
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮುಕ್ತಾಯದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕಾದಾಟ ನಡೆಸಲಿವೆ. ಈ ಸರಣಿಗೆ ಬಲಿಷ್ಠವಾದ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು ಕುತೂಹಲ ಮೂಡಿಸಿದೆ. ಮಾರ್ಚ್ 17ರಿಂದ ಏಕದಿನ ಸರಣಿ ಆರಂಭವಾಗಲಿದ್ದು ಸರಣಿಯ ಮೊದಲ ಪಂದ್ಯಕ್ಕೆ ನಾಯಕ ರೋಹಿತ್ ಶರ್ಮಾ ಅಲಭ್ಯವಾಗಲಿದ್ದಾರೆ.
ರೋಹಿತ್ ಶರ್ಮಾ ನೇತೃತ್ವದ 18 ಆಟಗಾರರ ತಂಡವನ್ನು ಬಿಸಿಸಿಐ ಭಾನುವಾರ ಪ್ರಕಟಿಸಿದೆ. ಆದರೆ ಮೊದಲ ಪಂದ್ಯದಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊರಗುಳಿಯುತ್ತಿರುವುದನ್ನು ಬಿಸಿಸಿಐ ಖಚಿತಪಡಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕತ್ವದ ಹೊಣೆಗಾರಿಗೆ ಹಾರ್ದಿಕ್ ಪಾಂಡ್ಯ ಹೆಗಲೇರಲಿದೆ. ಎರಡನೇ ಹಾಗೂ ಮೂರನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ.
ಇನ್ನು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೌಟುಂಬಿಕ ಕಾರಣದಿಂದಾಗಿ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ.
ಕಮ್ಬ್ಯಾಕ್ ಮಾಡಿದ ಪ್ರಮುಖರು: ಇನ್ನು ಈ ಸರಣಿಯ ಮೂಲಕ ಏಕದಿನ ತಂಡಕ್ಕೆ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕಮ್ಬ್ಯಾಕ್ ಮಾಡಿದ್ದಾರೆ. ಗಾಯದ ಕಾರಣದಿಂದ ಸುದೀರ್ಘ ಕಾಲದಿಂದ ಭಾರತ ತಂಡದಿಂದ ಹೊರಗುಳಿದಿದ್ದ ರವೀಂದ್ರ ಜಡೇಜಾ ಟೆಸ್ಟ್ ಮಾದರಿಗೆ ಕಮ್ಬ್ಯಾಖ್ ಮಾಡಿದ್ದರು. ಇದೀಗ ಜಡೇಜಾ ಏಕದಿನ ಮಾದರಿಗೂ ಕಮ್ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ವೇಗಿ ಜಯ್ದೇವ್ ಉನಾದ್ಕಟ್ ಭಾರತ ಏಕದಿನ ತಂಡಕ್ಕೂ ಕಮ್ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ದೇಶೀಯ ಕ್ರಿಕೆಟ್ನಲ್ಲಿ ಅದ್ಭುತ ಫಾರ್ಮ್ ಪ್ರದರ್ಶಿಸುತ್ತಿರುವ ಉನಾದ್ಕಟ್ ಟೆಸ್ಟ್ ಮಾದರಿಯ ಬಳಿಕ ವೈಟ್ಬಾಲ್ ಮಾದರಿಯಲ್ಲಿಯೂ ಭಾತದ ಪರವಾಗಿ ಕಣಕ್ಕಿಳಿಯುವ ಅವಕಾಶ ಪಡೆದುಕೊಂಡಿದ್ದಾರೆ. ಇನ್ನು ಕೆಎಲ್ ರಾಹುಲ್ ವಿವಾಹದ ಕಾರಣದಿಂದ ಕಳೆದ ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು. ಇದೀಗ ಅವರು ತಂಡಕ್ಕೆ ಮರಳಿದ್ದಾರೆ.
ಟೀಮ್ ಇಂಡಿಯಾ ಸ್ಕ್ವಾಡ್ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಶಿಂಗ್ಟನ್ ಸುಂದರ್, ಯುಜುವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ , ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಜಯದೇವ್ ಉನದ್ಕಟ್