಪ್ಲ್ಯಾನ್ ಮಾಡಿಕೊಂಡಿದೆ. ಎರಡನೇ ಪಂದ್ಯದಲ್ಲಿ ಜಯ ದಾಖಲಿಸಿರುವ ಭಾರತ ಆತ್ಮವಿಶ್ವಾಸದಿಂದ ಬೀಗುತ್ತಿದೆ.
ಲಾರ್ಡ್ಸ್ ಅಂಗಳದಲ್ಲಿ ಈಗಾಗಲೇ ಉಭಯ ತಂಡಗಳು ಒಟ್ಟು 19 ಬಾರಿ ಮುಖಾಮುಖಿ ಆಗಿವೆ. ಈ ವೇಳೆ ಭಾರತ ಕೇವಲ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, 4 ಪಂದ್ಯಗಳಲ್ಲಿ ಸೋಲು, 12 ಡ್ರಾ ಸಾಧಿಸಿದೆ. ಕಳೆದ ಕೆಲವು ವರ್ಷಗಳಲ್ಲಿ ಈ ಮೈದಾನದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಮಾಡಲು ಹೆಣಗಾಟ ನಡೆಸಿತ್ತು. ಅಲ್ಲದೆ ಭಾರತದ ಬೌಲಿಂಗ್ ವಿಭಾಗ ಸಹ ಎದುರಾಳಿಗಳಿಗೆ ಕಾಟ ನೀಡುತ್ತಿರಲಿಲ್ಲ. ಈ ಬಾರಿ ಟೀಮ್ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ ಬಲಾಢ್ಯವಾಗಿದೆ.

ಭಾರತದ ಯಂಗ್ ಟೀಮ್ ಸಂಘಟಿತ ಆಟದ ಮೇಲೆ ಹೆಚ್ಚಿನ ವಿಶ್ವಾಸ ಇಟ್ಟಿಕೊಂಡಿದೆ. ಆರಂಭಿಕರಾಗಿ ಕಣಕ್ಕೆ ಇಳಿಯುವ ಯಶಸ್ವಿ ಜೈಸ್ವಾಲ್ ಹಾಗೂ ಕನ್ನಡಿ ರಾಹುಲ್ ಎದುರಾಳಿ ತಂಡಕ್ಕೆ ಕಾಟ ನೀಡಬಲ್ಲರು. ಈ ಇಬ್ಬರೂ ಆಟಗಾರರು ನೆಲಕ್ಕೂರಿ ನಿಂತು ಬ್ಯಾಟ್ ಮಾಡಿದಲ್ಲಿ ಬಿಗ್ ಸ್ಕೊರ್ ಕನಸು ಕಾಣಬಹುದು. ಇನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಕರುಣ್ ನಾಯರ್ ಅವರ ಮೇಲೆ ನಿರೀಕ್ಷೆಗಳು ಹೆಚ್ಚಾಗಿವೆ. ಇದು ಅವರಿಗೆ ಕೊನೆಯ ಚಾನ್ಸ್ ರೀತಿ ತೋರುತ್ತಿದೆ. ಎರಡು ಟೆಸ್ಟ್ ಪಂದ್ಯಗಳ ನಾಲ್ಕು ಇನಿಂಗ್ಸ್ನಲ್ಲಿ ಕರುಣ್ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಹೀಗಾಗಿ ಲಾರ್ಡ್ಸ್ನಲ್ಲಿ ಇವರಿಗೆ ಅವಕಾಶ ಸಿಕ್ಕಲ್ಲಿ ಬಿಗ್ ಇನಿಂಗ್ಸ್ ಕಟ್ಟುವ ಅವಶ್ಯಕತೆ ಇದೆ.
ಲೀಡ್ಸ್ ಹಾಗೂ ಬರ್ಮಿಂಗ್ ಹ್ಯಾಮ್ ಅಂಗಳದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾದ ನಾಯಕ ಶುಭಮನ್ ಗಿಲ್ ಅವರ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ. ಇವರು ಕಳೆದ ಪಂದ್ಯದಲ್ಲಿ 269 ರನ್ ಹಾಗೂ 161 ರನ್ ಸಿಡಿಸಿ ಅಬ್ಬರಿಸಿದ್ದರು. ಲಾರ್ಡ್ಸ್ನಲ್ಲಿ ಪ್ರಿನ್ಸ್ ಹೇಗೆ ಬ್ಯಾಟಿಂಗ್ ನಡೆಸುತ್ತಾರೆ ಎಂಬುದರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇನ್ನು ಐದನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ರಿಷಭ್ ಪಂತ್ ಎದುರಾಳಿ ಬೌಲರ್ಗಳಿಗೆ ಕಾಟ ನೀಡಬಲ್ಲ ಬೌಲರ್.

ಆಲ್ರೌಂಡರ್ ರವೀಂದ್ರ ಜಡೇಜಾ, ಎರಡನೇ ಟೆಸ್ಟ್ನಲ್ಲಿ ಅಪಾಯದಲ್ಲಿದ್ದ ತಂಡಕ್ಕೆ ನೆರವಾಗಿದ್ದರು. ಹೀಗಾಗಿ ಇವರನ್ನು ತಂಡದಲ್ಲಿ ಉಳಿಸಿಕೊಳ್ಳುವುದು ಬಹುತೇಕ ಖಚಿತ. ನಿತೀಶ್ ಕುಮಾರ್ ರೆಡ್ಡಿ ಆಡುವ ಬಳಗದಲ್ಲಿ ಸ್ಥಾನ ಪಡೆಯಬಹುದಾಗಿದೆ. ಇನ್ನು ವಾಷಿಂಗ್ಟನ್ ಸುಂದರ್ ಬದಲಿಗೆ ಟೀಮ್ ಇಂಡಿಯಾ ಶಾರ್ದೂಲ್ ಅವರನ್ನು ಕಣಕ್ಕೆ ಇಳಿಸಿದರೂ ಅಚ್ಚರಿಯಿಲ್ಲ.
ಜಸ್ಪ್ರಿತ್ ಬುಮ್ರಾ ಅನುಪಸ್ಥಿತಿಯಲ್ಲಿ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡಿರುವ ಆಕಾಶ್ ದೀಪ್ ಅವರ ಮೇಲೆ ಎಲ್ಲರ ನಿರೀಕ್ಷೆಗಳು ಹೆಚ್ಚಾಗಿವೆ. ಬುಮ್ರಾ ತಂಡದಲ್ಲಿ ಸ್ಥಾನ ಪಡೆದ್ರೂ ಸಹ ಇವರ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ. ಇನ್ನು ಮೊಹಮ್ಮದ್ ಸಿರಾಜ್ ಸಹ ವೇಗದ ಬೌಲರ್ ರೂಪದಲ್ಲಿ ಕಾಣಿಸಿಕೊಳ್ಳುವುದು ಕನ್ಫರ್ಮ್. ಕರ್ನಾಟಕದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಅವರಿಗೆ ಮೂರನೇ ಟೆಸ್ಟ್ನಿಂದ ಹೊರಗಿಡುವ ಸಾಧ್ಯತೆ ಇದೆ. ಇವರು ಎರಡನೇ ಟೆಸ್ಟ್ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಹೀಗಾಗಿ ಇವರಿಗೆ ಚಾನ್ಸ್ ಸಿಗುವುದು ಡೌಟ್ ಎನ್ನಲಾಗಿದೆ.
ಇಂಗ್ಲೆಂಡ್ ತಂಡದಲ್ಲಿ ಹೆಚ್ಚಿನ ಬದಲಾವಣೆಗಳನ್ನು ನಿರೀಕ್ಷಿಸಲಾಗಿಲ್ಲ. ಆದರೆ ಇಂಗ್ಲೆಂಡ್ ತಂಡದ ಬೌಲಿಂಗ್ ವಿಭಾಗವನ್ನು ಬಲಪಡಿಸಲು, ಅನುಭವಿ ಜೋಫ್ರಾ ಆರ್ಚರ್ ಅವರನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ. ಇದರಿಂದ ಆತಿಥೇಯ ತಂಡದ ಬೌಲಿಂಗ್ ವಿಭಾಗ ಮತ್ತುಷ್ಟು ಬಲಗೊಳ್ಳಲಿದೆ. ಇವರು ತಮ್ಮ ಕರಾರುವಾಕ್ ದಾಳಿಯಿಂದ ಎದುರಾಳಿಗಳನ್ನು ಕಾಡಬಲ್ಲರು. ಇನ್ನು ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಬೆನ್ನೆಲೆಬು ಜೋ ರೂಟ್ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿರಲಿದೆ.