
ಕೊರೊನಾವೈರಸ್ ಕಾರಣದಿಂದಾಗಿ ಭಾರತದಲ್ಲಿ ಕ್ರಿಕೆಟ್ ಚಟುವಟಿಗಗಳಿಗೆ ಎರಡನೇ ಬಾರಿ ಬ್ರೇಕ್ ಬಿದ್ದು ಇದೀಗ ಮತ್ತೆ ಕ್ರಿಕೆಟ್ ಸರಣಿಯ ಆರಂಭಕ್ಕೆ ಸಜ್ಜಾಗುತ್ತಿದೆ. ಕಳೆದ ಮೇ ತಿಂಗಳಿನಲ್ಲಿ ಐಪಿಎಲ್ ಮೊದಲಾರ್ಧದಲ್ಲಿ ಕೊರೊನಾವೈರಸ್ನ ಕಾರಣದಿಂದಾಗಿ ಸ್ಥಗಿತವಾದ ಬಳಿಕ ಭಾರತದಲ್ಲಿ ಯಾವುದೇ ಕ್ರಿಕೆಟ್ ಟೂರ್ನಿ ನಡೆದಿಲ್ಲ. ಇದೀಗ ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಚಟುವಟಿಕೆಗೆ ಮತ್ತೆ ಚಾಲನೆ ದೊರೆಯಲಿದೆ.
ಮೂರು ಪಂದ್ಯಗಳ ಟಿ20 ಸರಣಿ ಹಾಗೂ ಎರಡು ಪಂದ್ಯಗಳ ಟೆಸ್ಟ್ ಸರಣಿ ನ್ಯೂಜಿಲೆಂಡ್ ವಿರುದ್ಧ ನಡೆಯಲಿದೆ. ಇದರಲ್ಲಿ ಟೆಸ್ಟ್ ಸರಣಿಯ ಎರಡನೇ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ನಡೆಯಲಿದೆ. ಈ ಪಂದ್ಯಕ್ಕೆ ಸ್ಟೇಡಿಯಂಗೆ ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರಿಗೆ ಅವಕಾಶ ನೀಡಲು ಮಹಾರಾಷ್ಟ್ರ ಸರ್ಕಾರ ಮುಂಬೈ ಕ್ರಿಕೆಟ್ ಅಸೋಸಿಯೇಶನ್ಗೆ ಅನುಮತಿಯನ್ನು ನೀಡಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಹೀಗಾಗಿ ಭಾರತದಲ್ಲಿ ಮತ್ತೆ ಪೂರ್ಣ ಪ್ರಮಾಣದ ಪ್ರೇಕ್ಷಕರ ಸಮ್ಮುಖದಲ್ಲಿ ಕ್ರಿಕೆಟ್ ಪಂದ್ಯ ನಡೆಯುವ ದಿನ ದೂರವಿಲ್ಲ.
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಮೊದಲಿಗೆ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಮೂರು ಪಂದ್ಯಗಳು ನವೆಂಬರ್ 17, 19 ಹಾಗೂ 21ರಂದು ನಡೆಯಲಿದೆ. ಮೊದಲ ಪಂದ್ಯ ಜೈಪುರದಲ್ಲಿ ನಡೆದರೆ ಎರಡನೇ ಪಂದ್ಯ ರಾಂಚಿಯ ಜೆಎಸ್ಸಿಎ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ. ಮೂರನೇ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಣಗಣದಲ್ಲಿ ನಡೆಯಲಿದೆ.
ಚುಟುಕು ಮಾದರಿಯ ಸರಣಿಯ ಬಳಿಕ ಟೆಸ್ಟ್ ಸರಣಿ ನಡೆಯಲಿದೆ. ಮೊದಲ ಪಂದ್ಯ ನವೆಂಬರ್ 25ರಿಂದ 19ರವರೆಗೆ ನಡೆಯಲಿದ್ದು ಕಾನ್ಪುರದ ಗ್ರೀನ್ ಪಾರ್ಕ್ ಈ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಎರಡನೇ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಡಿಸೆಂಬರ್ 3ರಿಂದ 7ರ ವರೆಗೆ ನಡೆಯಲಿದೆ. ವಾಂಖೆಡೆಯಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯವನ್ನು ಹೊರತುಪಡಿಸಿ ಉಳಿದ ಎಲ್ಲಾ ಪಂದ್ಯಗಳಿಗೂ ಸ್ಟೇಡಿಯಂನ ಸಾಮರ್ಥ್ಯದ ಅರ್ಧದಷ್ಟು ಪ್ರೇಕ್ಷಕರಿಗೆ ಮಾತ್ರ ಅನುಮತಿಯಿದೆ.
ಭಾರತದಲ್ಲಿ ಸದ್ಯ ಕೊರೊನಾವೈರಸ್ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ಕೊರೊನಾವೈರಸ್ನ ನಿಯಮಗಳನ್ನು ಕೂಡ ಸಡಿಲಿಸಲಾಗಿದೆ. ಹೀಗಾಗಿ ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಗೂ ಪೂರ್ಣ ಪ್ರಮಾಣದಲ್ಲಿ ಅನುಮತಿ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತದ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಆರ್ ಅಶ್ವಿನ್, ಅಕ್ಷರ್ ಪಟೇಲ್ , ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್
ಟೀಂ ಇಂಡಿಯಾ ಟೆಸ್ಟ್ ತಂಡ: ಅಜಿಂಕ್ಯಾ ರಹಾನೆ (ನಾಯಕ), ಚೇತೇಶ್ವರ ಪೂಜಾರ (ಉಪನಾಯಕ), ಕೆ.ಎಲ್. ರಾಹುಲ್, ಮಯಾಂಕ್ ಅಗರ್ವಾಲ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ದಿಮಾನ್ ಸಹಾ (ಡಬ್ಲ್ಯುಕೆ), ಕೆ.ಎಸ್ ಭರತ್ (ವಿಕೆಟ್ ಕೀಪರ್), ಆರ್ ಜಡೇಜಾ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ , ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ ಕೃಷ್ಣ