IND vs SL 2nd ODI : ಕೋಲ್ಕತ್ತಾ ತಲುಪಿದ ಟೀಂ ಇಂಡಿಯಾ, ಸರಣಿ ಜಯದ ವಿಶ್ವಾಸದಲ್ಲಿ ರೋಹಿತ್ ಪಡೆ

ಗುವಾಹಟಿ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆದ ಏಕದಿನ ಸರಣಿಯ ಮೊದಲನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ ಟೀಂ ಇಂಡಿಯಾ ಎರಡನೇ ಏಕದಿನ ಪಂದ್ಯವನ್ನಾಡಲು ಕೋಲ್ಕತ್ತಾ ತಲುಪಿದೆ.
ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ ಅಂಗಳದಲ್ಲಿ ಜನವರಿ 12 ರಂದು ಗುರುವಾರ ಎರಡನೇ ಏಕದಿನ ಪಂದ್ಯ ನಡೆಯಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 1-30ಕ್ಕೆ ಪಂದ್ಯ ಆರಂಭವಾಗಲಿದೆ.
ಗುವಾಹಟಿಯಲ್ಲಿ ನಡೆದ ಮೊದಲನೇ ಪಂದ್ಯದಲ್ಲಿ ಟೀಂ ಇಂಡಿಯಾ 373 ರನ್ಗಳ ಬೃಹತ್ ಮೊತ್ತ ಕಲೆಹಾಕಿತ್ತು. ನಾಯಕ ರೋಹಿತ್ ಶರ್ಮಾ, ಶುಭಮನ್ ಗಿಲ್ ಅರ್ಧಶತಕ ಗಳಿಸಿದರೆ, ವಿರಾಟ್ ಕೊಹ್ಲಿ ಶತಕ ಗಳಿಸಿ ಮಿಂಚಿದರು. ಇದೇ ಪ್ರದರ್ಶನವನ್ನು ಎರಡನೇ ಪಂದ್ಯದಲ್ಲಿ ಮುಂದುವರೆಸುವ ವಿಶ್ವಾಸದಲ್ಲಿದೆ ರೋಹಿತ್ ಶರ್ಮಾ ಪಡೆ.
ಮೊದಲನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ 2023ರ ಮೊದಲ ಏಕದಿನ ಸರಣಿಯನ್ನು ಗೆಲ್ಲುವ ವಿಶ್ವಾಸದಲ್ಲಿದೆ.
ಮೊದಲನೇ ಪಂದ್ಯದಲ್ಲಿ ಸೋತಿರುವ ಶ್ರೀಲಂಕಾ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿಯನ್ನು ಸಮವಾಗಿಸಿಕೊಳ್ಳಲು ನೋಡುತ್ತಿದೆ.

ವಿಶ್ವದಾಖಲೆ ನಿರ್ಮಿಸಿದ್ದ ರೋಹಿತ್
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಇದೇ ಈಡನ್ ಗಾರ್ಡನ್ ಅಂಗಳದಲ್ಲಿ ಶ್ರೀಲಂಕಾ ವಿರುದ್ಧ ವಿಶ್ವದಾಖಲೆಯ ಇನ್ನಿಂಗ್ಸ್ ಆಡಿದ್ದರು. 2014ರ ನವೆಂಬರ್ 13ರಂದು ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ 4ನೇ ಪಂದ್ಯದಲ್ಲಿ ರೋಹಿತ್ ಶರ್ಮಾ, 172 ಎಸೆತಗಳಲ್ಲಿ 264 ರನ್ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಅವರ ಇನ್ನಿಂಗ್ಸ್ನಲ್ಲಿ 33 ಬೌಂಡರಿ, 9 ಭರ್ಜರಿ ಸಿಕ್ಸರ್ ಸೇರಿದ್ದವು.
ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ದಾಖಲಾದ ಅತ್ಯಧಿಕ ವೈಯಕ್ತಿಕ ಸ್ಕೋರ್ ಇದಾಗಿದೆ. ಗುರುವಾರ ನಡೆಯುವ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತೊಂದು ಉತ್ತಮ ಇನ್ನಿಂಗ್ಸ್ ಆಡುವ ಉತ್ಸಾಹದಲ್ಲಿದ್ದಾರೆ.
Ranji Trophy: ಮನೀಶ್ ಪಾಂಡೆ, ಶ್ರೇಯಸ್ ಗೋಪಾಲ್ ಉತ್ತಮ ಬ್ಯಾಟಿಂಗ್, ಬೃಹತ್ ಮುನ್ನಡೆ ಸಾಧಿಸಿದ ಕರ್ನಾಟಕ

ದ್ರಾವಿಡ್ಗೆ ಹುಟ್ಟು ಹಬ್ಬದ ಉಡುಗೊರೆ?
ಜನವರಿ 11 ರಂದು ಟೀಂ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್ ಜನ್ಮದಿನ ಆಚರಿಸಿಕೊಂಡರು. ಟೀಂ ಇಂಡಿಯಾ ಆಟಗಾರರು ಸೇರಿದಂತೆ, ಮಾಜಿ ಆಟಗಾರರು, ಕೋಟ್ಯಂತರ ಅಭಿಮಾನಿಗಳು 'ದಿ ಗ್ರೇಟ್ ವಾಲ್' ರಾಹುಲ್ ದ್ರಾವಿಡ್ಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಹೇಳಿದ್ದಾರೆ.
ಶ್ರೀಲಂಕಾ ವಿರುದದ್ಧ ಎರಡನೇ ಏಕದಿನ ಪಂದ್ಯವನ್ನು ಗೆದ್ದು, ಸರಣಿ ಗೆಲುವಿನ ಉಡುಗೊರೆ ನೀಡಲು ಸಿದ್ಧವಾಗಿದೆ ಟೀಂ ಇಂಡಿಯಾ.

ಆಡುವ ಬಳಗದಲ್ಲಿ ಬದಲಾವಣೆ ಇಲ್ಲ!
ಸರಣಿಯ ಮೊದಲನೇ ಪಂದ್ಯದಲ್ಲಿ ಆಡಿದ ತಂಡವೇ ಎರಡನೇ ಪಂದ್ಯದಲ್ಲೂ ಕಣಕ್ಕಿಳಿಯುವ ಸಾಧ್ಯತೆ ಇದೆ. ಮೊದಲ ಪಂದ್ಯದಲ್ಲಿ ಭಾರತ ತಂಡದ ಅಗ್ರ ಬ್ಯಾಟಿಂಗ್ ಪಡೆ ಉತ್ತಮ ಪ್ರದರ್ಶನ ನೀಡಿತ್ತು. ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದರು.
ಶ್ರೇಯಸ್ ಅಯ್ಯರ್ ನಿರೀಕ್ಷಿತ ಪ್ರದರ್ಶನ ನೀಡದಿದ್ದರೂ ಅವರು ಎರಡನೇ ಪಂದ್ಯದಲ್ಲಿ ಅವರು ಅವಕಾಶ ಪಡೆಯಲಿದ್ದಾರೆ. ಕೆಎಲ್ ರಾಹುಲ್ ತಮ್ಮ ಪ್ರದರ್ಶನವನ್ನು ಉತ್ತಮಪಡಿಸಿಕೊಳ್ಳಬೇಕಿದೆ. ಭಾರತದ ಬೌಲಿಂಗ್ ಪಡೆ ಪರಿಣಾಮಕಾರಿಯಾಗಿದ್ದು, ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ.
ಆದರೆ, ಶ್ರೀಲಂಕಾ ಆಡುವ ಬಳಗದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ದುನಿತ್ ವೆಲ್ಲಲಾಗೆ ಬದಲಿಗೆ ಮಹೀಶ್ ತೀಕ್ಷಣ ಅವಕಾಶ ಪಡೆಯುವ ಸಾಧ್ಯತೆ ಇದೆ. ದಿಲ್ಶನ್ ಮಧುಶಂಕ ಬದಲಿಗೆ ಲಹಿರು ಕುಮಾರ ಅವಕಾಶ ಪಡೆಯುವ ಸಾಧ್ಯತೆ ಇದೆ.

ಎರಡೂ ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಉಮ್ರಾನ್ ಮಲಿಕ್, ಯುಜುವೇಂದ್ರ ಚಹಾಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದಸುನ್ ಶನಕ, ವನಿಂದು ಹಸರಂಗ, ದುನಿತ್ ವೆಲ್ಲಲಾಗೆ/ಮಹೀಶ್ ತೀಕ್ಷಣ, ಚಾಮಿಕ ಕರುಣಾರತ್ನ, ಕಸುನ್ ರಜಿತ, ದಿಲ್ಶನ್ ಮಧುಶಂಕ/ಲಹಿರು ಕುಮಾರ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications