ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಸತತ ಐದು ಗೆಲುವು ಸಾಧಿಸಿದ್ದು ಅದ್ಬುತ ಲಯದಲ್ಲಿದೆ. ಟೂರ್ನಿಯಲ್ಲಿ ಅಜೇಯವಾಗಿ ಉಳಿದುಕೊಂಡಿರುವ ಏಕೈಕ ತಂಡವಾಗಿದೆ ಭಾರತ. ಈ ಗೆಲುವಿನ ಓಟವನ್ನು ಮುಂದುವರಿಸುವ ಆತ್ಮವಿಶ್ವಾಸದಲ್ಲಿರುವ ರೋಹಿತ್ ಬಳಗಕ್ಕೆ ಮುಂದಿನ ಪಂದ್ಯದಲ್ಲಿ ಎದುರಾಳಿಯಾಗಿರುವುದು ಇಂಗ್ಲೆಂಡ್.
ಸತತ ಸೋಲಿನ ಸುಳಿಗೆ ಸಿಲುಕಿ ಟೀವ್ರ ಟೀಕೆಗೆ ಗುರಿಯಾಗಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್ ಸ್ಥಿತಿ ಅತ್ಯಂತ ಹೀನಾಯವಾಗಿದೆ. ಆಡಿರುವ ಐದು ಪಂದ್ಯಗಳಲ್ಲಿನಾಲ್ಕು ಪಂದ್ಯಗಳನ್ನು ಸೋತಿರುವ ಇಂಗ್ಲೆಂಡ್ ತಂಡ ಬಹುತೇಕ ಟೂರ್ನಿಯಿಂದ ಹೊರಬೀಳುವ ಹಂತದಲ್ಲಿದೆ. ಇಂಥಾ ಸಂದರ್ಭದಲ್ಲಿ ಟೀಮ್ ಇಂಡಿಯಾ ಎದುರಾಳಿಯಾಗಿರುವುದು ಇಂಗ್ಲೆಂಡ್ ತಂಡಕ್ಕೆ ದೊಡ್ಡ ಸವಾಲಾಗಿರುವುದರಲ್ಲಿ ಅನುಮಾನವಿಲ್ಲ.

ಇನ್ನು ಇಂಗ್ಲೆಂಡ್ ವಿರುದ್ಧದ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಆಡುವ ಬಳಗದ ಬಗ್ಗೆ ಕುತೂಹಲ ಇದ್ದೇ ಇದೆ. ಈ ಕುತೂಹಲಕಾರಿ ಪ್ರಶ್ನೆಗೆ ಉತ್ತರ ಇಲ್ಲಿದೆ.
ಬ್ಯಾಟಿಂಗ್ ವಿಭಾಗದಲ್ಲಿ ಇಲ್ಲ ಯಾವುದೇ ಬದಲಾವಣೆ
ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಅಗ್ರ ಕ್ರಮಾಂಕದ ಆಟಗಾರರಾದ ರೋಹಿತ್ ಶರ್ಮಾ, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿಯಿಂದ ಅದ್ಭುತವಾದ ಪ್ರದರ್ಶನ ಬರುತ್ತಿದೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಐಯ್ಯರ್ ಅವರಿಂದ ದೊಡ್ಡ ಇನ್ನಿಂಗ್ಸ್ವಿಂದರ ನಿರೀಕ್ಷೆಯಿದ್ದು ಕೆಎಲ್ ರಾಹುಲ್ ಕೂಡ ತಮ್ಮ ಜವಾಬ್ಧಾರಿಯನ್ನು ಅದ್ಭುತವಾಗಿ ನಿರ್ವಹಿಸುತ್ತಿದ್ದಾರೆ.
ಸೂರ್ಯ ಸ್ಥಾನ ಖಚಿತ
ಇನ್ನು ಹಾರ್ದಿಕ್ ಪಾಂಡ್ಯ ಗಾಯದಿಂದಾಗಿ ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೂ ಅಲಭ್ಯವಾಗಲಿದ್ದಾರೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಮುಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಕಣಕ್ಕಿಳಿಯುವುದು ಖಚಿತವಾಗಿದೆ. ಕಳೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ರನೌಟ್ ಆಗುವ ಮೂಲಕ ಸೂರ್ಯ ನಿರಾಸೆ ಅನುಭವಿಸಿದ್ದರು. ಈಗ ಅವರಿಗೆ ಮತ್ತೊಂದು ಅವಕಾಶ ದೊರೆತಂತಾಗಲಿದೆ.
ಸ್ಪಿನ್ ದಿಗ್ಗಜ ಅಶ್ವಿನ್ಗೆ ಅವಕಾಶ?
ಟೀಮ್ ಇಂಡಿಯಾದ ಬೌಲಿಂಗ್ ವಿಭಾಗದಲ್ಲಿ ಒಂದು ಬದಲಾವನೆ ಮಾಡಿಕೊಳ್ಳುವ ಸಾಧ್ಯತೆಗಳು ಗೋಚರಿಸುತ್ತಿದೆ. ಇಂಗ್ಲೆಂಡ್ ವಿರುದ್ಧದ ಈ ಪಂದ್ಯ ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ನಡೆಯಲಿದ್ದು ಇಲ್ಲಿ ಭಾರತ ಮೂರು ಸ್ಪಿನ್ ಅಸ್ತ್ರಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಸ್ಪಿನ್ನರ್ಗಳಾದ ರವೀಂದ್ರ ಜಡೇಜಾ ಹಾಗೂ ಕುಲ್ದೀಪ್ ಯಾದವ್ ಜೊತೆಗೆ ಆರ್ ಅಶ್ವಿನ್ ಈ ಪಂದ್ಯದಲ್ಲಿ ಭಾರತದ ಆಡುವ ಬಳಗದಲ್ಲಿ ಸ್ಥಾನ ಗೊಟ್ಟಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
ಅಶ್ವಿನ್ಗೆ ಸ್ಥಾನ ಬಿಟ್ಟುಕೊಡುವವರು ಯಾರು?
ಟೀಮ್ ಇಂಡಿಯಾದ ಆಡುವ ಬಳಗದಲ್ಲಿ ಆರ್ ಅಶ್ವಿನ್ ಸೇರ್ಪಡೆಯಾಗಬೇಕಿದ್ದರೆ ಅವರಿಗೆ ಸ್ಥಾನ ಬಿಟ್ಟುಕೊಡುವ ಆ ಆಟಗಾರ ಯಾರು ಎನ್ನುವುದು ಕೂಡ ಪ್ರಶ್ನೆಯಾಗಿದೆ. ಶಾರ್ದೂಲ್ ಠಾಕೂರ್ ಸ್ಥಾನದಲ್ಲಿ ಕಳೆದ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದ ಮೊಹಮ್ಮದ್ ಶಮಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಹೀಗಾಗಿ ಜಸ್ಪ್ರೀತ್ ಬೂಮ್ರಾ ಜೊತೆಗೆ ಶಮಿ ಸಾಥ್ ನೀಡಿದರೆ ಸಿರಾಜ್ಗೆ ಈ ಪಂದ್ಯದಲ್ಲಿ ವಿಶ್ರಾಂತಿ ನೀಡಿದರೂ ಅಚ್ಚರಿಯಿಲ್ಲ.