
ಹೊಸ ವರ್ಷದ ಮೊದಲ ದಿನದಂದು ಟೀಂ ಇಂಡಿಯಾ ಯುವ ಪಡೆ ವಾಂಖೆಡೆ ಸ್ಟೇಡಿಯಂನಲ್ಲಿ ಅಭ್ಯಾಸವನ್ನು ಆರಂಭಿಸಲಿದೆ. ಜನವರಿ 3 ರಂದು ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲನೇ ಪಂದ್ಯ ನಡೆಯಲಿದೆ.
ವಾಂಖೆಡೆ ಕ್ರೀಡಾಂಗಣದಲ್ಲಿ ಮೊದಲನೇ ಪಂದ್ಯ ನಡೆಯಲಿದ್ದು, ಆತಿಥೇಯ ಟೀಂ ಇಂಡಿಯಾ ಈಗಾಗಲೇ ಮುಂಬೈ ತಲುಪಿದ್ದು, ಇಂದಿನಿಂದ (ಜನವರಿ 1ರಂದು) ಅಭ್ಯಾಸ ಆರಂಭಿಸಲಿದೆ.
ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾ ಸೇರಿದಂತೆ ಹಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.
ಶ್ರೀಲಂಕಾ ವಿರುದ್ಧದ ಟಿ20 ಸರಣಿಯೊಂದಿಗೆ ಭಾರತ ತಂಡ 2023ರನ್ನು ಆರಂಭಿಸಲಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ವಿಶ್ರಾಂತಿಯಲ್ಲಿದ್ದು, ಅನೇಕ ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ.
ರಿಷಬ್ ಪಂತ್ ಅನುಪಸ್ಥಿತಿಯಲ್ಲಿ ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್ ಮತ್ತು ರಾಹುಲ್ ತ್ರಿಪಾಠಿ ಕೂಡ ಸರಣಿಯಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಕಾಯುತ್ತಿದ್ದಾರೆ.
ಜಸ್ಪ್ರೀತ್ ಬುಮ್ರಾ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಯುವ ಬೌಲಿಂಗ್ ಪಡೆ ಕಣಕ್ಕಿಳಿಯಲಿದೆ. ಹರ್ಷಲ್ ಪಟೇಲ್, ಅರ್ಶದೀಪ್ ಸಿಂಗ್ ವೇಗದ ಬೌಲಿಂಗ್ ದಾಳಿಯನ್ನು ಸಂಘಟಿಸಲಿದ್ದಾರೆ. ಭುವನೇಶ್ವರ್ ಕುಮಾರ್ ಕೂಡ ಅಲಭ್ಯರಾಗಿದ್ದು, ವೇಗಿಗಳಾದ ಉಮ್ರಾನ್ ಮಲಿಕ್, ಮುಖೇಶ್ ಕುಮಾರ್ ಮತ್ತು ಶಿವಂ ಮಾವಿ ಶ್ರೀಲಂಕಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದಾರೆ.

2024ರ ಟಿ20 ವಿಶ್ವಕಪ್ಗೆ ತಯಾರಿ
2022ರ ಟಿ20 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಸೋಲನುಭವಿಸಿದ ಬಳಿಕ ಬಿಸಿಸಿಐ 2024ರ ಟಿ20 ವಿಶ್ವಕಪ್ಗಾಗಿ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. ಹಿರಿಯ ಆಟಗಾರರು 2023ರ ಏಕದಿನ ವಿಶ್ವಕಪ್ನತ್ತ ಹೆಚ್ಚಿನ ಗಮನ ಹರಿಸಲಿದ್ದು, ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡಲು ತೀರ್ಮಾನಿಸಿದೆ.
ಏಷ್ಯಾಕಪ್ನಲ್ಲಿ ಭಾರತ ತಂಡವನ್ನು ಸೋಲಿಸಿದ್ದಲ್ಲದೆ, ಫೈನಲ್ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಚಾಂಪಿಯನ್ ಆಗಿರುವ ಶ್ರೀಲಂಕಾ ತಂಡ ಬಲಿಷ್ಟವಾಗಿದೆ. ಭಾರತದ ಸ್ಪಿನ್ಗೆ ನೆರವಾಗುವ ಪಿಚ್ನಲ್ಲಿ ಶ್ರೀಲಂಕಾ ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ.
ವನಿಂದು ಹಸರಂಗ, ಮಹೇನ್ ತೀಕ್ಷಣರಂತ ಉತ್ತಮ ಸ್ಪಿನ್ ಬೌಲರ್ ಇರುವುದು ಶ್ರೀಲಂಕಾದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಭಾರತದ ಯುವ ಪಡೆ ಈ ಸ್ಪಿನ್ ದಾಳಿಯನ್ನು ಎದುರಿಸಲು ಹೆಚ್ಚಿನ ಅಭ್ಯಾಸ ಮಾಡಬೇಕಿದೆ.
ಟಿ20 ಸರಣಿಗೆ ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅರ್ಶದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಕೇಶ್ ಕುಮಾರ್.