
ಭಾರತ ಪ್ರವಾಸವನ್ನು ಕೈಗೊಂಡಿರುವ ಶ್ರೀಲಂಕಾ ಟಿ ಟ್ವೆಂಟಿ ಹಾಗೂ ಟೆಸ್ಟ್ ಸರಣಿಗಳಲ್ಲಿ ಟೀಮ್ ಇಂಡಿಯಾ ವಿರುದ್ಧ ಕಣಕ್ಕಿಳಿಯುತ್ತಿದೆ. ಇತ್ತ ಇತ್ತೀಚೆಗಷ್ಟೇ ಭಾರತ ಪ್ರವಾಸವನ್ನು ಕೈಗೊಂಡಿದ್ದ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಹಾಗೂ ಟಿ ಟ್ವೆಂಟಿ ಎರಡೂ ಸರಣಿಗಳಲ್ಲಿಯೂ ಕೂಡ ವೈಟ್ ವಾಷ್ ಸಾಧನೆ ಮಾಡಿರುವ ಟೀಂ ಇಂಡಿಯಾ ಸದ್ಯ ಭಾರತ ಪ್ರವಾಸವನ್ನು ಕೈಗೊಂಡಿರುವ ಶ್ರೀಲಂಕಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯುತ್ತಿದೆ.
ಇತ್ತಂಡಗಳ ನಡುವೆ ಮೊದಲಿಗೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ನಡೆದಿದ್ದು ಟೀಮ್ ಇಂಡಿಯಾ ಎಲ್ಲಾ 3 ಪಂದ್ಯಗಳಲ್ಲಿಯೂ ಜಯ ಸಾಧಿಸುವುದರ ಮೂಲಕ ಸರಣಿಯನ್ನು ಗೆದ್ದು ಪ್ರವಾಸಿ ಶ್ರೀಲಂಕಾಗೆ ವೈಟ್ ವಾಷ್ ಬಳಿದಿದೆ. ಕಳೆದ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿ, ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಹಾಗೂ ಟಿ ಟ್ವೆಂಟಿ ಸರಣಿಗಳಲ್ಲಿ ವೈಟ್ ವಾಷ್ ಸಾಧನೆ ಮಾಡಿದ್ದ ಟೀಮ್ ಇಂಡಿಯಾ ಇದೀಗ ಶ್ರೀಲಂಕಾ ವಿರುದ್ಧದ ಟಿ ಟ್ವೆಂಟಿ ಸರಣಿಯಲ್ಲಿಯೂ ಕೂಡ ವೈಟ್ ವಾಷ್ ಮಾಡುವುದರ ಮೂಲಕ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ.
ಇನ್ನು ವಿಶ್ರಾಂತಿಯ ಕಾರಣದಿಂದ ಶ್ರೀಲಂಕಾ ವಿರುದ್ಧದ ಈ ಟ್ವೆಂಟಿ ಸರಣಿಯಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ಇದೀಗ ಶ್ರೀಲಂಕಾ ವಿರುದ್ಧ ಮಾರ್ಚ್ 4ರಂದು ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ. ಹೌದು, ಶ್ರೀಲಂಕಾ ವಿರುದ್ಧ ಮೊಹಾಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಥಮ ಟೆಸ್ಟ್ ಪಂದ್ಯದ ಮೂಲಕ ವಾಪಸ್ ಟೀಮ್ ಇಂಡಿಯಾ ಸೇರಲಿರುವ ವಿರಾಟ್ ಕೊಹ್ಲಿಗೆ ಈ ಪಂದ್ಯ ಮೈಲಿಗಲ್ಲಾಗಿದೆ. ಹೌದು, ಶ್ರೀಲಂಕಾ ವಿರುದ್ಧ ನಡೆಯಲಿರುವ ಈ ಮೊಹಾಲಿ ಟೆಸ್ಟ್ ಪಂದ್ಯ ವಿರಾಟ್ ಕೊಹ್ಲಿ ಆಡಲಿರುವ ನೂರನೇ ಟೆಸ್ಟ್ ಪಂದ್ಯವಾಗಿದೆ. ಈ ಕಾರಣದಿಂದಾಗಿ ಈ ಪಂದ್ಯ ಸಾಕಷ್ಟು ಮಹತ್ವ ಹಾಗೂ ವಿಶೇಷತೆಯನ್ನು ಹೊಂದಿದ್ದು, ದಿನದಿಂದ ದಿನಕ್ಕೆ ಈ ಪಂದ್ಯದ ವಿಷಯವಾಗಿ ಕ್ರೇಜ್ ಹೆಚ್ಚಾಗುತ್ತಿದೆ.
ಇನ್ನು ಶ್ರೀಲಂಕಾ ವಿರುದ್ಧದ ಟಿ ಟ್ವೆಂಟಿ ಸರಣಿಯಿಂದ ವಿಶ್ರಾಂತಿಗೆಂದು ಹೊರಗುಳಿದಿದ್ದ ವಿರಾಟ್ ಕೊಹ್ಲಿ ಈಗಾಗಲೇ ಮೊಹಾಲಿ ಕ್ರೀಡಾಂಗಣವನ್ನು ತಲುಪಿದ್ದು, ತಮ್ಮ ನೂರನೇ ಟೆಸ್ಟ್ ಪಂದ್ಯಕ್ಕಾಗಿ ನೆಟ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಅತ್ತ ರೋಹಿತ್ ಶರ್ಮಾ ಮತ್ತು ಭಾರತ ತಂಡದ ಇತರೆ ಆಟಗಾರರು ಇಂದು ( ಫೆಬ್ರವರಿ 28 ) ಮೊಹಾಲಿ ತಲುಪಿದ್ದು ಮಂಗಳವಾರದಿಂದ ಅಭ್ಯಾಸಕ್ಕಾಗಿ ಮೈದಾನಕ್ಕಿಳಿಯಲಿದ್ದಾರೆ.
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪ್ರಕಟಿಸಲಾಗಿರುವ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭಮನ್ ಗಿಲ್, ರಿಷಬ್ ಪಂತ್, ಕೆಎಸ್ ಭರತ್, ಆರ್ ಅಶ್ವಿನ್ (ಫಿಟ್ನೆಸ್ ಆಧಾರದ ಮೇಲೆ), ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್, ಜೆ ಬುಮ್ರಾ, ಎಂ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್