ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಭಾನುವಾರ (ಜ.11) ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೊಸ ವರ್ಷದ ಮೊದಲ ಅಗ್ನಿ ಪರೀಕ್ಷೆಗೆ ಟೀಮ್ ಇಂಡಿಯಾ ಸಜ್ಜಾಗಿದೆ. ಶುಭಮನ್ ಗಿಲ್ ನಾಯಕರಾಗಿ ತವರಿನಲ್ಲಿ ಮೊದಲ ಏಕದಿನ ಸರಣಿ ಆಡುತ್ತಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದ ವೇಳೆ ರೋಹಿತ್ ಶರ್ಮಾ ಅವರ ಬದಲು ಶುಭಮನ್ ಗಿಲ್ ಅವರಿಗೆ ನಾಯಕತ್ವ ನೀಡಲಾಯಿತು. ಆ ಬಳಿಕ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ವೇಳೆ ಗಿಲ್, ಕುತ್ತಿಗೆಯ ಗಾಯಕ್ಕೆ ಒಳಗಾದರು. ಆ ಬಳಿಕ ಅವರು ಎರಡನೇ ಟೆಸ್ಟ್ ಹಾಗೂ ಏಕದಿನ ಸರಣಿಯಿಂದ ಹೊರ ನಡೆಯಬೇಕಾಯಿತು. ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ ಗಿಲ್ ಆಡಿದರೂ ಸಹ, ಉಪನಾಯಕರಾಗಿ ಕಾಣಿಸಿಕೊಂಡಿದ್ದರು. ಹೀಗಾಗಿ ಗಿಲ್ ಅವರಿಗೆ ಸೀಮಿತ ಓವರ್ಗಳ ಪಂದ್ಯದಲ್ಲಿ ಇದು ಮೊದಲ ಪಂದ್ಯವಾಗಿದೆ.

ಆಸ್ಟ್ರೇಲಿಯಾ ಪ್ರವಾಸದಲ್ಲಿ ನಡೆದ ಮೂರನೇ ಏಕದಿನ ಪಂದ್ಯದ ವೇಳೆ ಅಲೆಕ್ಸ್ ಕ್ಯಾರಿ ಅವರ ಕ್ಯಾಚ್ ಪಡೆಯುವ ವೇಳೆ ಗಾಯಕ್ಕೆ ತುತ್ತಾಗಿದ್ದ ಶ್ರೇಯಸ್ ಅಯ್ಯರ್ ಈಗ ಚೇತರಿಸಿಕೊಂಡಿದ್ದಾರೆ. ಅಲ್ಲದೆ ತಂಡಕ್ಕೆ ಮರಳಲು ಸಜ್ಜಾಗಿದ್ದಾರೆ. ಇವರು ಇದಕ್ಕೂ ಮೊದಲು ದೇಶೀಯ ವಿಜಯ್ ಹಜಾರೆ ಟೂರ್ನಿಯಲ್ಲಿ ಅಬ್ಬರದ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದರು. ಈಗ ಕೆಲವು ತಿಂಗಳುಗಳ ಬಳಿಕ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಲಿದ್ದಾರೆ.
ಟೀಮ್ ಇಂಡಿಯಾ ಈ ಮಹತ್ವದ ಪಂದ್ಯಕ್ಕಾಗಿ ಆರು ಜನ ಬೌಲರ್ಗಳನ್ನು ಟೀಮ್ ಇಂಡಿಯಾ ಕಣಕ್ಕೆ ಇಳಿಸಲಿದೆ. ಜಸ್ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ವೇಗದ ಬೌಲಿಂಗ್ ವಿಭಾಗವನ್ನು ಮೊಹಮ್ಮದ್ ಸಿರಾಜ್ ಮುನ್ನಡೆಸಲಿದ್ದಾರೆ. ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ ವೇಗದ ಬೌಲರ್ಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ನುರಿತ ಸ್ಪಿನ್ ಬೌಲರ್ ಆಗಿ ಕುಲ್ದೀಪ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಲ್ರೌಂಡರ್ ರೂಪದಲ್ಲಿ ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ ಸ್ಥಾನ ಪಡೆದಿದ್ದಾರೆ.
ಭಾರತ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಹೆನ್ರಿ ನಿಕೋಲ್ಸ್, ವಿಲ್ ಯಂಗ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಹೈ, ಮೈಕೆಲ್ ಬ್ರೇಸ್ವೆಲ್ (ನಾಯಕ), ಝಾಕ್ ಫೌಲ್ಕ್ಸ್, ಕ್ರಿಸ್ಟಿಯನ್ ಕ್ಲಾರ್ಕ್, ಕೈಲ್ ಜಾಮಿಸನ್, ಆದಿತ್ಯ ಅಶೋಕ್.