ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ಮ್ಯಾಂಚೆಸ್ಟರ್ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಭರವಸೆಯ ಆಟಗಾರರು ಗಾಯಕ್ಕೆ ತುತ್ತಾಗಿದ್ದರಿಂದ ಯಾರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಎಂಬ ಪ್ರಶ್ನೆ ಉದ್ಭವಿಸಿದೆ. ಈ ವೇಳೆ ಟೀಮ್ ಇಂಡಿಯಾ ಅಳೆದು ತೂಗಿ ಆಟಗಾರರಿಗೆ ಮಣೆ ಹಾಕಲಿದೆ. ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರೀತ್ ಬುಮ್ರಾ ನಾಲ್ಕನೇ ಟೆಸ್ಟ್ ಪಂದ್ಯವನ್ನು ಆಡುವುದು ಖಚಿತವಾಗಿದೆ. ಆದರೆ ಮೂರನೇ ವೇಗಿ ಯಾರು ಎಂಬ ಪ್ರಶ್ನೆ ಉದ್ಭವಿಸಿದೆ.
ಟೀಮ್ ಇಂಡಿಯಾದ ಭರವಸೆಯ ವೇಗಿ ಮೊಹಮ್ಮದ್ ಸಿರಾಜ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಜಸ್ಪ್ರೀತ್ ಬುಮ್ರಾ ನಾಲ್ಕನೇ ಟೆಸ್ಟ್ ಆಡಲಿದ್ದಾರೆ ಎಂಬುದನ್ನು ಖಚಿತ ಪಡಿಸಿದ್ದಾರೆ. ಈ ಮೂಲಕ ಸಿರಾಜ್ ಹಾಗೂ ಬುಮ್ರಾ ವೇಗದ ಬೌಲಿಂಗ್ ನೊಗವನ್ನು ಹೊರಲು ಸಿದ್ಧರಾಗಿದ್ದಾರೆ. ಆದರೆ ಇನ್ನೋರ್ವ ವೇಗಿ ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಸ್ವಿಂಗ್ ಬೌಲರ್ ಆಕಾಶ್ ದೀಪ್ ಹಾಗೂ ಪದಾರ್ಪಣೆಯ ಕನಸು ಕಾಣುತ್ತಿರುವ ಅರ್ಷದೀಪ್ ಸಿಂಗ್ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಮೂರನೇ ವೇಗಿ ಯಾರು ಎಂಬ ಚಿಂತೆ ನಿಶ್ಚಿತವಾಗಿ ಕಾಡುತ್ತಿದೆ.

ಮೂರನೇ ವೇಗಿಯ ಸ್ಥಾನಕ್ಕೆ ಇಬ್ಬರು ಆಟಗಾರರು ಪೈಪೋಟಿ ನಡೆಸಲಿದ್ದಾರೆ. ಇದರಲ್ಲಿ ಒಬ್ಬರು ಈಗಾಗಲೇ ಟೀಮ್ ಇಂಡಿಯಾ ಪರ ಆಡಿದ್ದಾರೆ. ಅಲ್ಲದೆ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿರುವ ಪ್ರಸಿದ್ಧ್ ಕೃಷ್ಣ, ಒಂದು ಸ್ಥಾನದ ಮೇಲೆ ಕಣ್ಣು ನೆಟ್ಟಿದ್ದಾರೆ. ಇವರು ಆಡಿರುವ 2 ಪಂದ್ಯಗಳಲ್ಲಿ 6 ವಿಕೆಟ್ ಕಬಳಿಸಿದ್ದಾರೆ. ಆದರೆ ರನ್ ವೇಗಕ್ಕೆ ಬ್ರೇಕ್ ಹಾಕುವಲ್ಲಿ ವಿಫಲರಾಗಿರುವ ಪ್ರಸಿದ್ಧ್ ನಿರಾಸೆ ಅನುಭವಿಸಿದ್ದಾರೆ.
ಇನ್ನು ಇದೇ ಒಂದು ಸ್ಪಾಟ್ ಮೇಲೆ ಅನ್ಶುಲ್ ಕಾಂಬೋಜ್ ಕಣ್ಣು ನೆಟ್ಟಿದ್ದಾರೆ. ಇವರಿಗೆ ಇನ್ನೂ ಭಾರತದ ಪರ ಆಡುವ ಅವಕಾಶ ಸಿಕ್ಕಿಲ್ಲ. ಇವರು ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಉತ್ತಮ ದಾಖಲೆ ಹೊಂದಿದ್ದಾರೆ. ಇವರು ಆಡಿರುವ 24 ಪಂದ್ಯಗಳಲ್ಲಿ 79 ವಿಕೆಟ್ ಪಡೆದಿದ್ದಾರೆ. ಅಲ್ಲದೆ ಲೀಸ್ಟ್ ಎ ಪಂದ್ಯದಲ್ಲಿ 40 ವಿಕೆಟ್ ಪಡೆದು ಬೀಗಿದ್ದಾರೆ. ಇವರು ಈ ಹಿಂದಿನ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದರು. ಹೀಗಾಗಿ ಇವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುತ್ತದಾ ಎಂಬ ಪ್ರಶ್ನೆಗಳು ಎದ್ದಿವೆ.

ಟೀಮ್ ಇಂಡಿಯಾ ಕ್ಯಾಂಪ್ನಲ್ಲಿ ಗಾಯದ ಸಮಸ್ಯೆ ಬಹುವಾಗಿ ಕಾಡುತ್ತಿದೆ. ಸ್ಟಾರ್ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅಭ್ಯಾಸ ಮಾಡುವಾಗ ಗಾಯಕ್ಕೆ ತುತ್ತಾಗಿದ್ದಾರೆ. ಇನ್ನು ಎರಡನೇ ಪಂದ್ಯದಲ್ಲಿ 10 ವಿಕೆಟ್ ಪಡೆದು ಅಬ್ಬರಿಸಿದ್ದ ಆಕಾಶ್ ದೀಪ್ ಮೂರನೇ ಟೆಸ್ಟ್ನಲ್ಲಿ ಬೌಲಿಂಗ್ ಮಾಡುವಾಗ ಗಾಯಕ್ಕೆ ತುತ್ತಾಗಿದ್ದರು. ಇನ್ನು ಅರ್ಷದೀಪ್ ಸಿಂಗ್ ಅಭ್ಯಾಸದ ವೇಳೆ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಕ್ಯಾಂಪ್ನಲ್ಲಿ ಚಿಂತೆಯ ಗೆರೆಗಳು ಮೂಡಿವೆ.