ಬಾರ್ಡರ್ -ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ರೆಡಿಯಾಗಿದೆ. ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಭಾರತ ತಂಡದ ಭಾಗವಾಗಿಲ್ಲ.
ಆಸ್ಟ್ರೇಲಿಯಾ ಪ್ರವಾಸಕ್ಕೆ ಬಿಸಿಸಿಐಯ ಆಯ್ಕೆ ಸಮಿತಿ ಯುವ ಆಟಗಾರರಿಗೆ ದಯೆ ತೋರಿದ್ದು, ಇಬ್ಬರು ಕನ್ನಡಿಗರಿಗೆ ಭಾರತ ತಂಡದಲ್ಲಿ ಅವಕಾಶ ನೀಡಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ನಾಯಕತ್ವ ವಹಿಸಲಿದ್ದಾರೆ.

ಮೊಹಮ್ಮದ್ ಶಮಿ ಬದಲಿಗೆ ಕನ್ನಡಿಗ, ಯುವ ಸ್ಟಾರ್ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಜೊತೆಗೆ ಆಕಾಶ್ ದೀಪ್ ಕೂಡ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾದ ಭಾಗವಾಗಲಿದ್ದಾರೆ. ಜಸ್ಪ್ರೀತ್ ಬುಮ್ರಾ ಅವರನ್ನು ತಂಡದ ಉಪನಾಯಕರನ್ನಾಗಿ ಮಾಡಲಾಗಿದ್ದು, ಕೆಎಲ್ ರಾಹುಲ್ ಮತ್ತೊಮ್ಮೆ ಬ್ಯಾಟಿಂಗ್ ಲೈನ್ಅಪ್ನಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ, ಕೆಲ ದಿನಗಳಿಂದ ರಾಹುಲ್ ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದಾರೆ. ವೇಗದ ಬೌಲರ್ ಆಲ್ರೌಂಡರ್ ನಿತೀಶ್ ರೆಡ್ಡಿ ಅವರ ಅದೃಷ್ಟ ಕೂಡ ಖುಲಾಯಿಸಿದೆ. ಅವರು ಕೂಡ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದಾರೆ. ಇವರೊಂದಿಗೆ ದೇಶೀಯ ಟೂರ್ನಿಗಳಲ್ಲಿ ಶತಕದ ಮೇಲೆ ಶತಕ ಸಿಡಿಸಿರುವ ಸ್ಟಾರ್ ಬ್ಯಾಟರ್ ಅಭಿಮನ್ಯು ಈಶ್ವರನ್ ಅವರಿಗೆ ತಂಡದಲ್ಲಿ ಸ್ಥಾನ ಸಿಕ್ಕಿದೆ
ಟೀಮ್ ಇಂಡಿಯಾದ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಕೂಡ ಒಂದೇ ಇನ್ನಿಂಗ್ಸ್ನಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಸುಂದರ್ 7 ವಿಕೆಟ್ ಪಡೆದು ಬಿಸಿಸಿಐ ಆಯ್ಕೆ ಸಮಿತಿಗೆ ಭರವಸೆ ಮೂಡಿಸಿದ್ದಾರೆ. ಎರಡನೇ ಇನ್ನಿಂಗ್ಸ್ನಲ್ಲೂ ಅವರು ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ್ದು, 4 ವಿಕೆಟ್ ಉರುಳಿಸಿದ್ದು, ಅವರನ್ನೂ ಟೀಮ್ ಇಂಡಿಯಾ ತಂಡದಲ್ಲಿ ಅವಕಾಶ ನೀಡಲಾಗಿದೆ. ಇದಲ್ಲದೇ ಸರ್ಫರಾಜ್ ಖಾನ್, ಧ್ರುವ್ ಜುರೆಲ್ ಕೂಡ ಟೀಮ್ ಇಂಡಿಯಾದ ಭಾಗವಾಗಿದ್ದಾರೆ.
ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಬ್ ಪಂತ್ (ವಿಕೆಟ್ಕೀಪರ್), ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.