ಜುಲೈ 12ರಿಂದ ಆರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಶುಕ್ರವಾರ, ಜೂನ್ 23ರಂದು ಭಾರತದ ಟೆಸ್ಟ್ ಮತ್ತು ಏಕದಿನ ತಂಡಗಳನ್ನು ಹೆಸರಿಸಿದೆ.
ಭಾರತ ಕ್ರಿಕೆಟ್ ತಂಡವು ಮುಂದಿನ ತಿಂಗಳು ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದ್ದು, ಜುಲೈ 12ರಂದು ಎರಡು ಪಂದ್ಯಗಳ ಟೆಸ್ಟ್ ಸರಣಿಯೊಂದಿಗೆ ಪ್ರವಾಸ ಪ್ರಾರಂಭವಾಗಲಿದೆ. ನಂತರ ಮೂರು ಏಕದಿನ ಪಂದ್ಯಗಳು ಮತ್ತು ಐದು ಟಿ20 ಪಂದ್ಯಗಳನ್ನು ಆಡಲಿದೆ. ಇದೇ ವೇಳೆ ಭಾರತ ತಂಡದಲ್ಲಿ ಕೆಲವು ಹೊಸ ಮುಖಗಲಿಗೆ ಅವಕಾಶ ನೀಡಲಾಗಿದೆ.

ಇದೇ ವೇಳೆ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡದ ಆಯ್ಕೆ ಬಗ್ಗೆ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲು ಹೊಸ ನಾಯಕನಿಗೆ ಜವಾಬ್ದಾರಿ ನೀಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಮೂರು ಪಂದ್ಯಗಳ ಏಕದಿನ ಸರಣಿಯು ಜುಲೈ 27, ಜುಲೈ 29 ಮತ್ತು ಆಗಸ್ಟ್ 1ರಂದು ನಡೆಯಲಿದೆ. ಟೀಂ ಇಂಡಿಯಾ ಖಾಯಂ ನಾಯಕ ರೋಹಿತ್ ಶರ್ಮಾ ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಇದೇ ವೇಳೆ ಹಾರ್ದಿಕ್ ಪಾಂಡ್ಯ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.
ರೋಹಿತ್ ಶರ್ಮಾ ಬದಲಿಗೆ ಏಕದಿನ ಸರಣಿಯಲ್ಲಿ ಭಾರತ ತಂಡಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಬೇಕಿತ್ತು ಎಂದು ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ತಿಳಿಸಿದ್ದಾರೆ.

"ವೆಸ್ಟ್ ಇಂಡೀಸ್ ವಿರುದ್ಧದ ಭಾರತ ಏಕದಿನ ತಂಡ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಹೊಸ ತಂಡದೊಂದಿಗೆ ಮುನ್ನಡೆಯಬೇಕಿತ್ತು. ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿದ ಯುವ ಆಟಗಾರರಿಗೆ ಇಲ್ಲಿ ಅವಕಾಶ ಸಿಗಬೇಕಿತ್ತು," ಎಂದು ಹೇಳಿದ್ದಾರೆ.
"ಭಾರತ ತಂಡದ ಭವಿಷ್ಯದ ವಿಚಾರವಾಗಿ, ಇದು ಹಾರ್ದಿಕ್ ಪಾಂಡ್ಯ ಅವರ ಸಾಮರ್ಥ್ಯ ಪ್ರದರ್ಶನಕ್ಕೆ ಉತ್ತಮ ಅವಕಾಶವಾಗಿತ್ತು. ಬಹುಶಃ ವಿಶ್ವಕಪ್ ಪಂದ್ಯಾವಳಿ ಪರಿಗಣಿಸಿ ಈ ಆಯ್ದ ತಂಡವನ್ನು ಪ್ರಕಟಿಸಿದ್ದಾರೆ," ಎಂದು ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಹರ್ಭಜನ್ ಸಿಂಗ್ ತಿಳಿಸಿದ್ದಾರೆ.
ಭಾರತ ರಾಷ್ಟ್ರೀಯ ತಂಡದಿಂದ ಚೊಚ್ಚಲ ಕರೆ ಸ್ವೀಕರಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ವೇಗದ ಬೌಲರ್ ಮುಖೇಶ್ ಕುಮಾರ್ ಅವರು ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಏಕದಿನ ಮತ್ತು ಟೆಸ್ಟ್ ತಂಡದಲ್ಲಿ ಸೇರ್ಪಡೆಗೊಂಡಿದ್ದಾರೆ.
ಇನ್ನು ಕಳೆದ ವರ್ಷ ಡಿಸೆಂಬರ್ನಲ್ಲಿ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ರಿಷಭ್ ಪಂತ್ ಅನುಪಸ್ಥಿತಿಯಲ್ಲಿ, ಭಾರತೀಯ ಆಯ್ಕೆ ಸಮಿತಿಯು ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ಅವರನ್ನು ಏಕದಿನ ತಂಡದಲ್ಲಿ ವಿಕೆಟ್ ಕೀಪರ್ಗಳಾಗಿ ಆಯ್ಕೆ ಮಾಡಿದೆ.
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನಾದ್ಕಟ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.