ಮುಂಬರುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತ ತಂಡವನ್ನು ಶುಕ್ರವಾರ, ಜನವರಿ 12ರಂದು ಪ್ರಕಟಿಸಿದೆ.
ಗಮನಾರ್ಹವಾಗಿ, ಅನುಭವಿ ವೇಗಿ ಮೊಹಮ್ಮದ್ ಶಮಿ ಮತ್ತು ವಿಕೆಟ್ಕೀಪರ್-ಬ್ಯಾಟರ್ ಇಶಾನ್ ಕಿಶನ್ 17 ಸದಸ್ಯರ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಅಲ್ಲದೆ, ರಣಜಿ ಪಂದ್ಯದಲ್ಲಿ ದ್ವಿಶತಕ ಬಾರಿಸಿದ ಹೊರತಾಗಿಯೂ ಚೇತೇಶ್ವರ್ ಪೂಜಾರ ಟೆಸ್ಟ್ ತಂಡಕ್ಕೆ ಪುನರಾಗಮನ ಮಾಡಿಲ್ಲ.

ಗಾಯದ ಕಾರಣ ಮೊಹಮ್ಮದ್ ಶಮಿ ದಕ್ಷಿಣ ಆಫ್ರಿಕಾ ಪ್ರವಾಸದಿಂದಲೂ ಹೊರಗುಳಿದಿದ್ದರು ಮತ್ತು ಅವರ ಚೇತರಿಕೆ ಮುಂದುವರೆದಿದೆ.
ಕೆಎಲ್ ರಾಹುಲ್, ಕೆಎಸ್ ಭರತ್ ಮತ್ತು ಧ್ರುವ್ ಜುರೆಲ್ ಅವರನ್ನು ಎರಡು ಟೆಸ್ಟ್ ಪಂದ್ಯಗಳಿಗೆ ನಿಗದಿಪಡಿಸಿದ ವಿಕೆಟ್ ಕೀಪರ್ಗಳಾಗಿ ಹೆಸರಿಲ್ಪಟ್ಟಿದ್ದಾರೆ.
ಉಳಿದಂತೆ ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಸ್ಪಿನ್ ಆಲ್ರೌಂಡರ್ಗಳಾದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಸ್ಥಾನ ಪಡೆದಿದ್ದಾರೆ.
ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದ ನಂತರ, ಅಕ್ಷರ್ ಪಟೇಲ್ ಮತ್ತು ಕುಲದೀಪ್ ಕೂಡ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ಆದರೆ ಹರಿಣ ಪಡೆ ವಿರುದ್ಧದ ಸರಣಿಯ ನಂತರ ಶಾರ್ದೂಲ್ ಠಾಕೂರ್ ಕೂಡ ಹೊರಗುಳಿದಿದ್ದಾರೆ.
ಮೊದಲ ಎರಡು ಟೆಸ್ಟ್ ಪಂದ್ಯಗಳು ಕ್ರಮವಾಗಿ ಹೈದರಾಬಾದ್ ಮತ್ತು ವಿಶಾಖಪಟ್ಟಣಂನಲ್ಲಿ ನಡೆಯಲಿವೆ. ಪಾದದ ಗಾಯದಿಂದಾಗಿ ಮೊಹಮ್ಮದ್ ಶಮಿ ಹೊರಗುಳಿದಿದ್ದು, ಇಶಾನ್ ಕಿಶನ್ ವಿಶ್ರಾಂತಿ ಕೇಳಿದ್ದರು. ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಿದರೆ, ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ.
"ಪುರುಷರ ಆಯ್ಕೆ ಸಮಿತಿಯು ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಿದೆ. ಭಾರತವು 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲು ಸಜ್ಜಾಗಿದೆ, ಅದರಲ್ಲಿ ಮೊದಲನೆಯದು ಜನವರಿ 25ರಿಂದ ಹೈದರಾಬಾದ್ನಲ್ಲಿ ನಡೆಯಲಿದೆ," ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.
ಪಿಟಿಐ ವರದಿಯ ಪ್ರಕಾರ, ಗುಜರಾತ್ ನಡುವಿನ ಕರ್ನಾಟಕದ ರಣಜಿ ಟ್ರೋಫಿ ಪಂದ್ಯದ ವೇಳೆ ಗಾಯಗೊಂಡಿರುವ ಪ್ರಸಿದ್ಧ್ ಕೃಷ್ಣ ಅವರು ಮುಂಬರುವ ಸರಣಿಯಲ್ಲಿ ಭಾಗವಹಿಸುವುದು ಅನುಮಾನವೆನಿಸಿದೆ.
ಇಶಾನ್ ಕಿಶನ್ ಅನುಪಸ್ಥಿತಿಯ ಕಾರಣ, ಮೂರನೇ ಆಯ್ಕೆ ಕೀಪರ್ ಆಗಿ ತಂಡದಲ್ಲಿ ಧ್ರುವ್ ಜುರೆಲ್ ಸೇರ್ಪಡೆಯಾಗಿದೆ. ಇಶಾನ್ ಕಿಶನ್ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹಿಂದೆ ಸರಿದಿದ್ದರು ಮತ್ತು ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಟಿ20 ಸರಣಿಗೆ ತಂಡದಲ್ಲಿ ಸೇರಿಸಲಾಗಿಲ್ಲ.
ಮೊದಲ ಟೆಸ್ಟ್ ಜನವರಿ 25-29 ರವರೆಗೆ ಹೈದರಾಬಾದ್ನಲ್ಲಿ ನಡೆಯಲಿದ್ದರೆ, ಎರಡನೇ ಪಂದ್ಯವನ್ನು ಫೆಬ್ರವರಿ 2-6ರ ನಡುವೆ ವಿಶಾಖಪಟ್ಟಣದಲ್ಲಿ ಆಯೋಜಿಸಲಿದೆ. ಉಳಿದ ಟೆಸ್ಟ್ ಪಂದ್ಯಗಳು ಕ್ರಮವಾಗಿ ರಾಜ್ಕೋಟ್, ರಾಂಚಿ ಮತ್ತು ಧರ್ಮಶಾಲಾದಲ್ಲಿ ನಡೆಯಲಿವೆ.
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.