
ಬೆನ್ನು ನೋವಿನ ಕಾರಣದಿಂದಾಗಿ ಟೀಮ್ ಇಂಡಿಯಾದ ಆಟಗಾರ ಶ್ರೇಯಸ್ ಐಯ್ಯರ್ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು ಎರಡನೇ ಪಂದ್ಯಕ್ಕೂ ಐಯ್ಯರ್ ಲಭ್ಯತೆ ಕಷ್ಟ ಎನ್ನಲಾಗಿತ್ತು. ಆದರೆ ಇದೀಗ ಶ್ರೇಯಸ್ ಐಯ್ಯರ್ ಬೆನ್ನುನೋವಿನಿಂದ ಚೇತರಿಸಿಕೊಂಡಿದ್ದು ಎರಡನೇ ಪಂದ್ಯದಲ್ಲಿ ಆಡಲು ಸಜ್ಜಾಗಿದ್ದಾರೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಫೆಬ್ರವರಿ 17ರಿಂದ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ.
ನಾಗ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯಕ್ಕೆ ಶ್ರೇಯಸ್ ಐಯ್ಯರ್ ಅಲಭ್ಯವಾಗಿದ್ದರು. ಹಾಗಾಗಿ ಆ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಟೆಸ್ಟ್ ತಂಡದಲ್ಲಿ ಮೊದಲ ಬಾರಿಗೆ ಅವಕಾಶ ಪಡೆದುಕೊಂಡಿದ್ದರು. ಈಗ ಐಯ್ಯರ್ ತಂಡಕ್ಕೆ ಮರಳಲಿರುವ ಕಾರಣ ಸೂರ್ಯಕುಮಾರ್ ತಮ್ಮ ಸ್ಥಾನವನ್ನು ಶ್ರೇಯಸ್ ಐಯ್ಯರ್ಗೆ ಬಿಟ್ಟುಕೊಡಬೇಕಾಗಿದೆ.
ಬೆನ್ನುನೋವಿನ ಕಾರಣದಿಂದಾಗಿ ತಂಡದಿಂದ ಹೊರಬಿದ್ದಿದ್ದ ಶ್ರೇಯಸ್ ಐಯ್ಯರ್ ಬೆಂಗಳುರಿನ ಎನ್ಸಿಎನಲ್ಲಿ ರಿಹ್ಯಾಬ್ನಲ್ಲಿ ಭಾಗಿಯಾಗಿದ್ದರು. ಇದೀಗ ಸಂಪೂರ್ಣವಾಗಿ ಚೇತರಿಕೆ ಕಂಡಿದ್ದು ಬಿಸಿಸಿಐನ ವೈದ್ಯಕೀಯ ವಿಭಾಗದಿಂದ ಗ್ರೀನ್ಸಿಗ್ನಲ್ ದೊರೆತಿದೆ. ಹೀಗಾಗಿ ದೆಹಲಿಯಲ್ಲಿ ಟೀಮ್ ಇಂಡಿಯಾ ಸ್ಕ್ವಾಡ್ ಸೇರಿಕೊಳ್ಳಲಿದ್ದಾರೆ ಶ್ರೇಯಸ್ ಐಯ್ಯರ್.
ಇನ್ನು ದೆಹಲಿಯಲ್ಲಿ ನಡೆಯಲಿರುವ ಪಂದ್ಯಕ್ಕೆ ಕ್ರೀಡಾಂಗಣ ಪ್ರೇಕ್ಷಕರಿಂದ ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆಯಿದೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಸಾಕ್ಷಿಯಾಗಲು ಪ್ರೇಕ್ಷಕರು ತುದಿಗಾಲಲ್ಲಿ ನಿಂತಿದ್ದಾರೆ. ಇಲ್ಲಿನ ಎಲ್ಲಾ ಟಿಕೆಟ್ಗಳು ಕೂಡ ಪ್ರಮಾಣದಲ್ಲಿ ಮಾರಾಟವಾಗಿರುವುದಾಗಿ ಡಿಡಿಸಿಎಯ ಜೊತೆ ಕಾರ್ಯದರ್ಶಿ ರಾಜನ್ ಮಾಂಚಂಡ ಮಾಹಿತಿ ನೀಡಿದ್ದಾರೆ. 2017ರ ಬಳಿಕ ಮೊದಲ ಬಾರಿಗೆ ಟೆಸ್ಟ್ ಪಂದ್ಯ ನಡೆಯುತ್ತಿರುವ ಕಾರಣದಿಂದಾಗಿ ದೆಹಲಿ ಹಾಗೂ ಸುತ್ತಮುತ್ತಲಿನ ಕ್ರಿಕೆಟ್ ಅಭಿಮಾನಿಗಳು ಈ ಪೈಪೋಟಿಯ ಪಂದ್ಯವನ್ನು ವೀಕ್ಷಿಸಲು ಮುಗಿಬಿದ್ದಿದ್ದಾರೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಗ್ಪುರದಲ್ಲಿ ಆಯೋಜನೆಯಾಗಿತ್ತು. ಈ ಪಂದ್ಯವನ್ನು ಭಾರತ ಇನ್ನಿಂಗ್ಸ್ ಹಾಗೂ 132 ರನ್ಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದೆ. ಈ ಪಂದ್ಯಕ್ಕೆ ಕೂಡ ಪ್ರೇಕ್ಷಕರಿಂದ ಅದ್ಭುತ ಸ್ಪಂದನೆ ದೊರೆತಿತ್ತು.
ನಾಗ್ಪುರ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ ತಂಡ 177 ರನ್ಗಳನ್ನು ಮಾತ್ರವೇ ಗಳಿಸಲು ಯಶಸ್ವಿಯಾಗಿತ್ತು. ಅದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾ ಪರವಾಗಿ ನಾಯಕ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದರೆ ಕೆಳ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಅರ್ಧ ಶತಕ ಸಿಡಿಸಿ ತಂಡಕ್ಕೆ ನೆರವಾದರು. ಹೀಗಾಗಿ ಈ ಪಂದ್ಯದಲ್ಲಿ 400 ರನ್ಗಳನ್ನು ಗಳಿಸಿತ್ತು.
ಎರಡನೇ ಇನ್ನಿಂಗ್ಸ್ನಲ್ಲಿ ಮತ್ತಷ್ಟು ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಆಸ್ಟ್ರೇಲಿಯಾ ತಂಡ ಒಂದೇ ಸೆಶನ್ನಲ್ಲಿ ಕೇವಲ 91 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕ ಈ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಅಂತರದ ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ನಲ್ಲಿ ರವೀಂದ್ರ ಜಡೇಜಾ ಐದು ವಿಕೆಟ್ ಗೊಂಚಲು ಪಡೆದಿದ್ದರೆ ಎರಡನೇ ಇನ್ನಿಂಗ್ಸ್ನಲ್ಲಿ ರವಿಚಂದ್ರನ್ ಅಶ್ವಿನ್ ಐದು ವಿಕೆಟ್ ಕಬಳಿಸಿದ್ದರು.
2ನೇ ಪಂದ್ಯಕ್ಕೆ ಟೀಮ್ ಇಂಡಿಯಾ ಸ್ಕ್ವಾಡ್ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ , ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್