ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದ್ದು, ಮೊದಲ ಪಂದ್ಯದಲ್ಲಿ ಭಾರತ 5 ವಿಕೆಟ್ಗಳ ಗೆಲುವು ಕಂಡಿದ್ದರೆ, ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 6 ವಿಕೆಟ್ಗಳ ಜಯ ಸಾಧಿಸಿದೆ. ಇದೀಗ ಏಕದಿನ ಸರಣಿಯು ಪ್ರಸ್ತುತ 1-1 ಅಂತರದಲ್ಲಿ ಸಮಬಲಗೊಂಡಿದೆ.
ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿಗೆ ಮತ್ತೊಮ್ಮೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

ಸರಣಿ ನಿರ್ಣಾಯಕ ಪಂದ್ಯಕ್ಕಾಗಿ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಟ್ರಿನಿಡಾಡ್ಗೆ ತಂಡದೊಂದಿಗೆ ಪ್ರಯಾಣಿಸಿಲ್ಲ ಮತ್ತು ಪಂದ್ಯಕ್ಕಾಗಿ ಬೆಂಚ್ ಕಾಯಿಸಬಹುದು ಎಂದು ವರದಿಯಾಗಿದೆ.
ವರದಿಗಳ ಪ್ರಕಾರ, ವಿರಾಟ್ ಕೊಹ್ಲಿ ಅವರು ಭಾರತ ತಂಡದೊಂದಿಗೆ ಟ್ರಿನಿಡಾಡ್ಗೆ ಪ್ರಯಾಣಿಸಿಲ್ಲ ಎಂಬುದನ್ನು ಗಮನದಲ್ಲಿಟ್ಟುಕೊಂಡು ಆಡುವ 11ರ ಬಳಗದಿಂದ ಹೊರಗಿಡಲಾಗುತ್ತದೆಯೇ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ.
ಮೊದಲ ಏಕದಿನ ಪಂದ್ಯದಲ್ಲಿ ಸುಲಭ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಹಿರಿಯ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಮತ್ತು ನಾಯಕ ರೋಹಿತ್ ಶರ್ಮಾ ಅವರನ್ನು ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ಮ್ಯಾನೇಜ್ಮೆಂಟ್ ವಿಶ್ರಾಂತಿ ನೀಡಲು ನಿರ್ಧರಿಸಿತು.
ಆದರೆ, ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ತಂಡ ಎರಡನೇ ಎರಡನೇ ಏಕದಿನ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿತು. ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದ್ದು ಹಿನ್ನಡೆಯಾಯಿತು. ಈ ವೇಳೆ ಸರಣಿ ಕಳೆದುಕೊಳ್ಳುವ ಭೀತಿಯಲ್ಲಿದ್ದ ವೆಸ್ಟ್ ಇಂಡೀಸ್ ಶನಿವಾರದ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಿತು.
2019ರಿಂದ ವೆಸ್ಟ್ ಇಂಡೀಸ್ ತಂಡ ಭಾರತ ತಂಡದ ವಿರುದ್ಧ ಮೊದಲ ಏಕದಿನ ಪಂದ್ಯವನ್ನು ಗೆದ್ದು, ಸತತ ಒಂಬತ್ತು ಸೋಲಿನ ಸರಪಳಿಯನ್ನು ಕಳಚಿತು.
ಬಾರ್ಬಡೋಸ್ನ ಬ್ರಿಡ್ಜ್ಟೌನ್ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಕೇವಲ 181 ರನ್ಗಳಿಗೆ ಆಲೌಟ್ ಆಯಿತು. ಆರಂಭಿಕ ಇಶಾನ್ ಕಿಶನ್ 55 ರನ್ ಗಳಿಸಿದರೆ, ಶುಭ್ಮನ್ ಗಿಲ್ 49 ಎಸೆತಗಳಲ್ಲಿ 34 ರನ್ ಗಳಿಸುವಲ್ಲಿ ಯಶಸ್ವಿಯಾದರು.
ಆದರೆ, 2ನೇ ಏಕದಿನ ಪಂದ್ಯದಲ್ಲಿ ಅವಕಾಶ ಪಡೆದ ಸಂಜು ಸ್ಯಾಮ್ಸನ್ ಸೇರಿದಂತೆ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವಿಭಾಗ ಕೈಕೊಟ್ಟಿದ್ದರಿಂದ ದೊಡ್ಡ ಮೊತ್ತ ಗಳಿಸಲು ವಿಫಲವಾಯಿತು.
182 ರನ್ಗಳ ಚೇಸಿಂಗ್ ಸಮಯದಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕ ಶಾಯ್ ಹೋಪ್ 80 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ ಅಜೇಯ 63 ರನ್ ಗಳಿಸಿದರು.
ಇನ್ನು ಭಾರತ ತಂಡ ಮೂರನೇ ಮತ್ತು ನಿರ್ಣಾಯಕ ಪಂದ್ಯಕ್ಕೆ ಸಂಜು ಸ್ಯಾಮ್ಸನ್ಗೆ ಮತ್ತೆ ಅವಕಾಶ ನೀಡುವ ಸಾಧ್ಯತೆ ಇದೆ. ನಾಯಕ ರೋಹಿತ್ ಶರ್ಮಾ ಮರಳಬಹುದು.
ಮಂಗಳವಾರ, ಆಗಸ್ಟ್ 1ರಂದು ಟ್ರಿನಿಡಾಡ್ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಸೆಣಸಾಡಲಿವೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾ ಐದು ಟಿ20 ಪಂದ್ಯಗಳತ್ತ ಗಮನ ಹರಿಸುವ ಮೊದಲು ಅಂತಿಮ ಏಕದಿನ ಪಂದ್ಯದಲ್ಲಿ ಅದ್ಭುತ ಪುನರಾಗಮನ ಮಾಡಲು ಎದುರು ನೋಡುತ್ತಿದೆ.