ಮೂರನೇ ಟೆಸ್ಟ್ಗೆ ಯಾದವ್ ಮತ್ತು ಪೃಥ್ವಿ ಶಾ ಸೇರ್ಪಡೆಯಾಗಬಹುದು
ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯಕ್ಕೆ ಟೀಮ್ ಇಂಡಿಯಾಕ್ಕೆ ಹೊಸದಾಗಿ ಸೇರಿಕೊಂಡಿರುವ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಆಯ್ಕೆಯಾಗುವ ಸಾಧ್ಯತೆಯಿದೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಶ್ರೀಲಂಕಾ ಪ್ರವಾಸವನ್ನು ಕೈಗೊಂಡಿದ್ದ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಶ್ರೀಲಂಕಾ ಪ್ರವಾಸ ಮುಗಿದ ಬೆನ್ನಲ್ಲೇ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದರು. ಇಂಗ್ಲೆಂಡ್ಗೆ ಬಂದ ನಂತರ ಕ್ವಾರಂಟೈನ್ ನಿಯಮವನ್ನು ಪಾಲಿಸುತ್ತಿದ್ದ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಎರಡನೇ ಟೆಸ್ಟ್ ಪಂದ್ಯದ ವೇಳೆ ಕ್ವಾರಂಟೈನ್ ಮುಗಿಸಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಕ್ವಾರಂಟೈನ್ ನಿಯಮವನ್ನು ಮುಗಿಸಿರುವ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆದುಕೊಳ್ಳುವುದು ಖಚಿತ ಎನ್ನಲಾಗುತ್ತಿದೆ.
ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯ ರಹಾನೆ ಹೊರಬೀಳುವ ಸಾಧ್ಯತೆ!
ಒಂದುವೇಳೆ ನೂತನ ಆಟಗಾರರಾದ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡರೆ, ತಂಡದಿಂದ ಇಬ್ಬರು ಆಟಗಾರರನ್ನು ಹೊರಗಿಡಬೇಕಾಗುತ್ತದೆ. ಮೊದಲನೇ ಮತ್ತು ಎರಡನೇ ಟೆಸ್ಟ್ ಪಂದ್ಯಗಳಲ್ಲಿನ ಟೀಮ್ ಇಂಡಿಯಾ ಆಟಗಾರರ ಪ್ರದರ್ಶನವನ್ನು ಗಮನಿಸಿದರೆ ಬ್ಯಾಟಿಂಗ್ ವಿಭಾಗದಲ್ಲಿ ಮೂರನೇ ಪಂದ್ಯಕ್ಕೆ ಭಾರೀ ಬದಲಾವಣೆಯನ್ನು ಮಾಡುವ ಸಾಧ್ಯತೆಗಳಿವೆ. ಮೊದಲ ಮತ್ತು ಎರಡನೇ ಟೆಸ್ಟ್ ಪಂದ್ಯಗಳಲ್ಲಿ ಭಾರತದ ಕೆಲ ಬ್ಯಾಟ್ಸ್ಮನ್ಗಳು ತೀರಾ ಕಳಪೆ ಪ್ರದರ್ಶನವನ್ನು ನೀಡಿದ್ದು ಅಂಥವರನ್ನು ತಂಡದಿಂದ ಕೈಬಿಡುವ ಸಾಧ್ಯತೆಗಳಿವೆ. ಅದರಲ್ಲಿಯೂ ಪ್ರಮುಖವಾಗಿ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ್ ಪೂಜಾರ ಮೂರನೇ ಟೆಸ್ಟ್ ಪಂದ್ಯದಲ್ಲಿ ತಂಡದಿಂದ ಹೊರಗುಳಿಯುವ ಸಾಧ್ಯತೆಗಳು ಹೆಚ್ಚಿದ್ದು ಈ ಇಬ್ಬರ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿವೆ.
ರಹಾನೆ ತಂಡದಿಂದ ಹೊರಗುಳಿದರೆ ಉಪನಾಯಕನ ಪಟ್ಟ ಯಾರಿಗೆ ಸಿಗಬಹುದು?
ಕಳೆದ ಕೆಲ ಪಂದ್ಯಗಳಿಂದ ಟೀಮ್ ಇಂಡಿಯಾದ ಟೆಸ್ಟ್ ಕ್ರಿಕೆಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಸತತವಾಗಿ ಕಳಪೆ ಪ್ರದರ್ಶನ ನೀಡುತ್ತಿದ್ದು ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ತಂಡದಿಂದ ಹೊರಗುಳಿಯುವ ಸಾಧ್ಯತೆಗಳಿವೆ. ಹೀಗಾಗಿ ಅಜಿಂಕ್ಯ ರಹಾನೆ ಮೂರನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದೇ ಆದಲ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡಕ್ಕೆ ನೂತನ ಉಪ ನಾಯಕ ಸಿಗುವ ಸಾಧ್ಯತೆಗಳೂ ಇವೆ. ಈಗಾಗಲೇ ಕೆ ಎಲ್ ರಾಹುಲ್, ರೋಹಿತ್ ಶರ್ಮಾ ಮತ್ತು ರಿಷಭ್ ಪಂತ್ ಹೆಸರುಗಳು ಉಪನಾಯಕ ಸ್ಥಾನಕ್ಕೆ ಕೇಳಿಬರುತ್ತಿವೆ.