ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್ ಗವಾಸ್ಕರ್ ಟ್ರೋಫಿಯ ಎರಡನೇ ಟೆಸ್ಟ್ ಆಡಿಲೇಡ್ನಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ, ಮೊದಲು ಬ್ಯಾಟಿಂಗ್ ಮಾಡಲು ಮುಂದಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಆಲ್ರೌಂಡರ್ ವಾಶಿಂಗ್ಟನ್ ಸುಂದರ್ ಅವರ ಬದಲಿಗೆ ಅನುಭವಿ ಆರ್ ಅಶ್ವಿನ್ ಅವರಿಗೆ ತಂಡದಲ್ಲಿ ಸ್ಥಾನ ನೀಡಿದೆ.
ಮೊದಲ ಟೆಸ್ಟ್ನಲ್ಲಿ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ ತಂಡಕ್ಕೆ ಮರಳಿದ್ದಾರೆ. ಇವರು ತಂಡಕ್ಕೆ ವಾಪಸ್ ಆಗಿದ್ದರಿಂದ ದೇವದತ್ ಪಡಿಕ್ಕಲ್ ಹಾಗೂ ಧ್ರುವ್ ಜುರೇಲ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇನ್ನು ಈ ಪಂದ್ಯದಲ್ಲಿ ಈ ಮೊದಲೇ ಹೇಳಿದಂತೆ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸುವ ಹೊಣೆಯನ್ನು ಹೊತ್ತುಕೊಂಡಿದ್ದಾರೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಿಡ್ಲ್ ಆರ್ಡರ್ನಲ್ಲಿ ಬ್ಯಾಟ್ ಮಾಡಲಿದ್ದಾರೆ.

ಮೊದಲ ಟೆಸ್ಟ್ನಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದ ವಾಷಿಂಗ್ಟನ್ ಸುಂದರ್ ತಂಡದಿಂದ ಹೊರ ನಡೆದಿದ್ದಾರೆ. ಇವರ ಬದಲಿಗೆ ಅನುಭವಿ ಆಟಗಾರ ಆರ್ ಅಶ್ವಿನ್ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಲಾಗಿದೆ. ಇನ್ನು ಆಸ್ಟ್ರೇಲಿಯಾ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದೆ. ತಂಡದ ಸ್ಟಾರ್ ವೇಗಿ ಜೋಶ್ ಹ್ಯಾಜಲ್ವುಡ್ ಗಾಯಕ್ಕೆ ತುತ್ತಾಗಿದ್ದು ತಂಡದಿಂದ ಹೊರಗುಳಿದಿದ್ದಾರೆ. ಇವರ ಬದಲಿಗೆ ಸ್ಕಾಟ್ ಬೋಲ್ಯಾಂಡ್ ತಂಡಕ್ಕೆ ಮರಳಿದ್ದಾರೆ.
ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡು ಮಾತನಾಡಿ, ಪಿಚ್ ಬ್ಯಾಟ್ ಮಾಡಲು ಉತ್ತಮವಾಗಿದೆ. ಆರಂಭದ ಸಮಯದಲ್ಲಿ ಬೌಲರ್ಗಳಿಗೆ ನೆರವಾಗಲಿದೆ. ಪಿಚ್ ಮೇಲೆ ಬ್ಯಾಟರ್ಗಳು ನೆಲಕಚ್ಚಿ ನಿಂತು ಬ್ಯಾಟ್ ಮಾಡಿದರೆ ಯಶಸ್ಸು ಸಾಧಿಸಬಹುದು. ತಂಡ ಪರ್ತ್ನಲ್ಲಿ ನಿಜವಾಗಿಯೂ ಉತ್ತಮ ಟೆಸ್ಟ್ ಪಂದ್ಯವನ್ನು ಆಡಿದ್ದು, ತಂಡ ಉತ್ತಮವಾಗಿ ಆಡಿದೆ. ಈ ಟೆಸ್ಟ್ ಪಂದ್ಯದಲ್ಲೂ ರಾಹುಲ್ ಆರಂಭಿಕರಾಗಿ ಕಾಣಿಸಿಕೊಳ್ಳಲಿದ್ದಾರೆ. ನಾವು ಪಂದ್ಯವನ್ನು ಹೇಗೆ ಗೆಲ್ಲಬಹುದು ಎಂಬ ಬಗ್ಗೆ ಚಿಂತೆಯನ್ನು ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ನಾನು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡುವೆ ಎಂದು ತಿಳಿಸಿದ್ದಾರೆ.

ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸಿದ ಯಶಸ್ವಿ ಜೈಸ್ವಾಲ್ ಅವರನ್ನು ಮೊದಲ ಎಸೆತದಲ್ಲಿ ಮಿಚೆಲ್ ಸ್ಟಾರ್ಕ್ ಔಟ್ ಮಾಡಿದರು. ಈ ಮೂಲಕ ಆರಂಭದಲ್ಲಿ ಆಸೀಸ್ ಅಭಿಮಾನಿಗಳ ಮುಖದಲ್ಲಿ ನಗು ಮೂಡಿಸಿದರ.
ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರಿಷಬ್ ಪಂತ್, ನಿತೀಶ್ ಕುಮಾರ್ ರೆಡ್ಡಿ, ರವಿಚಂದ್ರನ್ ಅಶ್ವಿನ್, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ತಂಡ: ಉಸ್ಮಾನ್ ಖವಾಜಾ, ನಾಥನ್ ಮೆಕ್ಸ್ವೀನಿ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ, ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್.