ಕಡೆಗೂ ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡದ ಪ್ರಮುಖ ಇಬ್ಬರು ಆಟಗಾರರಾದ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಐಯ್ಯರ್ ಫಿಟ್ನೆಸ್ ವರದಿಯ ಕಾರಣದಿಂದಾಗಿ ಟೀಮ್ ಇಂಡಿಯಾದ ಆಯ್ಕೆ ಪ್ರಕ್ರಿಯೆ ತಡವಾಗಿತ್ತು. ಕಡೆಗೂ ಟೂರ್ನಿಯ ಆರಂಭಕ್ಕೆ ಕೆಲವೇ ದಿನಗಳು ಬಾಕಿಯಿರುವಾಗ 17 ಆಟಗಾರರ ಬಳಗವನ್ನು ಪ್ರಕಟಿಸಲಾಗಿದೆ.
ಇನ್ನು ರೋಹಿತ್ ಶರ್ಮಾ ನೇತೃತ್ವದಲ್ಲಿ ಏಷ್ಯಾಕಪ್ಗೆ ಆಯ್ಕೆಯಾಗಿರುವ ತಂಡದ ಬಗ್ಗೆ ಇದೀಗ ವಿಶ್ಲೇಷಣೆಗಳು ಆರಂಭವಾಗಿದೆ. ಯಾವ ಸ್ಥಾನಕ್ಕೆ ಯಾವ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಅವರ ಅರ್ಹತೆಗಳ ಬಗ್ಗೆ ಅಭಿಮಾನಿಗಳು ಹಾಗೂ ಕ್ರಿಕೆಟ್ ವಿಶ್ಲೇಷಕರು ತಮ್ಮ ತಮ್ಮ ದೃಷ್ಟಿಕೋನದಿಂದ ಚರ್ಚೆಗಳನ್ನು ನಡೆಸಲಾಗುತ್ತಿದೆ.

ಇನ್ನು ಐಪಿಎಲ್ನಲ್ಲಿ ಬೆಂಗಳೂರು ನಗರವನ್ನು ಪ್ರತಿನಿಧಿಸುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡುವ ಯಾವೆಲ್ಲಾ ಆಟಗಾರರು ಈ ಬಾರಿಯ ಏಷ್ಯಾಕಪ್ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಟಿದ್ದಾರೆ ಎನ್ನುವ ಕುತೂಹಲ ಕೂಡ ಅಭಿಮಾನಿಗಳಿಗೆ ಇದ್ದೇ ಇದೆ. ಆ ಬಗೆಗಿನ ಮಾಹಿತಿ ಇಲ್ಲಿದೆ. ಮುಂದೆ ಓದಿ..
ಆರ್ಸಿಬಿಯಿಂದ ಇಬ್ಬರು ಆಟಗಾರರು
ಏಷ್ಯಾಕಪ್ನಲ್ಲಿ ಭಾಗವಹಿಸುವ ಭಾರತ ತಂಡಕ್ಕೆ ಆಯ್ಕೆಯಾಗಿರುವ ತಂಡದಲ್ಲಿ ಆರ್ಸಿಬಿಯಿಂದ ಕೇವಲ ಇಬ್ಬರು ಆಟಗಾರರು ಮಾತ್ರವೇ ಆಯ್ಕೆಯಾಗಿದ್ದಾರೆ ಎನ್ನುವುದು ಗಮನಿಸಬೇಕಾದ ಅಂಶ. ಅಂದಹಾಗೆ ಆರ್ಸಿಬಿ ಅಭಿಮಾನಿಗಳಿಗೆ ಇದೇನೂ ಅಚ್ಚರಿಯ ವಿಚಾರವಲ್ಲ. ಬಹುತೇಕ ಆರ್ಸಿಬಿ ಅಭಿಮಾನಿಗಳು ನಿರೀಕ್ಷಿಸಿದ್ದಂತೆಯೇ ಈ ಇಬ್ಬರು ಆಟಗಾರರು ಮಾತ್ರ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಕೊಹ್ಲಿ
ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಏಷ್ಯಾಕಪ್ಗೆ ಆಯ್ಕೆಯಾಗಿರುವ ತಂಡದ ಆಧಾರಸ್ಥಂಭವಾಗಿದ್ದಾರೆ. ಕಳೆದ ಒಂದು ವರ್ಷದಿಂದ ಎಲ್ಲಾ ಮಾದರಿಯಲ್ಲಿಯೂ ಅಮೋಘ ಪಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ ಕಳೆದ ಐಪಿಎಲ್ ಟೂರ್ನಿಯಲ್ಲಿಯೂ ಅಬ್ಬರಿಸಿದ್ದರು. ಏಕದಿನ ಮಾದರಿಯಲ್ಲಿಯೂ ತಾನು ಅದ್ಭುತ ಲಯದಲ್ಲಿರುವುದನ್ನು ಕೊಹ್ಲಿ ಈಗಾಗಲೇ ಸಾರಿದ್ದಾರೆ. ಹೀಗಾಗಿ ವಿಶ್ವಕಪ್ ಟೂರ್ನಿಗೂ ಮುನ್ನ ನಡೆಯಲಿರುವ ಪ್ರತಿಷ್ಠಿತ ಟೂರ್ನಿಯಾದ ಎಷ್ಯಾಕಪ್ನಲ್ಲಿಯೂ ಕೊಹ್ಲಿ ಅಬ್ಬರಿಸುವ ವಿಶ್ವಾಸವಿದೆ.
ವೇಗದ ಬೌಲಿಂಗ್ನಲ್ಲಿ ಮಿಂಚಲು ಸಜ್ಜಾದ ಮೊಹಮ್ಮದ್ ಸಿರಾಜ್
ಏಷ್ಯಾಕಪ್ ತಂಡದಲ್ಲಿ ಆಯ್ಕೆಯಾಗಿರುವ ಮತ್ತೋರ್ವ ಆರ್ಸಿಬಿ ತಂಡದ ಆಟಗಾರ ಮೊಹಮ್ಮದ್ ಸಿರಾಜ್. ಹೈದರಾಬಾದ್ನ ಈ ವೇಗದ ಬೌಲರ್ ಇತ್ತೀಚೆಗೆ ಭಾರತ ತಂಡದಲ್ಲಿ ಎಲ್ಲಾ ಮಾದರಿಯಲ್ಲಿಯೂ ಅದ್ಭುತ ಪ್ರದರ್ಶನ ನೀಡುತ್ತಿದ್ದು ಎಲ್ಲಾ ಮಾದರಿಯ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ. ಏಷ್ಯಾಕಪ್ನಲ್ಲಿಯೂ ಭಾರತ ತಂಡದಲ್ಲಿ ಮೊಹಮ್ಮದ್ ಸಿರಾಜ್ ಮಹತ್ವದ ಪಾತ್ರವಹಿಸುವ ನಿರೀಕ್ಷೆಯಿದೆ.
ಏಷ್ಯಾಕಪ್ಗೆ ಆಯ್ಕೆಯಾಗಿರುವ ಟೀಮ್ ಇಂಡಿಯಾ ಸ್ಕ್ವಾಡ್: ರೋಹಿತ್ ಶರ್ಮಾ, ಶುಬ್ಮನ್ ಗಿಲ್ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ.