ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ಎಡ್ಜ್ಬಸ್ಟನ್ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿ ಸರಣಿಯಲ್ಲಿ ಪುಟಿದೇಳುವ ಲೆಕ್ಕಾಚಾರವನ್ನು ಹಾಕಿಕೊಂಡಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ, ಇಂಗ್ಲೆಂಡ್ಗೆ 371 ರನ್ಗಳ ಗುರಿಯನ್ನು ನೀಡಿದರೂ ಸಹ, ಆತಿಥೇ ಇಂಗ್ಲೆಂಡ್ ಯಶಸ್ವಿಯಾಗಿ ಚೇಸ್ ಮಾಡಿದೆ. ಟೀಮ್ ಇಂಡಿಯಾ ಉತ್ತಮ ಮೊತ್ತವನ್ನು ಡಿಫೆಂಡ್ ಮಾಡಿಕೊಳ್ಳುವಲ್ಲಿ ವಿಫಲವಾಗಿದ್ದು, ಹೀನಾಯ ಸೋಲು ಕಂಡಿದೆ.
ಭಾರತ ಎರಡನೇ ಟೆಸ್ಟ್ ಪಂದ್ಯದಲ್ಲಿ ಬದಲಾವಣೆಯೊಂದಿಗೆ ಕಣಕ್ಕೆ ಇಳಿಯಬಹುದು ಎಂಬ ಲೆಕ್ಕಾಚಾರ ಆರಂಭವಾಗಿದೆ. ಭಾರತ ತಂಡದಲ್ಲಿ ಆಲ್ರೌಂಡರ್ ಆಗಿ ಸ್ಥಾನ ಪಡೆದಿದ್ದ ಶಾರ್ದೂಲ್ ಠಾಕೂರ್ ಅವರ ಸ್ಥಾನದ ಮೇಲೆ ಅಪಾಯದ ತುಗುಗತ್ತಿ ನೇತಾಡುತ್ತಿದೆ. ಇವರು ಮೊದಲ ಟೆಸ್ಟ್ನ ಎರಡನೇ ಇನಿಂಗ್ಸ್ನಲ್ಲಿ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಆದರೆ ಬ್ಯಾಟಿಂಗ್ನಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಹೀಗಾಗಿ ಇವರ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ.

ಶಾರ್ದೂಲ್ ಠಾಕೂರ್ ಸ್ಥಾನವನ್ನು ತುಂಬಲು ನಿತೀಶ್ ಕುಮಾರ್ ರೆಡ್ಡಿ ಸಿದ್ಧರಾದಂತೆ ಕಾಣುತ್ತಿದೆ. ಇವರು ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ತಂಡಕ್ಕೆ ನೆರವಾಗಬಲ್ಲ ಪ್ಲೇಯರ್. ಇವರು ಆಲ್ರೌಂಡರ್ ಸ್ಥಾನದ ಮೇಲೆ ಕಣ್ಣು ನೆಟ್ಟಿದ್ದಾರೆ. ಇನ್ನು ಸ್ಪಿನ್ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಸಹ ಎರಡನೇ ಟೆಸ್ಟ್ಗೆ ತಂಡವನ್ನು ಸೇರಿಕೊಳ್ಳುವ ಪ್ಲ್ಯಾನ್ ಮಾಡಿದ್ದಾರೆ. ಈ ಇಬ್ಬರಲ್ಲಿ ಯಾರಿಗೆ ಅವಕಾಶ ಸಿಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ಮಾರಕ ದಾಳಿ ನಡೆಸಬಲ್ಲರು. ಇವರಿಗೆ ಒಬ್ಬ ಉತ್ತಮ ಸಾಥಿ ಮೊದಲ ಟೆಸ್ಟ್ನಲ್ಲಿ ಮಿಸ್ ಆಗಿತ್ತು. ಹೀಗಾಗಿ ಟೀಮ್ ಇಂಡಿಯಾ ಎರಡನೇ ಟೆಸ್ಟ್ ಪಂದ್ಯದ ವೇಳೆ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಎಡ್ಜ್ಬಸ್ಟನ್ ಅಂಗಳದಲ್ಲಿ ಟೀಮ್ ಇಂಡಿಯಾ ಚೈನಾ ಮೆನ್ ಸ್ಪಿನ್ ಬೌಲರ್ ಕುಲ್ದೀಪ್ ಯಾದವ್ ಅವರಿಗೆ ಮಣೆ ಹಾಕುವ ಲೆಕ್ಕಾಚಾರ ನಡೆಸಿದೆ. ಒಂದು ವೇಳೆ ಕುಲ್ದೀಪ್ ಎರಡನೇ ಟೆಸ್ಟ್ಗೆ ತಂಡವನ್ನು ಸೇರಿದರೆ ತಂಡ ಸಮತೋಲನವಾಗಿ ಕಾಣಬಹುದು ಎಂದು ಮಾಜಿ ಆಟಗಾರರು ಅಭಿಪ್ರಾಯ ಪಟ್ಟಿದ್ದಾರೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿದ್ದ ಸಾಯಿ ಸುದರ್ಶನ್ ಹಾಗೂ ಕರುಣ್ ನಾಯರ್ ತಂಡ ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡುವಲ್ಲಿ ವಿಫಲರಾದರು. ಹೀಗಾಗಿ ಇವರಿಬ್ಬರಲ್ಲಿ ಒಬ್ಬರ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಇನ್ನು ಈ ಸ್ಥಾನವನ್ನು ತುಂಬಲು ತಮಿಳುನಾಡಿನ ಅಭಿಮನ್ಯು ಈಶ್ವರನ್ ಸಿದ್ಧರಾಗಿದ್ದಾರೆ. ಇವರು ಈಗಾಗಲೇ ಭಾರತ ಎ ತಂಡದ ಪರ ಅಮೋಘ ಬ್ಯಾಟಿಂಗ್ ನಡೆಸಿ ಗಮನ ಸೆಳೆದಿದ್ದರು. ಅಲ್ಲದೆ ದೇಶೀಯ ಟೂರ್ನಿಗಳಲ್ಲೂ ಸ್ಥಿರ ಪ್ರದರ್ಶನ ನೀಡಿದ್ದರು. ಹೀಗಾಗಿ ಇವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಒಂದು ವೇಳೆ ಇವರಿಗೆ ತಂಡದಲ್ಲಿ ಸ್ಥಾನ ಲಭಿಸಿದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಬಹುದಾಗಿದೆ.