
ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಈಗಾಗಲೇ ಮುಗಿದಿದ್ದು ಇಂಗ್ಲೆಂಡ್ ವಿರುದ್ಧ ಭಾರತ 1-0 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ.
ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಮೊದಲನೇ ಟೆಸ್ಟ್ ಪಂದ್ಯ ಮಳೆಯ ಹೊಡೆತಕ್ಕೆ ಸಿಲುಕಿ ಯಾವುದೇ ಫಲಿತಾಂಶವಿಲ್ಲದೆ ನೀರಸ ಡ್ರಾನಲ್ಲಿ ಅಂತ್ಯಗೊಂಡಿತು. ನಂತರ ಭಾರತ ಮತ್ತು ಇಂಗ್ಲೆಂಡ್ ನಡುವೆ ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಹೊಂದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 151 ರನ್ಗಳ ಭರ್ಜರಿ ಜಯ ಸಾಧಿಸುವುದರ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ತನ್ನ ಗೆಲುವಿನ ಖಾತೆಯನ್ನು ತೆರೆಯಿತು.
ಹೀಗೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲೆರಡು ಟೆಸ್ಟ್ ಪಂದ್ಯಗಳು ಮುಗಿದ ನಂತರ ಇದೀಗ ಎಲ್ಲರ ಚಿತ್ತ ಲೀಡ್ಸ್ ಕ್ರೀಡಾಂಗಣದಲ್ಲಿ ಆಗಸ್ಟ್ 25 ರಿಂದ ಆರಂಭವಾಗಲಿರುವ ಮೂರನೇ ಟೆಸ್ಟ್ ಮೇಲಿದೆ. 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳು ಮುಗಿದಿದ್ದರೂ ಸಹ ಗೆಲುವಿನ ಖಾತೆಯನ್ನೇ ತೆರೆಯದ ಇಂಗ್ಲೆಂಡ್ ತಂಡಕ್ಕೆ ಈ ಟೆಸ್ಟ್ ಪಂದ್ಯ ಬಹು ಮುಖ್ಯವಾಗಿದೆ. ಇನ್ನು ಭಾರತ ತಂಡಕ್ಕೂ ಸಹ ಲೀಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯ ಮುಖ್ಯವಾಗಿದ್ದು ಈ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿದರೆ ಸರಣಿ ಭಾರತದ ಕೈ ವಶವಾಗುವುದು ಬಹುತೇಕ ಖಚಿತವಾದಂತೆ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸುವ ಟೀಮ್ ಇಂಡಿಯಾ ತಂಡ ಹೇಗಿರಬೇಕು ಎಂಬುದರ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಈ ಕುರಿತು ಮಾಜಿ ಕ್ರಿಕೆಟಿಗರು ಮತ್ತು ಕ್ರೀಡಾ ಪಂಡಿತರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದ ಕುರಿತು ಇದೀಗ ಭಾರತದ ಮಾಜಿ ಕ್ರಿಕೆಟಿಗ ಫಾರೂಕ್ ಎಂಜಿನಿಯರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು ಅಜಿಂಕ್ಯ ರಹಾನೆ ಅಥವಾ ಚೇತೇಶ್ವರ್ ಪೂಜಾರಾ ಬದಲು ಸೂರ್ಯಕುಮಾರ್ ಯಾದವ್ ಅವರಿಗೆ ಅವಕಾಶವನ್ನು ನೀಡಬೇಕು ಎಂದಿದ್ದಾರೆ.
ಸೂರ್ಯಕುಮಾರ್ ಯಾದವ್ ನನ್ನ ನೆಚ್ಚಿನ ಕ್ರಿಕೆಟಿಗ ಎಂದು ಹೇಳಿಕೆಯನ್ನು ಆರಂಭಿಸಿದ ಫಾರೂಕ್ ಎಂಜಿನಿಯರ್ ಭಾರತ ಮತ್ತು ಇಂಗ್ಲೆಂಡ್ ನಡುವೆ ಲೀಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಅಜಿಂಕ್ಯ ರಹಾನೆ ಅಥವಾ ಚೇತೇಶ್ವರ ಪೂಜಾರರನ್ನು ತಂಡದಿಂದ ಹೊರಗಿಟ್ಟು ಯುವ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಅವರಿಗೆ ಅವಕಾಶವನ್ನು ನೀಡಬೇಕು ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ್ ಪೂಜಾರ ಇಬ್ಬರು ಸಹ ಉತ್ತಮ ಕ್ರಿಕೆಟಿಗರು ಆದರೆ ಸೂರ್ಯಕುಮಾರ್ ಯಾದವ್ ಪಂದ್ಯ ಗೆಲ್ಲಿಸುವಂತಹ ಇನ್ನಿಂಗ್ಸ್ ಆಡಬಲ್ಲ ಆಟಗಾರನಾಗಿದ್ದು ಅತಿವೇಗವಾಗಿ ಶತಕವನ್ನೂ ಬಾರಿಸಬಲ್ಲ ಆಟಗಾರನಾಗಿದ್ದಾರೆ ಮತ್ತು ಯಾದವ್ 70-80 ರನ್ಗಳನ್ನು ಲೀಲಾಜಾಲವಾಗಿ ಬಾರಿಸಬಲ್ಲರು. ಹೀಗಾಗಿ ಸೂರ್ಯಕುಮಾರ್ ಯಾದವ್ ಅವರಿಗೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಅವಕಾಶ ನೀಡುವುದು ಒಳ್ಳೆಯದು ಎಂಬ ಅಭಿಪ್ರಾಯವನ್ನು ಫಾರೂಕ್ ಇಂಜಿನಿಯರ್ ವ್ಯಕ್ತಪಡಿಸಿದ್ದಾರೆ.