ಸದ್ಯ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡು ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿರುವುದು ನಿಮಗೆಲ್ಲರಿಗೂ ತಿಳಿದೇ ಇದೆ. 5 ಟೆಸ್ಟ್ ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳು ಈಗಾಗಲೇ ಮುಗಿದಿದ್ದು, ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ಮಳೆಯ ಕಾರಣಕ್ಕೆ ನೀರಸ ಡ್ರಾನಲ್ಲಿ ಅಂತ್ಯಗೊಂಡಿತ್ತು. ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವೆ ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 151 ರನ್ಗಳ ಜಯವನ್ನು ಸಾಧಿಸುವುದರ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿತ್ತು.
ಭಾರತ vs ಇಂಗ್ಲೆಂಡ್ ತೃತೀಯ ಟೆಸ್ಟ್: ತಾನು ಮಾಡಿದ ತಪ್ಪಿನ ಕುರಿತು ಮಾತನಾಡಿದ ರಿಷಭ್ ಪಂತ್
ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್ನಲ್ಲಿಯೇ ಕಳಪೆ ಪ್ರದರ್ಶನ ನೀಡುವುದರ ಮೂಲಕ ಮಂಕಾಗಿದೆ. ಲೀಡ್ಸ್ ಅಂಗಳದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಮೊದಲನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ ಆಟಗಾರರು ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದರು. ಕೇವಲ 40.4 ಓವರ್ಗಳ ಬ್ಯಾಟಿಂಗ್ ಮಾಡಿದ ಭಾರತ ತಂಡ ತನ್ನೆಲ್ಲಾ ವಿಕೆಟ್ಗಳನ್ನು ಕಳೆದುಕೊಂಡು ಕೇವಲ 78 ರನ್ಗೆ ಆಲ್ ಔಟ್ ಆಯಿತು.
ಹೀಗೆ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್ನಲ್ಲಿ ಟೀಮ್ ಇಂಡಿಯಾದ ಎಲ್ಲಾ ಬ್ಯಾಟ್ಸ್ಮನ್ಗಳೂ ಸಹ ವಿಫಲರಾದ ಕಾರಣ ಪಾಕಿಸ್ತಾನದ ಮಾಜಿ ನಾಯಕ ಇನ್ಜಮಾಮ್ ಉಲ್ ಹಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಭಾರತದ ಕಳಪೆ ಪ್ರದರ್ಶನಕ್ಕೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನೇರ ಹೊಣೆಗಾರರು ಎಂದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್ನಲ್ಲಿ ಭಾರತೀಯ ಬ್ಯಾಟ್ಸ್ಮನ್ಗಳ ಕಳಪೆ ಪ್ರದರ್ಶನದ ವಿರುದ್ಧ ಅಸಮಾಧಾನಗೊಂಡ ಇನ್ಜಮಾಮ್ ಉಲ್ ಹಕ್ ಭಾರತದ ಯಾವುದೇ ಬ್ಯಾಟ್ಸ್ಮನ್ ಕೂಡ ಇಂಗ್ಲೆಂಡ್ ಬೌಲರ್ಗಳ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶನ ಮಾಡುವುದರ ಮೂಲಕ ಒತ್ತಡ ಹೇರುವ ಪ್ರಯತ್ನವನ್ನು ಮಾಡಲೇ ಇಲ್ಲ ಎಂದಿದ್ದಾರೆ.
ಅದರಲ್ಲಿಯೂ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಬ್ಯಾಟಿಂಗ್ ವಿರುದ್ಧ ಹೆಚ್ಚಿನ ಅಸಮಾಧಾನ ವ್ಯಕ್ತಪಡಿಸಿರುವ ಇನ್ಜಮಾಮ್ ಉಲ್ ಹಕ್ ರೋಹಿತ್ ಶರ್ಮಾ 105 ಎಸೆತಗಳನ್ನು ಎದುರಿಸಿದರೂ ಸಹ ದೊಡ್ಡ ಇನ್ನಿಂಗ್ಸ್ ಕಟ್ಟುವ ಪ್ರಯತ್ನವನ್ನು ಮಾಡಲೇ ಇಲ್ಲ ಮತ್ತು ವಿರಾಟ್ ಕೊಹ್ಲಿ ಕೂಡ 31 ಎಸೆತಗಳನ್ನು ಎದುರಿಸಿದ ನಂತರವೂ ಉತ್ತಮ ಆಟವನ್ನು ವಿಕೆಟ್ ಒಪ್ಪಿಸುವುದರ ಮೂಲಕ ತಂಡವನ್ನು ಒತ್ತಡಕ್ಕೆ ಸಿಲುಕಿಸಿದರು ಎಂದು ಇನ್ಜಮಾಮ್ ಉಲ್ ಹಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರೋಹಿತ್ ಶರ್ಮಾ ತನಗಾಗಿ ಮಾತ್ರ ಆಡುತ್ತಿದ್ದಾರೆ; ಕಳಪೆ ಪ್ರದರ್ಶನದ ಬೆನ್ನಲ್ಲೇ ಕೇಳಿಬಂತು ಮಹಾ ಆರೋಪ!
ಕೇವಲ ಇನ್ಜಮಾಮ್ ಉಲ್ ಹಕ್ ಮಾತ್ರವಲ್ಲದೇ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಭಾರತೀಯ ಬ್ಯಾಟ್ಸ್ಮನ್ಗಳು ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್ನಲ್ಲಿ ತೋರಿದ ಕೆಟ್ಟ ಪ್ರದರ್ಶನದ ಕುರಿತು ಕಿಡಿಕಾರಿದ್ದಾರೆ. ಭಾರತದ ಕ್ರಿಕೆಟ್ ಅಭಿಮಾನಿಗಳು ಹೆಚ್ಚಾಗಿ ಚೇತೇಶ್ವರ್ ಪೂಜಾರ ಆಟದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು ಮುಂದಿನ ಪಂದ್ಯಗಳಲ್ಲಿ ಚೇತೇಶ್ವರ್ ಪೂಜಾರಾರನ್ನು ಆಡುವ ಬಳಗದಲ್ಲಿ ಸೇರಿಸಿಕೊಳ್ಳಬೇಡಿ ಎಂದು ಬಿಸಿಸಿಐಗೆ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಹಾಗೂ ಭಾರತದ ನಾಯಕ ವಿರಾಟ್ ಕೊಹ್ಲಿ ವಿರುದ್ಧವೂ ಸಹ ಅಸಮಾಧಾನ ವ್ಯಕ್ತಪಡಿಸಿರುವ ನೆಟ್ಟಿಗರು ವಿರಾಟ್ ಕೊಹ್ಲಿ ಕೇವಲ ನಾಯಕನಾಗಿ ಮಾತ್ರ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಹೊರತು ಓರ್ವ ಆಟಗಾರನಾಗಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.