ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್ ಗವಾಸ್ಕರ್ ಸರಣಿಯ ನಾಲ್ಕನೇ ಟೆಸ್ಟ್ ಮೆಲ್ಬರ್ನ್ನಲ್ಲಿ ನಡೆಯಲಿದೆ. ಈ ಟೆಸ್ಟ್ ಪಂದ್ಯಕ್ಕಾಗಿ ಉಭಯ ತಂಡಗಳು ಭರದ ಸಿದ್ಧತೆ ನಡೆಸಿವೆ. ಸರಣಿಯಲ್ಲಿ ಉಭಯ ತಂಡಗಳು ಈಗಾಗಲೇ ತಲಾ ಒಂದು ಟೆಸ್ಟ್ ಪಂದ್ಯ ಗೆದ್ದಿರುವುದರಿಂದ ರೋಚಕತೆ ಹೆಚ್ಚಿಸಿದೆ. ಡಿಸೆಂಬರ್ 26 ರಂದು ನಡೆಯಲಿರುವ ಬಾಕ್ಸಿಂಗ್ ಡೇ ಟೆಸ್ಟ್ನತ್ತ ಎಲ್ಲರ ಚಿತ್ತ ನೆಟ್ಟಿದೆ. ಈ ಟೆಸ್ಟ್ ಗೆಲುವಿನ ವಿಶ್ವಾಸದಲ್ಲಿ ಟೀಮ್ ಇಂಡಿಯಾ ಇದೆ.
ಮೆಲ್ಬರ್ನ್ನಲ್ಲಿ ಟೀಮ್ ಇಂಡಿಯಾ ಸ್ಥಿರ ಪ್ರದರ್ಶನ ನೀಡಿ ಗೆಲುವಿನ ಕೇಕೆ ಹಾಕಲು ಪ್ಲ್ಯಾನ್ ಮಾಡಿಕೊಂಡಿದೆ. ಹೀಗಾಗಿ ಮಹತ್ವದ ಟೆಸ್ಟ್ ಪಂದ್ಯಕ್ಕೆ ಕೆಲವು ಬದಲಾವಣೆಗಳಿಂದ ತಂಡ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬ ಬಗ್ಗೆ ವರದಿ ಇಲ್ಲಿದೆ.

ಮೆಲ್ಬರ್ನ್ನಲ್ಲಿ ನಡೆಯುವ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದೆ. ಹೀಗಾಗಿ ಅಳೆದು ತೂಗಿ ಆಟಗಾರರಿಗೆ ಮಣೆ ಹಾಕುವ ನಿರೀಕ್ಷೆ ಇದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯಲ್ಲಿ ಮುನ್ನಡೆ ಸಾಧಿಸುವ ಕನಸು ಹೊಂದಿದೆ. ಮೂರನೇ ಟೆಸ್ಟ್ ಪಂದ್ಯ ಡ್ರಾ ಆಗಿದ್ದರಿಂದ ಎಲ್ಲರ ಚಿತ್ತ ನಾಲ್ಕನೆ ಟೆಸ್ಟ್ ಮೇಲೆ ನೆಟ್ಟಿದೆ.
ಟೀಂ ಇಂಡಿಯಾ ಕಳೆದ ಪ್ರವಾಸದಲ್ಲೂ ಈ ಅಂಗಳದಲ್ಲಿ ಆಡಿದ ಇಬ್ಬರು ಸ್ಪಿನ್ ಬೌಲರ್ಗಳೊಂದಿಗೆ ಕಣಕ್ಕೆ ಇಳಿದಿತ್ತು. ಈ ಬಾರಿಯೂ ಅದೇ ಫಾರ್ಮುಲಾ ಯೂಸ್ ಮಾಡುವ ಸಾಧ್ಯತೆ ಇದೆ. ಹೀಗಾಗಿ ಟೀಮ್ ಇಂಡಿಯಾ ಬಾಕ್ಸಿಂಗ್ ಡೆ ಟೆಸ್ಟ್ನಲ್ಲಿ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಕಳೆದ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ ಬೌಲ್ ಮಾಡಿರುವ ಮೊಹಮ್ಮದ್ ಸಿರಾಜ್ ಈ ಬಾರಿ ಬೆಂಚ್ ಕಾಯಬಹುದು.
ಮೊಹಮ್ಮದ್ ಸಿರಾಜ್ ಮತ್ತು ಆಕಾಶದೀಪ್ ಪೈಕಿ ಒಬ್ಬ ವೇಗದ ಬೌಲರ್ ಅನ್ನು ಕೈಬಿಡಬೇಕಾಗುತ್ತದೆ. ಸಿರಾಜ್ ಮೆಲ್ಬರ್ನ್ ಟೆಸ್ಟ್ ಆಡುವುದು ಅನುಮಾನ ಎಂದು ಹೇಳಲಾಗುತ್ತಿದೆ. ಈ ವೇಳೆ ಆಕಾಶ್ ದೀಪ್ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ಇವರು ಬ್ರಿಸ್ಬೇನ್ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ನ ಲ್ಲಿ ಸ್ಥಿರ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗಿದ್ದರು. ಹೀಗಾಗಿ ಟೀಮ್ ಮ್ಯಾನೇಜ್ಮೆಂಟ್ ಇವರ ಮೇಲೆ ವಿಶ್ವಾಸ ಇಡುವ ಸಾಧ್ಯತೆ ಇದೆ.

ಮೂರನೇ ಕ್ರಮಾಂಕದಲ್ಲಿ ಟೀಮ್ ಇಂಡಿಯಾ ಪರ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿರುವ ಶುಭಮನ್ ಗಿಲ್ ಅವರ ಸ್ಥಾನಕ್ಕೂ ಅಪಾಯ ಇದೆ ಎಂದು ಹೇಳಲಾಗುತ್ತಿದೆ. ಇವರ ಸ್ಥಾನದಲ್ಲಿ ಯಾರಿಗೆ ಅವಕಾಶ ನೀಡಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.