ಚಾಂಪಿಯನ್ಸ್ ಟ್ರೋಫಿ 2025ರ ಮೊದಲ ಸೆಮಿಫೈನಲ್ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಳೆ ಅಂದರೆ ಮಂಗಳವಾರ ನಡೆಯಲಿದೆ. ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡಗಳ ನಡುವಿನ ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ ಆತಿಥ್ಯವಹಿಸಿದೆ. ಮಾರ್ಚ್ 2 ರ ಭಾನುವಾರ ದುಬೈನಲ್ಲಿ ನಡೆದ ಕೊನೆಯ ಗುಂಪು ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 44 ರನ್ಗಳಿಂದ ಜಯ ಸಾಧಿಸಿದ ಭಾರತ ಎ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
ಭಾರತ ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ಕೇವಲ ಎರಡು ಹೆಜ್ಜೆಗಳ ಅಂತರದಲ್ಲಿದೆ. ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿಯಲು ಬಲಷ್ಠ ಟೀಮ್ ಇಂಡಿಯಾ ಕಣಕ್ಕಿಳಿಯಬೇಕಿದೆ. ಹೀಗಾಗಿ ಟೀಮ್ ಇಂಡಿಯಾದ ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬುದು ಕ್ರಿಕೆಟ್ ಅಭಿಮಾನಿಗಳಿಗೆ ಕುತೂಹಲ ಮೂಡಿಸಿದೆ.

ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ವರುಣ್ ಚಕ್ರವರ್ತಿ ತಮ್ಮ 10 ಓವರ್ಗಳ ಕೋಟಾದಲ್ಲಿ 42 ರನ್ಗಳಿಗೆ ಐದು ವಿಕೆಟ್ಗಳನ್ನು ಕಬಳಿಸಿದ್ದರು. ಇದು ಭಾರತ ಪರ ಅವರ ಮೊದಲ ಚಾಂಪಿಯನ್ಸ್ ಟ್ರೋಫಿ ಪಂದ್ಯವಾಗಿತ್ತು. ಚಾಂಪಿಯನ್ಸ್ ಟ್ರೋಫಿಯ ಚೊಚ್ಚಲ ಪಂದ್ಯದಲ್ಲಿ ಮೊಹಮ್ಮದ್ ಶಮಿ ದಾಖಲೆಯನ್ನು ಮುರಿದ ಬಳಿಕ ವರುಣ್ ಚಕ್ರವರ್ತಿ ಸೆಮಿಫೈನಲ್ನಲ್ಲಿ ಆಡುವುದು ಬಹುತೇಕ ಖಚಿತವಾಗಿದೆ.
ಭಾರತ ತಂಡದ ಟಾಪ್ ಆರ್ಡರ್ನಲ್ಲಿ ಯಾವುದೇ ಬದಲಾವಣೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಏಕೆಂದರೆ ನಾಯಕ ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಇನ್ನೂ ಮಧ್ಯಮ ಕ್ರಮಾಂಕದಲ್ಲಿ ಸ್ಟಾರ್ ವಿಕೆಟ್ಕೀಪರ್-ಬ್ಯಾಟರ್ ಕೆಎಲ್ ರಾಹುಲ್ ಕೂಡ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಹೀಗಾಗಿ ರಿಷಭ್ ಪಂತ್ ಆಡುವ ಸಾಧ್ಯತೆ ಕಡಿಮೆ.
ಸ್ಪಿನ್ ಆಲ್ರೌಂಡರ್ ವಿಭಾಗದಲ್ಲಿ ಅಕ್ಸರ್ ಪಟೇಲ್, ರವೀಂದ್ರ ಜಡೇಜಾ ಮತ್ತು ಹಾರ್ದಿಕ್ ಪಾಂಡ್ಯ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಒಂದು ವೇಳೆ ಆಸ್ಟ್ರೇಲಿಯಾ ವಿರುದ್ದದ ಸೆಮಿಫೈನಲ್ ಪಂದ್ಯಕ್ಕೆ ಒಬ್ಬ ವೇಗಿ ಸೇರಿಸಿಕೊಳ್ಳಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಬಯಸಿದರೆ ರವೀಂದ್ರ ಜಡೇಜಾ ಅವರನ್ನು ತಂಡದಿಂದ ಹೊರಗುಳಿಯಬಹುದು. ಆದರೆ ನಾಕೌಟ್ ಪಂದ್ಯಕ್ಕೆ ಭಾರತವು ಹಿರಿಯ ಅನುಭವಿ ಆಟಗಾರನನ್ನು ಹೊರಗಿಡುವ ಸಾಧ್ಯತೆ ಕಡಿಮೆ. ಕುಲದೀಪ್ ಯಾದವ್ ಮತ್ತು ವರುಣ್ ಚಕ್ರವರ್ತಿ ಬೌಲಿಂಗ್ನಲ್ಲಿ ಅದ್ಭುತ ಫಾರ್ಮ್ನಲ್ಲಿದ್ದಾರೆ.ಅಕ್ಸರ್ ಪಟೇಲ್ ಟೂರ್ನಿಯಲ್ಲಿ ಇದುವರೆಗೆ ಆಡಿದ ಮೂರು ಪಂದ್ಯಗಳಲ್ಲಿ ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ನಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ.
ಮೊಹಮ್ಮದ್ ಶಮಿ ಟೀಮ್ ಇಂಡಿಯಾ ಪರ ಕಳೆದ್ದದ ಎರಡು ಪಂದ್ಯಗಳಲ್ಲಿ ಯಾವುದೇ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿಲ್ಲ. ತಂಡದಲ್ಲಿ ಅರ್ಷದೀಪ್ ಸಿಂಗ್ ಇದ್ದರೂ, ಅವರು ಆಡುವುದು ಅನುಮಾನ. ಐಸಿಸಿ ಟೂರ್ನಿಗಳಲ್ಲಿ ಭಾರತ ಪರ ಶಮಿ ಯಾವಾಗಲೂ ಉತ್ತಮ ಪ್ರದರ್ಶನ ನೀಡಿದ್ದಾರೆ. ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ, ಅವರು ವೇಗದ ಬೌಲಿಂಗ್ ದಾಳಿಯನ್ನು ಮುನ್ನಡೆಸುವುದನ್ನು ಮುಂದುವರಿಸಲಿದ್ದಾರೆ.
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಸರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ.