
ಶ್ರೀಲಂಕಾ ವಿರುದ್ಧದ ಸರಣಿಯಿಂದ ಸಂಜು ಸ್ಯಾಮ್ಸನ್ ಹೊರಬಿದ್ದಿದ್ದಾರೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಟಿ20 ಪಂದ್ಯದಲ್ಲಿ ಮೊಣಕಾಲಿಗೆ ಗಾಯಗೊಂಡ ಬಳಿಕ ಅವರು ಸರಣಿಯಿಂದ ಹೊರಬಿದ್ದರು.
ಸಂಜು ಸ್ಯಾಮ್ಸನ್ ಅನುಪಸ್ಥಿತಿಯಲ್ಲಿ ರಾಹುಲ್ ತ್ರಿಪಾಠಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಗುರುವಾರ ನಡೆಯಲಿರುವ 2ನೇ ಟಿ20 ಪಂದ್ಯದಲ್ಲಿ ಅವರು ಚೊಚ್ಚಲ ಪಂದ್ಯವನ್ನು ಆಡಲಿದ್ದಾರೆ. ಪುಣೆಯ ಎಂಸಿಎ ಅಂಗಳದಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತ ತಂಡದಲ್ಲಿ ಕೆಲವು ಬದಲಾವಣೆಯಾಗುವ ಸಾಧ್ಯತೆ ಇದೆ.
ಅರ್ಷದೀಪ್ ಸಿಂಗ್ ಕೂಡ ಆಯ್ಕೆ ಲಭ್ಯವಿದ್ದು ತಂಡಕ್ಕೆ ಮರಳುವ ಸಾಧ್ಯತೆ ಇದೆ. ಪುಣೆ ಸ್ಪಿನ್ ಬೌಲಿಂಗ್ಗೆ ನೆರವಾಗುವುದರಿಂದ ಮತ್ತೊಬ್ಬ ಸ್ಪಿನ್ನರ್ ತಂಡಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ.
ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಇಬ್ಬರು ಸ್ಪಿನ್ನರ್ ಜೊತೆ ಕಣಕ್ಕಿಳಿದಿತ್ತು. ಎರಡನೇ ಪಂದ್ಯದಲ್ಲಿ ಹರ್ಷಲ್ ಪಟೇಲ್ ಹೊರಗುಳಿಯುವ ಸಾಧ್ಯತೆ ಇದ್ದು, ವಾಷಿಂಗ್ಟನ್ ಸುಂದರ್ ತಂಡಕ್ಕೆ ಸೇರುವ ಸಾಧ್ಯತೆ ಇದೆ.
ಮೊದಲನೇ ಟಿ20 ಪಂದ್ಯದ ವೇಳೆ ಸೆಳೆತ ಮತ್ತು ನಿಗ್ಗಲ್ಸ್ನಿಂದ ಬಳಲಿದ ಹಾರ್ದಿಕ್ ಪಾಂಡ್ಯ ಎರಡನೇ ಪಂದ್ಯದಲ್ಲಿ ಬೌಲಿಂಗ್ ಮಾಡದಿದ್ದರೆ, ಹರ್ಷಲ್ ಪಟೇಲ್ ತಂಡದಲ್ಲಿ ಉಳಿಯಲಿದ್ದಾರೆ. ಒಂದು ವೇಳೆ ಪಾಂಡ್ಯ ಬೌಲಿಂಗ್ ಮಾಡಲು ನಿರ್ಧರಿಸಿದರೆ, ಪಟೇಲ್ ಹೊರಗುಳಿಯಲಿದ್ದು, ಹೆಚ್ಚುವರಿ ಸ್ಪಿನ್ನರ್ ಆಗಿ ವಾಷಿಂಗ್ಟನ್ ಸುಂದರ್ ಆಡುವ ಬಳಗದಲ್ಲಿ ಸ್ಥಾನ ಪಡೆಯಲಿದ್ದಾರೆ.

ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ
ಸಂಜು ಸ್ಯಾಮ್ಸನ್ ತಂಡದಿಂದ ಹೊರಗುಳಿಯಲಿರುವ ಕಾರಣ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಸೂರ್ಯಕುಮಾರ್ ಯಾದವ್ ನಾಲ್ಕನೇ ಸ್ಥಾನದಲ್ಲಿ ಮುಂದುವರೆಯಲಿದ್ದು, ರಾಹುಲ್ ತ್ರಿಪಾಠಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆ ಇದೆ. ವಾಷಿಂಗ್ಟನ್ ಸುಂದರ್ ತಂಡದಲ್ಲಿ ಸ್ಥಾನ ಪಡೆದರೆ ದೀಪಕ್ ಹೂಡಾ ನಾಲ್ಕನೇ ಕ್ರಮಾಂಕಕ್ಕೆ ಬಡ್ತಿ ಪಡೆಯುವ ಸಾಧ್ಯತೆ ಇದೆ.
ಈ ರೀತಿಯಾದರೆ, ಹಾರ್ದಿಕ್ ಪಾಂಡ್ಯ 5ನೇ ಸ್ಥಾನದಲ್ಲಿ, ವಾಷಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್ 6 ಮತ್ತು 7ನೇ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಹರ್ಷಲ್ ಪಟೇಲ್ ಬದಲಿಗೆ ಅರ್ಷದೀಪ್ ಸಿಂಗ್ ಬಂದರೆ, ರಾಹುಲ್ ತ್ರಿಪಾಠಿ ಬೆಂಚ್ ಕಾಯಲಿದ್ದು ವಾಷಿಂಗ್ಟನ್ ಸುಂದರ್ ಗೆ ಅವಕಾಶ ಸಿಗುವ ಸಾಧ್ಯತೆ ಇದೆ.
ಮೊದಲ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಉಮ್ರಾನ್ ಮಲಿಕ್ ಮತ್ತು ಶಿವಂ ಮಾವಿ ಆಡುವ ಬಳಗದಲ್ಲಿ ಮುಂದುವರೆಯಲಿದ್ದಾರೆ. ಮೊದಲನೇ ಪಂದ್ಯದಲ್ಲಿ ವಿಫಲವಾಗಿದ್ದರೂ ಶುಭಮನ್ ಗಿಲ್ ಮತ್ತೊಂದು ಅವಕಾಶ ಪಡೆಯಲಿದ್ದಾರೆ.

ಭಾರತ ತಂಡದ ಸಂಭಾವ್ಯ ಆಡುವ ಬಳಗ
ಇಶಾನ್ ಕಿಶನ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ / ವಾಷಿಂಗ್ಟನ್ ಸುಂದರ್, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡಾ, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್ / ಅರ್ಷದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜುವೇಂದ್ರ ಚಾಹಲ್.