
ಹ್ಯಾಮಿಲ್ಟನ್ನ ಸೆಡನ್ ಪಾರ್ಕ್ನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಆತಿಥೇಯ ನ್ಯೂಜಿಲೆಂಡ್ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.
ಭಾರತ ತಂಡ 12.5 ಓವರ್ಗಳಲ್ಲಿ 1 ವಿಕೆಟ್ಗೆ 89 ರನ್ ಗಳಿಸಿದ್ದಾಗ ಎರಡನೇ ಬಾರಿ ಮಳೆ ಆಟಕ್ಕೆ ಅಡ್ಡಿಪಡಿಸಿದಾಗ ಅಂತಿಮವಾಗಿ ಪಂದ್ಯವನ್ನು ರದ್ದುಗೊಳಿಸಿತು. ಮೊದಲ ಬಾರಿಗೆ ಮಳೆಯಿಂದಾಗಿ ಪಂದ್ಯ ನಿಂತಾಗ ಪ್ರತಿ ತಂಡಕ್ಕೆ 29 ಓವರ್ಗಳಿಗೆ ಇಳಿಸಲಾಗಿತ್ತು.
ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್ ಆಯ್ದುಕೊಂಡರು. ಭಾರತದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ಶಿಖರ್ ಧವನ್ 3 ರನ್ ಗಳಿಸಿ ಔಟಾಗಿದ್ದರು. ಶುಭಮನ್ ಗಿಲ್ 45 ರನ್ ಮತ್ತು ಸೂರ್ಯಕುಮಾರ್ ಯಾದವ್ 34 ರನ್ ಗಳಿಸಿ ಕ್ರೀಸ್ನಲ್ಲಿದ್ದರು.
ಎರಡನೇ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿತ್ತು. ಸಂಜು ಸ್ಯಾಮ್ಸನ್ ಮತ್ತು ಶಾರ್ದೂಲ್ ಠಾಕೂರ್ ಬದಲಿಗೆ ದೀಪಕ್ ಹೂಡಾ ಮತ್ತು ದೀಪಕ್ ಚಹಾರ್ ಅವರಿಗೆ ಅವಕಾಶ ನೀಡಿತ್ತು. ಇನ್ನು ಆತಿಥೇಯ ನ್ಯೂಜಿಲೆಂಡ್ ತಂಡವು ಒಂದು ಬದಲಾವಣೆ ಮಾಡಿದ್ದರು. ಆಡಮ್ ಮಿಲ್ನೆ ಬದಲಿಗೆ ಮೈಕೆಲ್ ಬ್ರೇಸ್ವೆಲ್ ಅವರನ್ನು ಆಡಿಸಲಾಗಿತ್ತು.