
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಮುಕ್ತಾಯವಾಗಿದ್ದು ಏಕದಿನ ಸರಣಿ ಮಂಗಳವಾರದಿಂದ ಆರಂಭವಾಗಲಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಯಾವ ತಂಡ ಗೆಲ್ಲಿದೆ ಎಂಬುದು ಕುತೂಹಲ ಮೂಡಿಸಿದೆ. ಈ ಸಂದರ್ಭದಲ್ಲಿ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ತೊಡೆಯ ಗಾಯಕ್ಕೆ ಒಳಗಾಗಿದ್ದು ಮೊದಲ ಏಕದಿನ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗಿದೆ.
ವಿರಾಟ್ ಕೊಹ್ಲಿ ಸೋಮವಾರ ಅಭ್ಯಾಸಕ್ಕೆ ಇಳಿದಿರಲಿಲ್ಲ. ತೊಡೆಯ ಭಾಗದಲ್ಲಿ ನೋವು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಕೊಹ್ಲಿ ತಂಡದ ಜೊತೆಗೆ ನಾಟಿಂಗ್ಹ್ಯಾಮ್ನಿಂದ ಲಂಡನ್ಗೆ ಭಾರತ ತಂಡದ ಬಸ್ನಲ್ಲಿಯೂ ಪ್ರಯಾಣಿಸಿರಲಿಲ್ಲ. ಹೀಗಾಗಿ ಮೊದಲ ಪಂದ್ಯದಲ್ಲಿ ಕೊಹ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇಲ್ಲ ಎನ್ನಲಾಗಿದೆ.
ಈ ವಿಚಾರವಾಗಿ ಬಿಸಿಸಿಐ ಮೂಲಗಳು ಮಾಹಿತಿ ನೀಡಿದೆ. "ಕಳೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತೊಡೆಯ ಗಾಯಕ್ಕೆ ಒಳಗಾಗಿದ್ದರು. ಇದು ಬ್ಯಾಟಿಂಗ್ ವೇಳೆ ಸಂಭವಿಸಿದೆಯ ಅಥವಾ ಫೀಲ್ಡಿಂಗ್ ವೇಲೆ ಸಂಭವಿಸಿದೆಯಾ ತಿಳಿದಿಲ್ಲ. ಅವರು ಓವಲ್ನಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿಲ್ಲ. ಅವರು ವಿಶ್ರಾಂತಿ ಪಡೆಯುವ ಅಗತ್ಯವಿದೆ" ಎಂದು ಮೂಲಗಳ ಹೇಳಿಕೆಯನ್ನು ಪಿಟಿಐ ಉಲ್ಲೇಖಿಸಿದೆ.
ಪಿಟಿಐ ವರದಿಯ ಪ್ರಕಾರ ವಿರಾಟ್ ಕೊಹ್ಲಿ ಟಿ20 ಸರಣಿಯ ಅಂತಿಮ ಪಂದ್ಯ ಮುಕ್ತಾಯದ ಬಳಿಕ ನಾಟಿಂಗ್ಹ್ಯಾಮ್ನಿಂದ ಲಂಡನ್ಗೆ ತಂಡದ ಬಸ್ನಲ್ಲಿ ಪ್ರಯಾಣಿಸಿಲ್ಲ ಎನ್ನಲಾಗಿದೆ. ಇದಕ್ಕೆ ಕಾರಣವೇನೆಂದು ಸ್ಪಷ್ಟವಾಗಿಲ್ಲವಾದರೂ ಗಾಯದ ಕಾರಣಕ್ಕೆ ವೈದ್ಯಕೀಯ ಪರೀಕ್ಷೆಯ ಸಲುವಾಗಿ ಉಳಿದುಕೊಂಡಿರಬಹುದು ಎನ್ನಲಾಗಿದೆ.
ಪದೇ ಪದೇ ವಿಫಲವಾಗುತ್ತಿರುವ ಕೊಹ್ಲಿ: ಇನ್ನು ವಿರಾಟ್ ಕೊಹ್ಲಿ ಟಿ20 ಸರಣಿಯಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು ಸಾಕಷ್ಟು ಟೀಕೆಗೆ ಗುರಿಯಾಗಿದ್ದಾರೆ. ಹೀಗಾಗಿ ಟಿ20 ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವ ಬಗ್ಗೆಯೂ ಪ್ರಶ್ನೆಗಳು ಎದ್ದಿದೆ. ಹಲವು ಮಾಜಿ ಕ್ರಿಕೆಟಿಗರು ವಿರಾಟ್ ಕೊಹ್ಲಿ ಪ್ರದರ್ಶನದ ಬಗ್ಗೆ ಕಟು ಮಾತುಗಳನ್ನಾಡಿದ್ದಾರೆ. ಆದರೆ ನಾಯಕ ರೋಹಿತ್ ಶರ್ಮಾ ವಿರಾಟ್ ಕೊಹ್ಲಿಗೆ ಬೆಂಬಲವಾಗಿ ನಿಂತಿದ್ದು ಕೊಹ್ಲಿ ಪರವಾಗಿ ಮಾತುಗಳನ್ನಾಡಿದ್ದಾರೆ.
ಭಾರತ ಸ್ಕ್ವಾಡ್ ಹೀಗಿದೆ: ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ , ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್
ಇಂಗ್ಲೆಂಡ್ ಸ್ಕ್ವಾಡ್: ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಜೇಸನ್ ರಾಯ್, ಜಾನಿ ಬೈರ್ಸ್ಟೋ, ಜೋ ರೂಟ್, ಲಿಯಾಮ್ ಲಿವಿಂಗ್ಸ್ಟನ್, ಬೆನ್ ಸ್ಟೋಕ್ಸ್, ಮೊಯಿನ್ ಅಲಿ, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ಮ್ಯಾಥ್ಯೂ ಪಾರ್ಕಿನ್ಸನ್, ರೀಸ್ ಟೋಪ್ಲಿ, ಕ್ರೇಗ್ ಓವರ್ಟನ್, ಸ್ಯಾಮ್ ಕರ್ರಾನ್, ಫಿಲಿಪ್ ಸಾಲ್ಟ್, ಹ್ಯಾರಿ ಬ್ರೂಕ್