ಮೂರು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಗಾಗಿ ಅನುಭವಿ ಜಸ್ಪ್ರೀತ್ ಬುಮ್ರಾ ನಾಯಕತ್ವದ ಭಾರತ ಕ್ರಿಕೆಟ್ ತಂಡವು ಮಂಗಳವಾರ, ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಐರ್ಲೆಂಡ್ಗೆ ಪ್ರಯಾಣ ಬೆಳೆಸಿತು.

ಇದೇ ಆಗಸ್ಟ್ 18ರಿಂದ ಐರ್ಲೆಂಡ್ನಲ್ಲಿ ಆರಂಭವಾಗಲಿರುವ ಮುಂಬರುವ ಟಿ20 ಸರಣಿಯ ವೇಳೆ ಜಸ್ಪ್ರೀತ್ ಬುಮ್ರಾ ಅವರು ಅಂತಾರಾಷ್ಟ್ರೀಯ ಸ್ಪರ್ಧಾತ್ಮಕ ಕ್ರಿಕೆಟ್ಗೆ ತಮ್ಮ ಬಹುನಿರೀಕ್ಷಿತ ಪುನರಾಗಮನ ಮಾಡಲು ಸಜ್ಜಾಗಿದ್ದಾರೆ.
ಅಜಿತ್ ಅಗರ್ಕರ್ ನೇತೃತ್ವದ ಭಾರತದ ಹಿರಿಯ ಪುರುಷರ ತಂಡದ ಆಯ್ಕೆ ಸಮಿತಿಯು ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತದ ತಂಡದ ನಾಯಕತ್ವವನ್ನು ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾಗೆ ವಹಿಸಿದೆ.
ಇನ್ನು 2023ರ ಏಷ್ಯನ್ ಗೇಮ್ಸ್ ಪಂದ್ಯಾವಳಿಯಲ್ಲಿ ಭಾರತದ ಯುವ ಕ್ರಿಕೆಟ್ ತಂಡವನ್ನು ಮುನ್ನಡೆಸಲಿರುವ ರುತುರಾಜ್ ಗಾಯಕ್ವಾಡ್ ಅವರನ್ನು ಈ ಸರಣಿಗೆ ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಇತ್ತೀಚಿಗೆ ಮುಕ್ತಾಯಗೊಂಡ ವೆಸ್ಟ್ ಇಂಡೀಸ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಭಾರತ ತಂಡದ ಭಾಗವಾಗಿದ್ದ ಯಶಸ್ವಿ ಜೈಸ್ವಾಲ್ ಮತ್ತು ತಿಲಕ್ ವರ್ಮಾ ಅವರಂತಹ ಯುವ ಆಟಗಾರರನ್ನು ತಂಡದಲ್ಲಿ ಸ್ಥಾನ ಪಡೆದಿದ್ದಾರೆ
ಐರ್ಲೆಂಡ್ ಪ್ರವಾಸದಲ್ಲಿ ಸಂಜು ಸ್ಯಾಮ್ಸನ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿ ಹೆಸರಿಸಲಾಗಿದ್ದರೆ, ಪಂಜಾಬ್ ಕಿಂಗ್ಸ್ ಸ್ಟಾರ್ ಜಿತೇಶ್ ಶರ್ಮಾ ಎರಡನೇ ಆಯ್ಕೆಯ ವಿಕೆಟ್ ಕೀಪರ್ ಆಗಿ ತಂಡದಲ್ಲಿದ್ದಾರೆ. ಐರ್ಲೆಂಡ್ ವಿರುದ್ಧದ ಸರಣಿಯ ಭಾರತ ತಂಡದಲ್ಲಿ ಸ್ಥಾನ ಪಡೆದ ಪ್ರಸಿದ್ಧ್ ಕೃಷ್ಣ ಏಕೈಕ ಕನ್ನಡಿಗನಾಗಿದ್ದಾರೆ.
ಎಡಗೈ ಸ್ಪಿನ್ನರ್ ಶಹಬಾಜ್ ಅಹ್ಮದ್ ಜೊತೆಗೆ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ, ಫೆಬ್ರವರಿ 2022ರಲ್ಲಿ ಭಾರತಕ್ಕಾಗಿ ಕೊನೆಯದಾಗಿ ಟಿ20 ಪಂದ್ಯ ಆಡಿದ್ದ ಶಿವಂ ದುಬೆ ಮತ್ತೆ ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ.
ಸದ್ಯ ನಡೆಯುತ್ತಿರುವ ದೇವಧರ್ ಟ್ರೋಫಿ ಅಭಿಯಾನದಲ್ಲಿ ಪಶ್ಚಿಮ ವಲಯ ತಂಡದ ಪರ ಉತ್ತಮ ಫಾರ್ಮ್ನಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಆಲ್ರೌಂಡರ್ ಶಿವಂ ದುಬೆ ಅವರು ಏಷ್ಯನ್ ಗೇಮ್ಸ್ ತಂಡದ ಭಾಗವಾಗಿದ್ದಾರೆ.
ಜಸ್ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್.
ಆಗಸ್ಟ್ 18: ಮೊದಲ ಟಿ20 ಪಂದ್ಯ - ವಿಲೇಜ್ ಗ್ರೌಂಡ್, ಮಲಾಹೈಡ್
ಆಗಸ್ಟ್ 20: ಎರಡನೇ ಟಿ20 ಪಂದ್ಯ - ವಿಲೇಜ್ ಗ್ರೌಂಡ್, ಮಲಾಹೈಡ್
ಆಗಸ್ಟ್ 23: ಮೂರನೇ ಟಿ20 ಪಂದ್ಯ - ವಿಲೇಜ್ ಗ್ರೌಂಡ್, ಮಲಾಹೈಡ್