ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗೆ ದಿನಗಣನೆ ಆರಂಭವಾಗಿದೆ. ಟೀಮ್ ಇಂಡಿಯಾ ಅಹಮದಾಬಾದ್ನಲ್ಲಿ ಅಮೋಘ ಪ್ರದರ್ಶನ ನೀಡಿ ದಕ್ಷಿಣ ಆಫ್ರಿಕಾವನ್ನು 30 ರನ್ಗಳಿಂದ ಮಣಿಸಿ, ಟಿ20 ಸರಣಿಯನ್ನು 3-1 ರಿಂದ ವಶಕ್ಕೆ ಪಡೆದಿದೆ. ಫೆಬ್ರವರಿ 7 ರಿಂದ ಭಾರತ ಹಾಗೂ ಶ್ರೀಲಂಕಾದಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಈ ಮೆಗಾ ಟೂರ್ನಿಗಾಗಿ ಭಾರತ ತಂಡವನ್ನು ಶನಿವಾರ ಪ್ರಕಟಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಮುಂಬೈನಲ್ಲಿ ಬಿಸಿಸಿಐ ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ಹಾಗೂ ಸೂರ್ಯಕುಮಾರ್ ಯಾದವ್ ಸಭೆಯನ್ನು ನಡೆಸಲಿದ್ದಾರೆ. ಈ ಸಭೆಯ ಬಳಿಕ ಟೀಮ್ ಇಂಡಿಯಾವನ್ನು ಟಿ20 ವಿಶ್ವಕಪ್ಗೆ ಪ್ರಕಟಿಸುವ ಸಾಧ್ಯತೆ ಇದೆ. ಹಾಲಿ ವಿಶ್ವ ಟಿ20 ಚಾಂಪಿಯನ್ ಭಾರತ, ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಹೋರಾಟ ನಡೆಸಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಯಾವ ರೀತಿಯಾಗಿರಲಿದೆ ಎಂಬ ಬಗ್ಗೆ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.
ಟಿ20 ವಿಶ್ವಕಪ್ಗೆ 49 ದಿನಗಳು ಬಾಕಿ ಇರುವಂತೆ ಟೀಮ್ ಇಂಡಿಯಾ ತನ್ನ ತಂಡವನ್ನು ಪ್ರಕಟಿಸಲಿದೆ. ಈ ವೇಳೆ ತಂಡದಲ್ಲಿ ಹೆಚ್ಚಿನ ಬದಲಾವಣೆಗಳನ್ನು ನಿರೀಕ್ಷೆ ಮಾಡುವ ಹಾಗಿಲ್ಲ. ಸದ್ಯ ಟಿ20 ತಂಡದಲ್ಲಿ ಸ್ಥಾನ ಪಡೆದಿರುವ ಆಟಗಾರರು ಅಮೋಘ ಫಾರ್ಮ್ನಲ್ಲಿದ್ದಾರೆ. ಹೀಗಾಗಿ ಟಿ20 ವಿಶ್ವಕಪ್ಗೆ ಇದೇ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ. ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.

ಸೂರ್ಯಕುಮಾರ್ ಯಾದವ್ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ನಲ್ಲಿ ಭಾರತ ತಂಡವನ್ನು ಮುನ್ನಡೆಸುವ ಅವಕಾಶವನ್ನು ಪಡೆಯುವ ಸಾಧ್ಯತೆ ದಟ್ಟವಾಗಿದೆ. ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ ಹಾಗೂ ಆಲ್ರೌಂಡರ್ಗಳಾದ ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ವಾಷಿಂಗ್ಟನ್ ಸುಂದರ್ ತಂಡದಲ್ಲಿ ಸ್ಥಾನ ಪಡೆಯುವುದು ಪಕ್ಕಾ ಎಂದು ಅಂದಾಜಿಸಲಾಗಿದೆ.
ಭಾರತ ತಂಡದಲ್ಲಿ ಇಬ್ಬರು ವಿಕೆಟ್ ಕೀಪರ್ಗಳಾಗಿ ಜಿತೇಶ್ ಶರ್ಮಾ, ಸಂಜು ಸ್ಯಾಮ್ಸನ್ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ. ಶುಭಮನ್ ಗಿಲ್ ಅವರಿಗೆ ತಂಡದಲ್ಲಿ ಸ್ಥಾನ ಸಿಗುತ್ತದಾ ಎಂಬ ಪ್ರಶ್ನೆಗಳು ಸಹ ಉದ್ಭವಿಸಿವೆ. ಶುಭಮನ್ ಗಿಲ್ ಅವರು ಪ್ರಸಕ್ತ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಇವರಿಗೆ ಅವಕಾಶ ಸಿಗುತ್ತಾ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುರುವ ಇಶಾನ್ ಕಿಶನ್ ಅವರಿಗೆ ತಂಡದಲ್ಲಿ ಸ್ಥಾನ ಲಭಿಸುತ್ತದಾ ಎಂಬುದನ್ನು ಕಾದು ನೋಡಬೇಕಿದೆ. ಆಯ್ಕೆ ಸಮಿತಿ ಜನೆವರಿಯಲ್ಲಿ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಗೆ ಇದೇ ವೇಳೆ ತಂಡವನ್ನು ಪ್ರಕಟಿಸಲಿದೆ. ಈ ತಂಡದಲ್ಲಿ ಯಾರಿಗೆಲ್ಲಾ ಸ್ಥಾನ ಲಭಿಸಬಹುದು ಎಂಬ ಪ್ರಶ್ನೆಗಳು ಎದ್ದಿವೆ.