
ಟೀಮ್ ಇಂಡಿಯಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ 16 ರನ್ಗಳ ಅಂತರದ ರೋಚಕ ಗೆಲುವು ಸಾಧಿಸಿದೆ. ಈ ಗೆಲುವಿನ ಬಳಿಕ ಶ್ರೀಲಂಕಾ ನಾಯಕ ದಸುನ್ ಶನಕ ಪ್ರತಿಕ್ರಿಯಿಸಿದ್ದು ಲಂಕಾ ಆರಂಭಿಕ ಆಟಗಾರರ ಪ್ರದರ್ಶನವನ್ನು ಕೊಂಡಾಡಿದ್ದಾರೆ. ಆರಂಭಿಕ ಆಟಗಾರರು ಪಂದ್ಯಕ್ಕೆ ಉತ್ತಮ ಅಡಿಪಾಯ ಒದಗಿಸಿದರು ಎಂದಿದ್ದಾರೆ ಲಂಕಾ ನಾಯಕ.
ಕುಸಾಲ್ ಮೆಂಡಿಸ್ ಹಾಗೂ ಫಾತುಮ್ ನಿಸ್ಸಂಕ ಜೋಡಿ ಈ ಪಂದ್ಯದಲ್ಲಿ ಮೊದಲ ವಿಕೆಟ್ಕೆ ಕೇವಲ 8.2 ಓವರ್ಗಳಲ್ಲಿ 80 ರನ್ ಸೇರಿಸಿ ಸ್ಪೋಟಕ ಆರಂಭ ಒದಗಿಸಿದ್ದರು. ಮಧ್ಯಮ ಓವರ್ಗಳಲ್ಲಿ ಭಾರತೀಯ ಬೌಲರ್ಗಳು ಕಮ್ಬ್ಯಾಕ್ ಮಾಡಿದರಾದರೂ ಡೆತ್ ಓವರ್ನಲ್ಲಿ ಟೀಮ್ ಇಂಡಿಯಾ ವಿರುದ್ಧ ಲಂಕಾ ಮತ್ತೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಯಿತು. ಸ್ವತಃ ದಸುನ್ ಶನಕ ಅಂತಿಮ ಹಂತದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿ ಶ್ರೀಲಂಕಾದ ಬೃಹತ್ ಮೊತ್ತಕ್ಕೆ ಕಾರಣವಾದರು. ಬಳಿಕ ಅಂತಿಮ ಓವರ್ ಬೌಲಿಂಗ್ ಮಾಡಿದ ಶನಕ ಕೇವಲ 4 ರನ್ ನೀಡಿ 2 ವಿಕೆಟ್ ಪಡೆದರು.
ಪಂದ್ಯದ ಬಳಿಕ ಮಾತನಾಡಿದ ಶನಕ ಮಧ್ಯಮ ಓವರ್ಗಳಲ್ಲಿ ಉತ್ತಮವಾಗಿ ಆಡಬಹುದಾಗಿತ್ತು ಎಂದಿದ್ದಾರೆ. "ನಮಗೆ ಉತ್ತಮ ಅಡಿಪಾಯವನ್ನು ಆರಂಬಿಕರು ಒದಗಿಸಿದ್ದರು. ಮಧ್ಯಮ ಕ್ರಮಾಂಕದ ಆಟಗಾರರು ಮಧ್ಯಮ ಓವರ್ಗಳಲ್ಲಿ ಉತ್ತಮ ಆಡುವ ಅಗತ್ಯವಿತ್ತು. ಇನ್ನು ಭಾರತ ಮಧ್ಯಮ ಓವರ್ನಲ್ಲಿ ಅದ್ಭುತವಾಗಿ ಆಡಿದೆ. ಇದು ಇಬ್ಬನಿಯ ಕಾರಣದಿಂದಾಗಿ ಅಲ್ಲ. ನಿಸ್ಸಂಶಯವಾಗಿ ಭಾರತೀಯ ಬ್ಯಾಟರ್ಗಳ ಕೌಶಲ್ಯ ಇದಕ್ಕೆ ಕಾರಣ. ಅವರು ನಮ್ಮಿಂದ ಪಂದ್ಯವನ್ನು ಬಹುತೇಕ ಕಸಿದಿದ್ದರು. ಆದರೂ ನಾವು ಪಂದ್ಯವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದೆವು. ಇಂಥಾ ಪರಿಸ್ಥಿತಿಯಲ್ಲಿ ಭಾರತದ ವಿರುದ್ಧ ಸ್ಕೋರ್ ರಕ್ಷಿಸಿಕೊಳ್ಳುವುದು ಉತ್ತಮ ಅನುಭವ" ಎಂದಿದ್ದಾರೆ ಶ್ರೀಲಂಕಾ ನಾಯಕ.
ಇನ್ನು ಈ ಪಂದ್ಯದಲ್ಲಿ ಶ್ರೀಲಂಕಾ ಮೊದಲಿಗೆ ಅಬ್ಬರದ ಬ್ಯಾಟಿಂಗ್ ನಡೆಸಿ 206 ರನ್ಗಳ ಬೃಹತ್ ಮೊತ್ತ ಗಳಿಸಿತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾ ಆರಂಭದಲ್ಲಿಯೇ ಭಾರೀ ಕುಸಿತ ಕಂಡಿತು. ಒಂದು ಹಂತದಲ್ಲಿ 57 ರನ್ಗಳಿಗೆ 5 ವಿಕೆಟ್ ಕಳೆದುಕೊಂಡು ಹೀನಾಯ ಪರಿಸ್ಥಿತಿಯಲ್ಲಿದ್ದ ಭಾರತ ತಂಡಕ್ಕೆ ಸೂರ್ಯಕುಮಾರ್ ಯಾದವ್ ಹಾಗೂ ಅಕ್ಷರ್ ಪಟೇಲ್ ಜೋಡಿ ಆಸರೆಯಾದರು. ತಲಾ ಅರ್ಧ ಶತಕ ಬಾರಿಸಿದ ಸೂರ್ಯಕುಮಾರ್ ಹಾಗೂ ಅಕ್ಷರ್ ಪಟೇಲ್ ಕೊನೆಯ ಕ್ಷಣದವರೆಗೂ ಹೋರಾಡಿದರು. ಸೂರ್ಯಕುಮಾರ್ ವಿಕೆಟ್ ಕಳೆದುಕೊಂಡ ಬಳಿಕ ಶಿವಂ ಮಾವಿ ಜೊತೆಗೂಡಿ ಅಕ್ಷರ್ ಪಟೇಲ್ ಗೆಲುವಿನ ಆಸೆ ಜೀವಂತವಾಗಿಸಿದರಾದರೂ ಅಂತಿಮವಾಗಿ ಟೀಮ್ ಇಂಡಿಯಾ 16 ರನ್ಗಳ ಸೋಲು ಅನುಭವಿಸಿದೆ. ಈ ಮೂಲಕ ಶ್ರೀಲಂಕಾ ಮೂರು ಪಂದ್ಯಗಳ ಟಿ20 ಸರಣಿಯನ್ನು ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ.
ಭಾರತ ಆಡುವ ಬಳಗ: ಇಶಾನ್ ಕಿಶನ್(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ಅಕ್ಸರ್ ಪಟೇಲ್, ಅರ್ಷ್ದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್
ಬೆಂಚ್: ಋತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಹರ್ಷಲ್ ಪಟೇಲ್, ಮುಖೇಶ್ ಕುಮಾರ್
ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್(ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ
ಬೆಂಚ್: ಲಹಿರು ಕುಮಾರ, ಅವಿಷ್ಕ ಫೆರ್ನಾಂಡೋ, ಅಶೇನ್ ಬಂಡಾರ, ಪ್ರಮೋದ್ ಮದುಶನ್, ದುನಿತ್ ವೆಳ್ಳಾಲಗೆ, ನುವಾನ್ ತುಷಾರ, ಸದೀರ ಸಮರವಿಕ್ರಮ