
ಆತಿಥೇಯ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯ ಗುರುವಾರ, ಫೆಬ್ರವರಿ 9ರಿಂದ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ (ವಿಸಿಎ)ನಲ್ಲಿ ನಡೆಯಲಿದೆ.
ಈಗಾಗಲೇ ಕಳೆದ ಒಂದು ವಾರದಿಂದ ಭಾರತ ತಂಡ ನಾಗ್ಪುರದಲ್ಲಿ ಅಭ್ಯಾಸ ನಡೆಸುತ್ತಿದ್ದರೆ, ಆಸ್ಟ್ರೇಲಿಯಾ ತಂಡ ಬೆಂಗಳೂರಿನ ಆಲೂರಿನಲ್ಲಿ ಅಭ್ಯಾಸ ನಡೆಸಿ, ಇದೀಗ ನಾಗ್ಪುರ ತಲುಪಿದೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲು ತಂಡದ ಆಯ್ಕೆಯ ಬಗ್ಗೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮಾತನಾಡಿದರು ಮತ್ತು ಶುಭ್ಮನ್ ಗಿಲ್ ಮತ್ತು ಸೂರ್ಯಕುಮಾರ್ ಯಾದವ್ ಆಯ್ಕೆಯ ಗೊಂದಲದ ಬಗ್ಗೆ ಸ್ಪಷ್ಟನೆ ನೀಡಿದರು.
ಬೆನ್ನು ನೋವಿನ ಗಾಯದಿಂದಾಗಿ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿರುವ ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ಶುಭ್ಮನ್ ಗಿಲ್ ಮತ್ತು ಸೂರ್ಯಕುಮಾರ್ ಯಾದವ್ ಭಾರತ ತಂಡದ ಮಧ್ಯಮ ಕ್ರಮಾಂಕದಲ್ಲಿ ಪ್ರಮುಖ ಪಾತ್ರವನ್ನು ವಹಿಸಲಿದ್ದಾರೆ.

ಶುಭ್ಮನ್ ಗಿಲ್ ಮತ್ತು ಸೂರ್ಯಕುಮಾರ್ ಯಾದವ್ ವೈಟ್ಬಾಲ್ ಕ್ರಿಕೆಟ್ನಲ್ಲಿ ಅತ್ಯುತ್ತಮ ಫಾರ್ಮ್ನಲ್ಲಿದ್ದಾರೆ. ವಿರಾಟ್ ಕೊಹ್ಲಿ ನಂತರ ಭಾರತ ತಂಡದ ಮುಂದಿನ ಎಲ್ಲ ಮಾದರಿಯ ಆಟಗಾರನಾಗಬಹುದೆಂದು ಶುಭ್ಮನ್ ಗಿಲ್ ತಮ್ಮ ಪ್ರದರ್ಶನದ ಮೂಲಕ ಸಾಬೀತುಪಡಿಸಿದ್ದಾರೆ.
ನಾಗ್ಪುರದಲ್ಲಿ ನಡೆದ ಪಂದ್ಯದ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಯಕ ರೋಹಿತ್ ಶರ್ಮಾ, ಇಬ್ಬರೂ ಆಟಗಾರರು ಭಾರತ ತಂಡಕ್ಕೆ ಯಾವ ರೀತಿ ಪ್ರಭಾವ ಬೀರಲಿದ್ದಾರೆ ಎಂಬುದರ ಬಗ್ಗೆ ಮಾತನಾಡಿದರು. ಇದೇ ವೇಳೆ, ಮೊದಲ ಪಂದ್ಯದಲ್ಲಿ ಯಾವ ಆಟಗಾರನನ್ನು ಆಡಿಸಬೇಕೆಂದು ತಂಡದ ಮ್ಯಾನೇಜ್ಮೆಂಟ್ ಇನ್ನೂ ನಿರ್ಧರಿಸಿಲ್ಲ ಎಂದು ತಿಳಿಸಿದರು.

ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು ತಪ್ಪಿಸಿಕೊಳ್ಳುತ್ತಿರುವವರಲ್ಲಿ ರಿಷಭ್ ಪಂತ್ ಕೂಡ ಒಬ್ಬರು. ಕಳೆದ ವರ್ಷದಿಂದ ಟೆಸ್ಟ್ ಸ್ವರೂಪದಲ್ಲಿ ಭಾರತ ತಂಡಕ್ಕಾಗಿ ಉತ್ತಮ ಪ್ರದರ್ಶನ ನೀಡಿದ್ದ ಎಡಗೈ ಬ್ಯಾಟ್ಸ್ಮನ್, ಈ ಸರಣಿಯಲ್ಲಿ ಮಿಂಚುವ ವಿಶ್ವಾಸದಲ್ಲಿದ್ದರು. ಆದರೆ, ಅಪಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದು, ಶೀಘ್ರದಲ್ಲೇ ಮೈದಾನಕ್ಕೆ ಮರಳುವ ಸೂಚನೆ ನೀಡಿದ್ದಾರೆ.
"ನಾವು ರಿಷಭ್ ಪಂತ್ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಆದರೆ ಅವರ ಪಾತ್ರವನ್ನು ತುಂಬಲು ನಮ್ಮಲ್ಲಿ ಆಟಗಾರರಿದ್ದಾರೆ. ನಾವು ನಮ್ಮ ಬ್ಯಾಟರ್ಗಳೊಂದಿಗೆ ಎದುರಾಳಿಗಳ ಯೋಜನೆ ಬಗ್ಗೆ ಉತ್ತಮ ಮಾತುಕತೆ ನಡೆಸಿದ್ದೇವೆ ಮತ್ತು ಮೊದಲ ಪಂದ್ಯದ ಮೊದಲ ದಿನದಿಂದಲೇ ನಾವು ಅವುಗಳನ್ನು ಕಾರ್ಯಗತಗೊಳಿಸುತ್ತೇವೆ," ಎಂದು ನಾಯಕ ರೋಹಿತ್ ಶರ್ಮಾ ತಿಳಿಸಿದರು.