ಇದೇ ಜುಲೈ ಕೊನೆಯ ವಾರದಲ್ಲಿ ಆರಂಭವಾಗಲಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿಪಕ್ಷೀಯ ವೈಟ್ಬಾಲ್ ಸರಣಿಯು ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ ಮಾರ್ಗದರ್ಶನದ ಅಡಿಯಲ್ಲಿ ಹೊಸ ಯುಗಕ್ಕೆ ನಾಂದಿ ಹಾಡಲಿದೆ.
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಅವರಂತಹ ಅನುಭವಿ ಆಟಗಾರರು ಈಗಾಗಲೇ ಟಿ20 ಕ್ರಿಕೆಟ್ನಿಂದ ನಿವೃತ್ತರಾಗಿದ್ದಾರೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿಯೂ ವಿಶ್ರಾಂತಿ ಪಡೆಯಲಿದ್ದಾರೆ. ಹೀಗಾಗಿ ಭಾರತ ತಂಡವು ಸಾಕಷ್ಟು ತಾಜಾ ಆಟಗಾರರನ್ನು ಒಳಗೊಳ್ಳಲಿದೆ.

ಶ್ರೀಲಂಕಾ ವಿರುದ್ಧ ಭಾರತ ತಂಡವು ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಏಕದಿನ ಸರಣಿಯು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ಏಕೆಂದರೆ ಈ ಸರಣಿಯು 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತದ ತಯಾರಿಯ ಪ್ರಾರಂಭವನ್ನು ಗುರುತಿಸುತ್ತದೆ ಮತ್ತು 2027ರ ಏಕದಿನ ವಿಶ್ವಕಪ್ ಅಂತಿಮ ಗುರಿಯಾಗಿರಲಿದೆ.
ಪಿಟಿಐ ವರದಿಯ ಪ್ರಕಾರ, ಕಳೆದ ತಿಂಗಳು ಭಾರತ ತಂಡದ ಟಿ20 ವಿಶ್ವಕಪ್ ವಿಜಯದ ಹೀರೋಗಳಲ್ಲಿ ಒಬ್ಬರಾದ ಹಾರ್ದಿಕ್ ಪಾಂಡ್ಯ 'ವೈಯಕ್ತಿಕ ಕಾರಣಗಳಿಂದ' ಆಗಸ್ಟ್ನಲ್ಲಿ ನಿಗದಿಯಾಗಿರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.
ಹಾರ್ದಿಕ್ ಪಾಂಡ್ಯ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಿಂದ ರಜೆ ಕೇಳಿದ್ದಾರೆ ಮತ್ತು ಈ ಬಗ್ಗೆ ಈಗಾಗಲೇ ಖಾಯಂ ನಾಯಕ ರೋಹಿತ್ ಶರ್ಮಾಗೆ ತಿಳಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ದೃಢಪಡಿಸಿವೆ.

"ಏಕದಿನ ಸರಣಿಯಿಂದ ವಿಶ್ರಾಂತಿ ತೀರಾ ವೈಯಕ್ತಿಕ ಕಾರಣಗಳಿಗಾಗಿ ಮತ್ತು ಮಾಧ್ಯಮಗಳಲ್ಲಿ ಹರಿದಾಡುತ್ತಿರುವಂತೆ ಹಾರ್ದಿಕ್ ಅವರಿಗೆ ಯಾವುದೇ ಫಿಟ್ನೆಸ್ ಸಮಸ್ಯೆ ಇಲ್ಲ," ಎಂದು ಬಿಸಿಸಿಐ ಅಧಿಕಾರಿ ಹೇಳಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ಕಳೆದ ಏಕದಿನ ಸರಣಿಯಲ್ಲಿ ನಾಯಕತ್ವ ವಹಿಸಿದ್ದ ಕೆಎಲ್ ರಾಹುಲ್ ಮತ್ತು ಇತ್ತೀಚಿಗೆ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಶುಭ್ಮನ್ ಗಿಲ್ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯಗಳಿಗಾಗಿ ನಾಯಕತ್ವದ ಪಾತ್ರಕ್ಕಾಗಿ ಸ್ಪರ್ಧೆಯಲ್ಲಿದ್ದಾರೆ.
ಇದೇ ವೇಳೆ, ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರು 2026ರ ವಿಶ್ವಕಪ್ವರೆಗೆ ಭಾರತ ಟಿ20 ತಂಡದ ನಾಯಕರಾಗಲು ಡಾರ್ಕ್ ಹಾರ್ಸ್ ಆಗಿ ಹೊರಹೊಮ್ಮಿದ್ದಾರೆ. ಅಗ್ರ ಸ್ಪರ್ಧಿ ಹಾರ್ದಿಕ್ ಪಾಂಡ್ಯ ಅವರನ್ನು ಹಿಮ್ಮೆಟ್ಟಿಸಬಹುದು. ಹಾರ್ದಿಕ್ ಈ ತಿಂಗಳು ಶ್ರೀಲಂಕಾ ವಿರುದ್ಧ ಟಿ20 ಸ್ವರೂಪದ ಪಂದ್ಯಗಳಿಗೆ ಲಭ್ಯವಾಗುವಂತೆ ಮಾಡಿದ್ದಾರೆ.
ಆದರೆ ಸೂರ್ಯಕುಮಾರ್ ಯಾದವ್, ಕಳೆದ ವರ್ಷ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಎಂಟು ಟಿ20 ಪಂದ್ಯಗಳಲ್ಲಿ ಭಾರತದ ನಾಯಕತ್ವ ವಹಿಸಿದ್ದರು. ಹೀಗಾಗಿ ಸೂರ್ಯಕುಮಾರ್ ಯಾದವ್ ಅವರು ಹೊಸ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರ ಆದ್ಯತೆಯ ಆಯ್ಕೆಯಾಗಿದ್ದಾರೆ.
ಗೌತಮ್ ಗಂಭೀರ್ ಮತ್ತು ಅಜಿತ್ ಅಗರ್ಕರ್ ಇಬ್ಬರೂ ಹಾರ್ದಿಕ್ ಪಾಂಡ್ಯ ಅವರೊಂದಿಗೆ ಈ ಯೋಜನೆಯ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ದೀರ್ಘಾವಧಿಯ ಆಯ್ಕೆಯನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ಅವರಿಗೆ ವಿವರಿಸಿದ್ದಾರೆ.
ಕಳೆದ ತಿಂಗಳು ವೆಸ್ಟ್ ಇಂಡೀಸ್ನಲ್ಲಿ ನಡೆದ ಭಾರತ ವಿಶ್ವಕಪ್ ಗೆಲುವಿನ ನಂತರ ರೋಹಿತ್ ಶರ್ಮಾ ಟಿ20 ಸ್ವರೂಪದಲ್ಲಿ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳಿದ ನಂತರ, ಟಿ20 ನಾಯಕತ್ವದ ಪಾತ್ರವು ಖಾಲಿಯಾಗಿದೆ.