Ind Vs Sa T20: ಮೂರನೇ ಟಿ20 ಪಂದ್ಯದಲ್ಲಿ ಕೊಹ್ಲಿ, ರಾಹುಲ್ಗೆ ವಿಶ್ರಾಂತಿ, ಯಾರಿಗೆ ಸಿಗುತ್ತೆ ಅವಕಾಶ?

ಟಿ20 ವಿಶ್ವಕಪ್ಗೆ ತೆರಳುವ ಮೊದಲು ಟೀಂ ಇಂಡಿಯಾ ಕೊನೆಯ ಟಿ20 ಪಂದ್ಯವನ್ನಾಡಲು ಸಜ್ಜಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದಿರುವ ಕೊನೆಯ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದೆ.
ಈಗಾಗಲೇ ಸರಣಿಯನ್ನು ಗೆದ್ದಿರುವ ಟೀಂ ಇಂಡಿಯಾ ಮೂರನೇ ಟಿ20 ಪಂದ್ಯದಲ್ಲಿ ಹಲವು ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಈಗಾಗಲೇ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ಗೆ ಮೂರನೇ ಟಿ20 ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ.
ಅಕ್ಟೋಬರ್ 6 ರಂದು ಟಿ20 ವಿಶ್ವಕಪ್ನ 15 ಸದಸ್ಯರ ತಂಡ ಆಸ್ಟ್ರೇಲಿಯಾಗೆ ತೆರಳಲಿದೆ. ಆದ್ದರಿಂದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಮೂರನೇ ಟಿ20 ಪಂದ್ಯದಲ್ಲಿ ಹಲವರಿಗೆ ಅವಕಾಶ ಸಿಗುವ ಸಾಧ್ಯತೆಗಳಿವೆ.
ನಾಯಕ ರೋಹಿತ್ ಶರ್ಮಾ ಕೊನೆಯ ಪಂದ್ಯದಲ್ಲಿ ಯಾವ ಸಂಯೋಜನೆಯೊಂದಿಗೆ ಆಡಲಿದ್ದಾರೆ ಎನ್ನುವ ಕುತೂಹಲ ಇದೆ. ರಾಹುಲ್ ಮತ್ತು ವಿರಾಟ್ ಕೊಹ್ಲಿ ಬದಲಿಗೆ ಯಾರಿಗೆ ಅವಕಾಶ ಸಿಗುತ್ತೆ ಎನ್ನುವ ಚರ್ಚೆ ಶುರುವಾಗಿದೆ. ಕೆಎಲ್ ರಾಹುಲ್ ಬದಲಿಗೆ ನಾಯಕನ ಜೊತೆ ಇನ್ನಿಂಗ್ಸ್ ಯಾರು ಆರಂಭಿಸುತ್ತಾರೆ ಎನ್ನುವ ಪ್ರಶ್ನೆ ಎದುರಾಗಿದೆ.

ರೋಹಿತ್ ಶರ್ಮಾ ಜೊತೆ ಶ್ರೇಯಸ್ ಅಯ್ಯರ್ ಓಪನಿಂಗ್
ರಾಹುಲ್ಗೆ ವಿಶ್ರಾಂತಿ ನೀಡಿರುವುದರಿಂದ ಮೂರನೇ ಟಿ20 ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಜೊತೆ ಶ್ರೇಯಸ್ ಅಯ್ಯರ್ ಇನ್ನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತವಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಉಪನಾಯಕನಾಗಿ ಆಯ್ಕೆಯಾಗಿರುವ ಶ್ರೇಯಸ್ ಅಯ್ಯರ್, ಅದಕ್ಕೂ ಮುಂಚೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುವ ಅವಕಾಶ ಪಡೆಯಲಿದ್ದಾರೆ.
ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ಸ್ಟ್ಯಾಂಡ್ ಬೈ ಆಟಗಾರನಾಗಿರುವ ಅಯ್ಯರ್, ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಮುಗಿದ ಬಳಿಕ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಲಿದ್ದಾರೆ.
ಮಹಿಳಾ ಏಷ್ಯಾ ಕಪ್ 2022: ಮಳೆ-ಬಾಧಿತ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಭಾರತಕ್ಕೆ ಗೆಲುವು

ರಿಷಬ್ ಪಂತ್ಗೆ ಬ್ಯಾಟಿಂಗ್ ಮಾಡುವ ಅವಕಾಶ
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ರಿಷಬ್ ಪಂತ್ ಆಡುತ್ತಿದ್ದರೂ ಅವರಿಗೆ ಎರಡೂ ಪಂದ್ಯಗಳಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ. ಮೊರನೇ ಟಿ20 ಪಂದ್ಯದಲ್ಲಿ ರಿಷಬ್ ಪಂತ್ಗೆ ಬ್ಯಾಟಿಂಗ್ನಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ.
ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿರುವುದರಿಂದ ಸೂರ್ಯಕುಮಾರ್ ಯಾದವ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದ್ದು, ಪಂತ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ಸಿಗಬಹುದಾಗಿದೆ.

ಮೊಹಮ್ಮದ್ ಸಿರಾಜ್ಗೆ ಆಡುವ ಬಳಗದಲ್ಲಿ ಅವಕಾಶ
ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಎರಡನೇ ಟಿ20 ಪಂದ್ಯದಲ್ಲಿ ಭಾರತದ ಬೌಲರ್ ಗಳು ಹೆಚ್ಚಿನ ರನ್ ಬಿಟ್ಟುಕೊಟ್ಟಿದ್ದರಿಂದ, ರೋಹಿತ್ ಶರ್ಮಾ ಸಿರಾಜ್ಗೆ ಅವಕಾಶ ನೀಡುವ ಸಾಧ್ಯತೆ ಇದೆ.
ಬೌಲಿಂಗ್ ವಿಭಾಗದ್ದೇ ಭಾರತಕ್ಕೆ ಹೆಚ್ಚಿನ ಚಿಂತೆಯಾಗಿದೆ. ಬುಮ್ರಾ ಗಾಯದಿಂದ ಯಾವಾಗ ಚೇತರಿಸಿಕೊಳ್ಳುತ್ತಾರೆ ಎಂದು ತಿಳಿಯದೇ ಇರುವುದರಿಂದ, ಭಾರತ ಬದಲೀ ಆಟಗಾರನನ್ನು ಸಿದ್ಧಗೊಳಿಸಬೇಕಿದೆ.

ಮೂರನೇ ಟಿ20ಯಲ್ಲಿ ಸಂಭಾವ್ಯ ಆಡುವ ಬಳಗ
ರೋಹಿತ್ ಶರ್ಮಾ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್ / ಯುಜುವೇಂದ್ರ ಚಹಾಲ್
ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯ ಕೊನೆಯ ಪಂದ್ಯ ಅಕ್ಟೋಬರ್ 4ರಂದು ಇಂದೋರ್ ನಲ್ಲಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications