ಟೀಂ ಇಂಡಿಯಾ 2023ರಲ್ಲಿ ಮೊದಲನೇ ಟಿ20 ಸರಣಿಯನ್ನು ಶ್ರೀಲಂಕಾ ವಿರುದ್ಧ ಆಡಲಿದೆ. ಜನವರಿ 3 ರಂದು ಶ್ರೀಲಂಕಾ ವಿರುದ್ಧ ಮೊದಲನೇ ಟಿ20 ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.
ಟೀಂ ಇಂಡಿಯಾ ಆಟಗಾರರು ಜನವರಿ 1ರಂದು ವಾಂಖೆಡೆ ಅಂಗಳದಲ್ಲಿ ಅಭ್ಯಾಸ ನಡೆಸಿದರು. ಏಷ್ಯಾಕಪ್ ಚಾಂಪಿಯನ್ಗಳಾದ ಶ್ರೀಲಂಕಾವನ್ನು ಎದುರಿಸಲು, ಭಾರತದ ಯುವ ಪಡೆ ಸಜ್ಜಾಗಿದೆ.
ಶ್ರೀಲಂಕಾ ವಿರುದ್ಧದ ಸರಣಿಗೆ ಭಾರತದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಭುವನೇಶ್ವರ್ ಕುಮಾರ್ ಸೇರಿದಂತೆ ಹಲವು ಹಿರಿಯ ಆಟಗಾರರು ತಂಡದಿಂದ ಹೊರುಗುಳಿದಿದ್ದಾರೆ.
ಆದರೆ, ನಾಯಕ ಹಾರ್ದಿಕ್ ಪಾಂಡ್ಯ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ಗೆ ಆಡುವ ಬಳಗವನ್ನು ಆಯ್ಕೆ ಮಾಡುವುದು ಕಷ್ಟವಾಗಿದೆ. ಹಲವು ಆಟಗಾರರು ತಂಡದಲ್ಲಿ ಸ್ಥಾನ ಪಡೆಯಬೇಕಾದರೆ, ಕೆಲವರನ್ನು ತಂಡದಿಂದ ಹೊರಗಿಡಲೇಬೇಕಾಗುತ್ತದೆ. ಯಾರಿಗೆ ಅವಕಾಶ ನೀಡುವುದು ಎನ್ನುವ ಚಿಂತೆ ಹಾರ್ದಿಕ್ ಪಾಂಡ್ಯ ಮತ್ತು ದ್ರಾವಿಡ್ರನ್ನು ಕಾಡುತ್ತಿದೆ.
ಶೀಘ್ರದಲ್ಲೇ ಕ್ರಿಕೆಟ್ಗೆ ಮರಳುತ್ತೇನೆ ಎಂದ ಇಂಗ್ಲೆಂಡ್ನ ಸ್ಟಾರ್ ವೇಗಿ
ಅದರಲ್ಲೂ ಅಗ್ರ ಮೂರು ಬ್ಯಾಟರ್ ಆಯ್ಕೆಯಲ್ಲಿ ತಂಡಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಎಡಗೈ ಬ್ಯಾಟರ್ ಇಶಾನ್ ಕಿಶನ್ ಭಾರತಕ್ಕಾಗಿ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಹೆಚ್ಚಾಗಿದೆ. ಬಾಂಗ್ಲಾದೇಶದ ವಿರುದ್ಧದ ಏಕದಿನ ಪಂದ್ಯದಲ್ಲಿ ದ್ವಿಶತಕ ಗಳಿಸಿದ ನಂತರ ಅವರು ವಿಶ್ವಾಸದಲ್ಲಿದ್ದಾರೆ.
ಕಿಶಾನ್ ಜೊತೆ ಇನ್ನಿಂಗ್ಸ್ ಆರಂಭಿಸುವುದ್ಯಾರು?
ಇಶಾನ್ ಕಿಶನ್ ಮೊದಲ ಆಯ್ಕೆಯಾದರು ಅವರ ಜೊತೆ ಇನ್ನಿಂಗ್ಸ್ ಆರಂಭಿಸುವುದು ಯಾರು ಎನ್ನುವ ಕುತೂಹಲ ಇದೆ. ರುತುರಾಜ್ ಗಾಯಕ್ವಾಡ್ ದೇಶೀಯ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬಳಿಕ ಅವರು ಮೊದಲ ಆಯ್ಕೆಯಾಗುವ ಸಾಧ್ಯತೆ ಇದೆ.
ಶುಭಮನ್ ಗಿಲ್ ಮತ್ತು ರಾಹುಲ್ ತ್ರಿಪಾಠಿ ಕೂಡ ತಂಡದಲ್ಲಿರುವುದು ಗೊಂದಲಕ್ಕೆ ಕಾರಣವಾಗಿದೆ. ಸಂಜು ಸ್ಯಾಮ್ಸನ್ ಮತ್ತು ಸೂರ್ಯಕುಮಾರ್ ಯಾದವ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿದ್ದಾರೆ.
ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆ ಇದೆ. 2022ರಲ್ಲಿ ಅವರು ಅತ್ಯುತ್ತಮ ಫಾರ್ಮ್ನಲ್ಲಿದ್ದರು. ಅದೇ ಆಟವನ್ನು 2023ರಲ್ಲಿ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ.
ಸಂಜು ಸ್ಯಾಮ್ಸನ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರೆ, ಹಾರ್ದಿಕ್ ಪಾಂಡ್ಯ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯವಿದೆ. ವಾಂಖೆಡೆ ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿರುವುದರಿಂದ, ಆಲ್ರೌಂಡರ್ ಗಳಿಗೆ ಹೆಚ್ಚಿನ ಅವಕಾಶ ಸಿಗುವ ಸಾಧ್ಯತೆ ಇದೆ.
ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಬೌಲಿಂಗ್ ವಿಭಾಗದಲ್ಲಿ ಉಮ್ರಾನ್ ಮಲಿಕ್ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ. ಅರ್ಷದೀಪ್ ಸಿಂಗ್, ಯುಜುವೇಂದ್ರ ಚಹಾಲ್, ಹರ್ಷಲ್ ಪಟೇಲ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.
ಭಾರತ ಸಂಭಾವ್ಯ ಆಡುವ ಬಳಗ
ಇಶಾನ್ ಕಿಶನ್, ರುತುರಾಜ್ ಗಾಯಕವಾಡ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಯುಜುವೇಂದ್ರ ಚಾಹಲ್, ಅರ್ಷದೀಪ್ ಸಿಂಗ್.