
ಬೆಂಗಳೂರು, ಫೆಬ್ರವರಿ 03: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯವನ್ನು ಮುಂದೂಡಲಾಗಿದೆ.
ಫೆಬ್ರವರಿ 24ರಂದು ನಡೆಯಬೇಕಿದ್ದ ಪಂದ್ಯವನ್ನು ಫೆಬ್ರವರಿ 27ಕ್ಕೆ ಮರು ನಿಗದಿ ಮಾಡಲಾಗಿದೆ. ಫೆಬ್ರವರಿ 20 ರಿಂದ 24 ವರೆಗೆ ಬೆಂಗಳೂರಿನ ಯಲಹಂಕದ ವಾಯು ಸೇನಾ ನೆಲೆಯಲ್ಲಿ ಏರ್ ಶೋ ನಡೆಯಲಿದೆ. ಈ ಹಿನ್ನಲೆಯಲ್ಲಿ ಭದ್ರತೆಯ ದೃಷ್ಟಿಯಿಂದ ಟಿ20 ಪಂದ್ಯವನ್ನು ಮರು ನಿಗದಿ ಮಾಡುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಮಿತಿ (ಕೆಎಸ್ ಸಿಎ) ಮನವಿ ಸಲ್ಲಿಸಿತ್ತು.
ಹೀಗಾಗಿ, ಮೊದಲ ಪಂದ್ಯವನ್ನು ಮರು ನಿಗದಿ ಮಾಡಿ, ಫೆಬ್ರವರಿ 27ಕ್ಕೆ ಆಯೋಜಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಹೇಳಿದೆ.
ಈ ಮೊದಲು ನಿಗದಿಯಾಗಿದ್ದ ವೇಳಾಪಟ್ಟಿಯಂತೆ ಭಾರತ-ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಫೆಬ್ರವರಿ 24ರಂದು ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಈಗ ಬದಲಾದ ವೇಳಾಪಟ್ಟಿಯಂತೆ ಫೆಬ್ರವರಿ 24 ರಂದು ಮೊದಲ ಪಂದ್ಯವು ವಿಶಾಖಪಟ್ಟಣದಲ್ಲಿ ನಡೆಯಲಿದ್ದು, ಎರಡನೇ ಪಂದ್ಯ ಫೆಬ್ರವರಿ 27 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕೆಎಸ್ ಸಿಎ ವ್ಯವಸ್ಥಾಪಕ ಸಮಿತಿ ಸದಸ್ಯ ಹಾಗೂ ಅಧಿಕೃತ ವಕ್ತಾರ ವಿನಯ್ ಮೃತ್ಯುಂಜಯ ಹೇಳಿದ್ದಾರೆ.