
ಒಂದೆಡೆ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಲುವಾಗಿ ನಡೆದ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆ ಸದ್ದು ಮಾಡುತ್ತಿದ್ದರೆ, ಮತ್ತೊಂದೆಡೆ ಫೆಬ್ರವರಿ 16ರಿಂದ ಆರಂಭವಾಗಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಟಿ ಟ್ವೆಂಟಿ ಸರಣಿ ಸುದ್ದಿಗೀಡಾಗಿದೆ.
ಹೌದು, ಭಾರತ ಪ್ರವಾಸವನ್ನು ಕೈಗೊಂಡಿರುವ ವೆಸ್ಟ್ ಇಂಡೀಸ್ ಟೀಂ ಇಂಡಿಯಾ ವಿರುದ್ಧ ಈಗಾಗಲೇ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಕಣಕ್ಕಿಳಿದು ಎಲ್ಲಾ ಪಂದ್ಯಗಳಲ್ಲಿಯೂ ಹೀನಾಯವಾಗಿ ಸೋಲುವುದರ ಮೂಲಕ ವೈಟ್ ವಾಷ್ ಮುಖಭಂಗಕ್ಕೆ ಒಳಗಾಗಿದೆ. ಇತ್ತ ಭಾರತ ಏಕದಿನ ತಂಡದ ಪೂರ್ಣಾವಧಿ ನಾಯಕನಾಗಿ ಆಯ್ಕೆಯಾದ ಮೇಲೆ ಇದೇ ಮೊದಲ ಬಾರಿಗೆ ಈ ಸರಣಿ ಮೂಲಕ ಟೀಮ್ ಇಂಡಿಯಾವನ್ನು ಮುನ್ನಡೆಸಿದ ರೋಹಿತ್ ಶರ್ಮಾ ವೈಟ್ ವಾಷ್ ಸಾಧನೆ ಮಾಡುವ ಮೂಲಕ ಶುಭಾರಂಭವನ್ನು ಮಾಡಿದ್ದಾರೆ.
ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದ ಕೆಳಗಿಳಿದ ನಂತರ ಭಾರತ ಟಿ ಟ್ವೆಂಟಿ ತಂಡದ ಪೂರ್ಣಾವಧಿ ನಾಯಕನಾಗಿ ಆಯ್ಕೆಯಾಗಿದ್ದ ರೋಹಿತ್ ಶರ್ಮಾ ಅದರ ಬೆನ್ನಲ್ಲೇ ನಡೆದ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಯಲ್ಲಿಯೂ ಕೂಡ ಇದೇ ರೀತಿಯ ವೈಟ್ ವಾಷ್ ಸಾಧನೆಯನ್ನು ಮಾಡಿದ್ದರು. ಇನ್ನು ಸದ್ಯ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ ಟ್ವೆಂಟಿ ಸರಣಿಗೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲಾ 3 ಪಂದ್ಯಗಳು ಸಹ ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿವೆ. ಸದ್ಯ ಭಾರತ ದೇಶದಲ್ಲಿ ಕೊರೋನಾವೈರಸ್ ಸೋಂಕಿತರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿರುವ ಕಾರಣ ಏಕದಿನ ಸರಣಿಯನ್ನು ಸಂಪೂರ್ಣವಾಗಿ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬಿಸಿಸಿಐ ಪಂದ್ಯಗಳನ್ನು ವೀಕ್ಷಿಸಲು ಪ್ರೇಕ್ಷಕರಿಗೆ ಅನುಮತಿ ನೀಡಿರಲಿಲ್ಲ.
ಆದರೆ ಕೋಲ್ಕತ್ತಾದಲ್ಲಿ ನಡೆಯಲಿರುವ 3 ಪಂದ್ಯಗಳ ಟ್ವೆಂಟಿ ಸರಣಿಯನ್ನು ವೀಕ್ಷಿಸಲು ಪ್ರೇಕ್ಷಕರಿಗೆ 75% ಅನುಮತಿಯನ್ನು ಪಶ್ಚಿಮ ಬಂಗಾಳ ಸರ್ಕಾರ ನೀಡಿದೆ ಎಂದು ಈ ಹಿಂದೆ ಕ್ರಿಕೆಟ್ ಅಸೋಸಿಯೇಶನ್ ಆಫ್ ಬೆಂಗಾಲ್ ಅಧ್ಯಕ್ಷ ಅವಿಶೇಕ್ ದಾಲ್ಮಿಯಾ ತಿಳಿಸಿದ್ದರು. ಆದರೆ ಇದೀಗ ಬಂದಿರುವ ಹೊಸ ಸುದ್ದಿಯ ಪ್ರಕಾರ ಫೆಬ್ರವರಿ 16ರಂದು ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಪ್ರಥಮ ಟಿ ಟ್ವೆಂಟಿ ಪಂದ್ಯ ಪ್ರೇಕ್ಷಕರ ಅನುಪಸ್ಥಿತಿಯಲ್ಲಿ ನಡೆಯಲಿದೆ. ಇದೀಗ ಈ ನಿರ್ಧಾರ ಕ್ರಿಕೆಟ್ ಅಸೋಸಿಯೇಶನ್ ಆಫ್ ಬೆಂಗಾಲ್ಗೆ ಹಿನ್ನಡೆಯನ್ನುಂಟು ಮಾಡಿದ್ದು, ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವೆ ನಡೆಯಲಿರುವ ದ್ವಿತೀಯ ಹಾಗೂ ತೃತೀಯ ಟಿ ಟ್ವೆಂಟಿ ಪಂದ್ಯಗಳನ್ನು ವೀಕ್ಷಿಸಲು ಪ್ರೇಕ್ಷಕರಿಗೆ ಅನುಮತಿ ನೀಡಬೇಕೆಂದು ಬಿಸಿಸಿಐ ಬಳಿ ಮನವಿಯನ್ನು ಮಾಡಿದೆ. ಬೆಂಗಾಲ್ ಕ್ರಿಕೆಟ್ ಅಸೋಸಿಯೇಷನ್ ಮಾಡಿರುವ ಈ ಮನವಿಗೆ ಬಿಸಿಸಿಐ ಅಸ್ತು ಎನ್ನುತ್ತಾ ಅಥವಾ ಮೊದಲ ಪಂದ್ಯದ ರೀತಿಯೇ ದ್ವಿತೀಯ ಹಾಗೂ ತೃತೀಯ ಪಂದ್ಯಗಳನ್ನೂ ಪ್ರೇಕ್ಷಕರ ಅನುಪಸ್ಥಿತಿಯಲ್ಲಿಯೇ ನಡೆಸಲು ತೀರ್ಮಾನಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.
ಟಿ ಟ್ವೆಂಟಿ ಸರಣಿಗೆ ಪ್ರಕಟಿಸಲಾಗಿರುವ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್, ಅವೇಶ್ ಖಾನ್, ಹರ್ಷಲ್ ಪಟೇಲ್
ಟಿ ಟ್ವೆಂಟಿ ಸರಣಿಗೆ ಪ್ರಕಟಿಸಲಾಗಿರುವ ವೆಸ್ಟ್ ಇಂಡೀಸ್ ತಂಡ: ಕೀರಾನ್ ಪೊಲಾರ್ಡ್ (ನಾಯಕ), ನಿಕೋಲಸ್ ಪೂರನ್ (ಉಪನಾಯಕ), ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ರೋಸ್ಟನ್ ಚೇಸ್, ಶೆಲ್ಡನ್ ಕಾಟ್ರೆಲ್, ಡೊಮಿನಿಕ್ ಡ್ರೇಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೆಲ್ ಹೊಸೈನ್, ಬ್ರಾಂಡನ್ ಕಿಂಗ್, ರೋವ್ಮನ್ ಪೊವೆಲ್, ಓಡಿಯನ್ ಸ್ಮಿತ್, ರೊಮಾರಿಯೋ ಮೇಯರ್ಸ್, ಕೆ ಹೇಡನ್ ವಾಲ್ಷ್ ಜೂ