
ಭಾರತ ಪ್ರವಾಸ ಕೈಗೊಂಡಿರುವ ಶ್ರೀಲಂಕಾ ಟೀಮ್ ಇಂಡಿಯಾ ವಿರುದ್ದ ಟಿ ಟ್ವೆಂಟಿ ಹಾಗೂ ಟೆಸ್ಟ್ ಸರಣಿಗಳಲ್ಲಿ ಸೆಣಸಾಟ ನಡೆಸುತ್ತಿದೆ. ಇತ್ತಂಡಗಳ ನಡುವೆ ಮೊದಲಿಗೆ ನಡೆದ ಮೂರು ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದ್ದು, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್ ತಂಡಗಳ ನಂತರ ಶ್ರೀಲಂಕಾ ವಿರುದ್ಧವೂ ವೈಟ್ವಾಷ್ ಸಾಧನೆ ಮಾಡಿದೆ. ಹೀಗೆ ಶ್ರೀಲಂಕಾ ವಿರುದ್ಧದ ಟಿ ಟ್ವೆಂಟಿ ಸರಣಿಯಲ್ಲಿ ಗೆದ್ದು ಬೀಗಿರುವ ಟೀಮ್ ಇಂಡಿಯಾ ಟೆಸ್ಟ್ ಸರಣಿಯಲ್ಲಿಯೂ ಸಹ ಮೊದಲನೇ ಪಂದ್ಯವನ್ನು ಗೆಲ್ಲುವ ಮೂಲಕ ಶುಭಾರಂಭವನ್ನು ಮಾಡಿದೆ. ಹೌದು, ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇನ್ನಿಂಗ್ಸ್ ಸಹಿತ 222 ರನ್ಗಳ ಬೃಹತ್ ಗೆಲುವನ್ನು ದಾಖಲಿಸಿದೆ.
ಈ ಗೆಲುವಿನೊಂದಿಗೆ ಭಾರತ ಟೆಸ್ಟ್ ತಂಡದ ಪೂರ್ಣಾವಧಿ ನಾಯಕನಾಗಿ ಆಯ್ಕೆಯಾಗಿರುವ ರೋಹಿತ್ ಶರ್ಮಾ ಶುಭಾರಂಭ ಮಾಡಿದ್ದು, ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಪಂದ್ಯವೂ ಆಗಿದ್ದ ಈ ಪಂದ್ಯದಲ್ಲಿ ದೊಡ್ಡ ಗೆಲುವು ದಾಖಲಿಸಿದ ಟೀಮ್ ಇಂಡಿಯಾ ವಿರಾಟ್ ಕೊಹ್ಲಿಗೆ ಒಳ್ಳೆಯ ಉಡುಗೊರೆ ನೀಡಿದೆ. ಇನ್ನು ಮಾರ್ಚ್ ೪ರಂದು ಆರಂಭವಾಗಿದ್ದ ಈ ಪಂದ್ಯ ಮೂರೇ ದಿನಕ್ಕೆ ಮುಕ್ತಾಯಗೊಂಡಿದ್ದು, ಪಂದ್ಯದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿಯೂ ಮಿಂಚಿದ ರವೀಂದ್ರ ಜಡೇಜಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಹೀಗೆ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಮಾರ್ಚ್ 12ರಿಂದ 16ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೆಣಸಾಟ ನಡೆಸಲಿದೆ.
ಇನ್ನು ಬೆಂಗಳೂರಿನಲ್ಲಿ ನಡೆಯಲಿರುವ ಈ ಪಂದ್ಯ ಪಿಂಕ್ ಬಾಲ್ ಟೆಸ್ಟ್ ಪಂದ್ಯ ಎಂಬುದು ವಿಶೇಷವಾಗಿದ್ದು, ಶೇಕಡಾ ೫೦ರಷ್ಟು ಪ್ರೇಕ್ಷಕರಿಗೆ ಮಾತ್ರ ಮೈದಾನದಲ್ಲಿ ಪಂದ್ಯ ವೀಕ್ಷಿಸುವ ಅವಕಾಶ ನೀಡಲಾಗಿದೆ. ಕಳೆದ ಪಂದ್ಯದಲ್ಲಷ್ಟೇ ತನ್ನ ನೂರನೇ ಟೆಸ್ಟ್ ಪಂದ್ಯವನ್ನು ವಿರಾಟ್ ಕೊಹ್ಲಿ ಪೂರೈಸಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ ಈ ಪಂದ್ಯ ಕೊಹ್ಲಿಯ 101ನೇ ಪಂದ್ಯವಾಗಿರಲಿದ್ದು, ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಕಾರಣ ಈ ಪಂದ್ಯದ ಟಿಕೆಟ್ಗಳು ಭರದಿಂದ ಮಾರಾಟವಾಗಿವೆ. ಇನ್ನು ಈ ಪಂದ್ಯದ ಮೊದಲ 2 ದಿನಗಳ ಟಿಕೆಟ್ ಈಗಾಗಲೇ ಮಾರಾಟವಾಗಿದೆ ಎಂದು ಇಂಡಿಯನ್ ಎಕ್ಸ್ಪ್ರೆಸ್ನ ವರದಿಯೊಂದು ತಿಳಿಸಿದೆ. ಈ ವರದಿಯ ಪ್ರಕಾರ ಸುಮಾರು 10000 ಟಿಕೆಟ್ಗಳು ಆಫ್ಲೈನ್ ಮತ್ತು ಆನ್ಲೈನ್ ಎರಡರಿಂದಲೂ ಮಾರಾಟವಾಗಿವೆ ಎನ್ನಲಾಗಿದೆ. ಮೊದಲೇ ಹೇಳಿದಂತೆ ವಿರಾಟ್ ಕೊಹ್ಲಿಗೆ ಬೆಂಗಳೂರಿನಲ್ಲಿ ಅಪಾರವಾದ ಅಭಿಮಾನಿ ಬಳಗವಿದ್ದು, ಈ ಪಂದ್ಯದಲ್ಲಿ ನೂರು ಟೆಸ್ಟ್ ಪಂದ್ಯಗಳನ್ನು ಪೂರೈಸಿರುವ ವಿರಾಟ್ ಕೊಹ್ಲಿಗೆ ಅಭಿಮಾನಿಗಳಿಂದ ವಿಶೇಷ ಗೌರವ ಸಿಗಲಿದೆ ಹಾಗೂ ಕ್ರೇಜ್ ದೊಡ್ಡ ಮಟ್ಟದಲ್ಲಿರಲಿದೆ.
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪ್ರಕಟಿಸಲಾಗಿರುವ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭಮನ್ ಗಿಲ್, ರಿಷಬ್ ಪಂತ್, ಕೆಎಸ್ ಭರತ್, ಆರ್ ಅಶ್ವಿನ್ (ಫಿಟ್ನೆಸ್ ಆಧಾರದ ಮೇಲೆ), ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್, ಜೆ ಬುಮ್ರಾ, ಎಂ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್
ಟೆಸ್ಟ್ ಸರಣಿಗೆ ಪ್ರಕಟವಾಗಿರುವ ಶ್ರೀಲಂಕಾ ತಂಡ: ದಿಮುತ್ ಕರುಣಾರತ್ನೆ (ನಾಯಕ), ಪಾತುಮ್ ನಿಸ್ಸಾಂಕ, ಲಹಿರು ತಿರಿಮನ್ನೆ, ಧನಂಜಯ ಡಿ ಸಿಲ್ವಾ (ಉಪನಾಯಕ), ಕುಸಾಲ್ ಮೆಂಡಿಸ್ (ಫಿಟ್ನೆಸ್ ಆಧಾರದ ಮೇಲೆ), ಏಂಜೆಲೊ ಮ್ಯಾಥ್ಯೂಸ್, ದಿನೇಶ್ ಚಾಂಡಿಮಲ್, ಚರಿತ್ ಅಸಲಂಕಾ, ನಿರೋಶನ್ ಡಿಕ್ವೆಲ್ಲಾ, ಚಮಿಕಾ ಕರುಣಾರತ್ನೆ, ಲಹಿರು ಎಫ್ಕ್ ಕುಮಾರ, ಸುರಂಗ ಕುಮಾರ, ಸುರಂಗ , ಜೆಫ್ರಿ ವಾಂಡರ್ಸೆ, ಪ್ರವೀಣ್ ಜಯವಿಕ್ರಮ, ಲಸಿತ್ ಎಂಬುಲ್ದೇನಿಯ.