ತಂಡದಿಂದ ಹೊರಬಿದ್ದ ಕೊಹ್ಲಿ, ಪಂತ್ ಮತ್ತು ರಾಹುಲ್ ಮತ್ತೆ ತಂಡ ಸೇರುವುದು ಯಾವಾಗ? ಈತನದ್ದೇ ಅನುಮಾನ!

ಸದ್ಯ ಭಾರತ ಪ್ರವಾಸವನ್ನು ಕೈಗೊಂಡಿರುವ ವೆಸ್ಟ್ ಇಂಡೀಸ್ ವಿರುದ್ಧದ ಸೀಮಿತ ಓವರ್ ಸರಣಿಗಳಲ್ಲಿ ಪಾಲ್ಗೊಂಡಿರುವ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಕೆರಿಬಿಯನ್ನರ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ವೈಟ್ ವಾಷ್ ಸಾಧನೆ ಮಾಡಿದ್ದು, ಈಗ ನಡೆಯುತ್ತಿರುವ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸುವುದರ ಮೂಲಕ ಸರಣಿಯನ್ನು ಕೈವಶ ಪಡಿಸಿಕೊಂಡಿದೆ. ಇನ್ನು ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಸರಣಿಗಳು ಫೆಬ್ರವರಿ 20ರ ಭಾನುವಾರದಂದು ನಡೆಯಲಿರುವ ಅಂತಿಮ ಟಿ ಟ್ವೆಂಟಿ ಪಂದ್ಯದ ಮೂಲಕ ಮುಕ್ತಾಯವಾಗಲಿದ್ದು, ಈ ಸರಣಿ ಮುಗಿದ ಬೆನ್ನಲ್ಲೇ ಶ್ರೀಲಂಕಾ ವಿರುದ್ಧದ ಸೆಣಸಾಟಗಳು ಆರಂಭವಾಗಲಿದೆ.
ಹೌದು, ಭಾರತ ಪ್ರವಾಸವನ್ನು ಕೈಗೊಳ್ಳಲಿರುವ ಸಿಂಹಳೀಯರ ವಿರುದ್ಧ ಟೀಮ್ ಇಂಡಿಯಾ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಟ ನಡೆಸಲಿದೆ. ಮೊದಲಿಗೆ ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಆರಂಭವಾಗಲಿದ್ದು ಫೆಬ್ರವರಿ 24, 26 ಮತ್ತು 27ರಂದು ಪಂದ್ಯಗಳು ಜರುಗಲಿವೆ. ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯ ಪ್ರಥಮ ಪಂದ್ಯ ಮಾರ್ಚ್ 4ರಿಂದ 8ರವರೆಗೆ ಹಾಗೂ ದ್ವಿತೀಯ ಪಂದ್ಯ ಮಾರ್ಚ್ 12ರಿಂದ 16ರವರೆಗೆ ನಡೆಯಲಿದೆ. ಇನ್ನು ಶ್ರೀಲಂಕಾ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಬಿಸಿಸಿಐ ಈ ಕೆಳಕಂಡಂತೆ ತಂಡವನ್ನು ಪ್ರಕಟಿಸಿದೆ.
ಶ್ರೀಲಂಕಾ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಪ್ರಕಟಿಸಲಾದ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ದೀಪಕ್ ಚಾಹರ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ರವಿ ಜಡೇಜಾ, ಯುಜುವೇಂದ್ರ ಚಾಹಲ್, ಆರ್ ಬಿಷ್ಣೋಯ್, ಕುಲದೀಪ್, ಅವೇಶ್ ಖಾನ್
ಹೀಗೆ ಶ್ರೀಲಂಕಾ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಪ್ರಕಟವಾಗಿರುವ ಈ ತಂಡದಿಂದ ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ರಿಷಭ್ ಪಂತ್ ಮತ್ತು ಕೆಎಲ್ ರಾಹುಲ್ ಹೊರಗುಳಿದಿದ್ದು, ಯಾವ ಕಾರಣಕ್ಕಾಗಿ ಹೊರಗುಳಿದಿದ್ದಾರೆ ಮತ್ತು ಯಾವಾಗ ಮತ್ತೆ ತಂಡ ಸೇರಲಿದ್ದಾರೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..

ವಿರಾಟ್ ಕೊಹ್ಲಿ ಮತ್ತು ರಿಷಭ್ ಪಂತ್ ತಂಡ ಸೇರುವುದು ಯಾವಾಗ?
ಶ್ರೀಲಂಕಾ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಪ್ರಕಟಿಸಲಾಗಿರುವ ಭಾರತ ತಂಡದಲ್ಲಿ ಕಾಣೆಯಾಗಿರುವ ವಿರಾಟ್ ಕೊಹ್ಲಿ ಮತ್ತು ರಿಷಭ್ ಪಂತ್ ವಿಶ್ರಾಂತಿಗೆಂದು ತಂಡದಿಂದ ಹೊರಗುಳಿದಿದ್ದಾರೆ. ಇಬ್ಬರಿಗೂ ಸಹ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ನೀಡಿದ ಸಲಹೆ ಮೇರೆಗೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದಿರುವ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಈ ಇಬ್ಬರೂ ಸಹ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ವಾಪಸ್ ತಂಡ ಸೇರಲಿದ್ದಾರೆ ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಹೀಗೆ ವಿಶ್ರಾಂತಿಗೆಂದು ತಂಡದಿಂದ ಹೊರ ನಡೆದಿರುವ ವಿರಾಟ್ ಕೊಹ್ಲಿ ಮತ್ತು ರಿಷಭ್ ಪಂತ್ ವೆಸ್ಟ್ ಇಂಡೀಸ್ ವಿರುದ್ಧದ ತೃತೀಯ ಪಂದ್ಯಕ್ಕೂ ಕೂಡ ಅಲಭ್ಯರಾಗಿದ್ದಾರೆ.

ಕೆಎಲ್ ರಾಹುಲ್ ಭಾಗವಹಿಸುವಿಕೆ ಅನುಮಾನ!
ರೋಹಿತ್ ಶರ್ಮಾ ನಾಯಕತ್ವದಲ್ಲಿ ಉಪನಾಯಕನಾಗಿದ್ದ ಕೆಎಲ್ ರಾಹುಲ್ ಗಾಯದ ಸಮಸ್ಯೆಗೊಳಗಾಗಿರುವ ಕಾರಣ ಶ್ರೀಲಂಕಾ ವಿರುದ್ಧದ ಸರಣಿಗೆ ಅಲಭ್ಯರಾಗಿದ್ದಾರೆ. ಸದ್ಯ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿರುವ ಕೆಎಲ್ ರಾಹುಲ್ ಸಂಪೂರ್ಣವಾಗಿ ಚೇತರಿಸಿಕೊಂಡರೆ ಮಾತ್ರ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ವಾಪಸ್ ಟೀಮ್ ಇಂಡಿಯಾ ಸೇರುವ ಸಾಧ್ಯತೆಗಳಿವೆ. ಇಲ್ಲದೇ ಇದ್ದರೆ ಕೆಎಲ್ ರಾಹುಲ್ ಸಂಪೂರ್ಣ ಫಿಟ್ ಆಗುವವರೆಗೂ ತಂಡ ಸೇರುವುದು ಅನುಮಾನವಾಗಿದೆ.

ರವಿಚಂದ್ರನ್ ಅಶ್ವಿನ್ ಮತ್ತು ಅಕ್ಷರ್ ಪಟೇಲ್ ಕತೆಯೇನು?
ಒಂದೆಡೆ ಕೆಎಲ್ ರಾಹುಲ್ ಅವರದ್ದು ಗಾಯದ ಸಮಸ್ಯೆಯಾದರೆ, ಮತ್ತೊಂದೆಡೆ ರವಿಚಂದ್ರನ್ ಅಶ್ವಿನ್ ಮತ್ತು ಅಕ್ಷರ್ ಪಟೇಲ್ ಅವರದ್ದು ಕೂಡ ಇದೇ ಕತೆ. ಫಿಟ್ನೆಸ್ ಕಳೆದುಕೊಂಡಿರುವ ಈ ಇಬ್ಬರೂ ಆಟಗಾರರು ಸಹ ಸಂಪೂರ್ಣವಾಗಿ ಫಿಟ್ ಆದರೆ ಮಾತ್ರ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯುವ ಅವಕಾಶವನ್ನು ಪಡೆದುಕೊಳ್ಳಲಿದ್ದಾರೆ. ಅಕ್ಷರ್ ಪಟೇಲ್ ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಫಿಟ್ ಆಗುವ ಸಾಧ್ಯತೆಗಳು ಹೆಚ್ಚಿದ್ದು, ರವಿಚಂದ್ರನ್ ಅವರ ಭಾಗವಹಿಸುವಿಕೆ ಫಿಟ್ನೆಸ್ ಆಧಾರದ ಮೇಲೆ ನಿಂತಿದ್ದು ಇನ್ನೂ ನಿಖರತೆ ಸಿಕ್ಕಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications