
ಶುಕ್ರವಾರ, ಜನವರಿ 27ರಂದು ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಎಂಎಸ್ ಧೋನಿ ತವರೂರು ರಾಂಚಿಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ಭಾರತ ತಂಡ ಪ್ರವಾಸಿ ಕಿವೀಸ್ ವಿರುದ್ಧ 3-0 ಅಂತರದಲ್ಲಿ ಏಕದಿನ ಸರಣಿ ವಶಪಡಿಸಿಕೊಂಡಿದೆ.
ಇದೀಗ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯಕ್ಕೂ ಮುನ್ನ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರು ಭಾರತ ತಂಡದ ಡ್ರೆಸ್ಸಿಂಗ್ ಕೋಣೆಗೆ ದಿಢೀರ್ ಭೇಟಿ ನೀಡಿ, ಭಾರತೀಯ ಆಟಗಾರರ ಜೊತೆ ಕುಶಲೋಪರಿ ನಡೆಸಿದರು.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗುರುವಾರ ಟ್ವಿಟ್ಟರ್ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ, ಎಂಎಸ್ ಧೋನಿಯು ನಾಯಕ ಹಾರ್ದಿಕ್ ಪಾಂಡ್ಯ, ಶುಭ್ಮನ್ ಗಿಲ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಭೇಟಿಯಾಗಿರುವುದನ್ನು ಕಾಣಬಹುದು.

ಶುಕ್ರವಾರ ರಾಂಚಿಯಲ್ಲಿ ಆರಂಭವಾಗಲಿರುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡವನ್ನು ಎದುರಿಸುತ್ತಿರುವ ಭಾರತ ತಂಡ, ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ಆತ್ಮವಿಶ್ವಾಸ ಪಡೆಯಲು ಪ್ರಯತ್ನಿಸಲಿದೆ.
ಜನವರಿ ಆರಂಭದಲ್ಲಿ ಶ್ರೀಲಂಕಾ ವಿರುದ್ಧ 2-1 ಸರಣಿಯನ್ನು ಗೆದ್ದ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಿದ್ದರು. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲೂ ಹಾರ್ದಿಕ್ ಪಾಂಡ್ಯ ಅನುಭವಿ ಹಾಗೂ ಯುವ ಆಟಗಾರರಿಂದ ಕೂಡಿದ ಭಾರತ ತಂಡದ ನಾಯಕತ್ವ ವಹಿಸಲಿದ್ದಾರೆ.
ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಮತ್ತು ಕುಲದೀಪ್ ಯಾದವ್ ಅವರು ಟಿ20 ಸರಣಿಯಲ್ಲಿ ಆಡಲಿದ್ದಾರೆ.
ಇದೇ ವೇಳೆ ರಾಂಚಿಯಲ್ಲಿ ನಡೆದ ಪಂದ್ಯ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮಾತನಾಡಿ, ಶುಭ್ಮನ್ ಗಿಲ್ ಈಗಾಗಲೇ ಟಿ20 ತಂಡದ ಭಾಗವಾಗಿರುವುದರಿಂದ ಪೃಥ್ವಿ ಶಾ ಅವರು ಅವಕಾಶಕ್ಕಾಗಿ ಕಾಯಬೇಕಾಗುತ್ತದೆ ಎಂದು ಹೇಳಿದರು.
ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗಾಗಿ ಭಾರತ ತಂಡದಲ್ಲಿ ಪೃಥ್ವಿ ಶಾ ಆಯ್ಕೆಯಾಗಿದ್ದರು. ಆದರೆ, ಜುಲೈ 2021ರಿಂದ ಟೀಂ ಇಂಡಿಯಾ ಪರ ಯಾವುದೇ ಪಂದ್ಯ ಆಡಿಲ್ಲ ಎಂಬುದು ಗಮನಿಸಬೇಕಾದ ಸಂಗತಿ.
ರಣಜಿ ಟ್ರೋಫಿಯಲ್ಲಿ ಅಸ್ಸಾಂ ವಿರುದ್ಧ ದಾಖಲೆಯ 379 ರನ್ ಸೇರಿದಂತೆ ದೇಶೀಯ ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ, ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದ ನಂತರ ಭರವಸೆಯ ಬ್ಯಾಟರ್ ಪೃಥ್ವಿ ಶಾ ಅವಕಾಶ ಗಳಿಸಬಹುದು.