
ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ನ್ಯೂಜಿಲೆಂಡ್ ಭಾರತ ಪ್ರವಾಸವನ್ನು ಕೈಗೊಂಡಿದ್ದು 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿದೆ. ಇತ್ತಂಡಗಳ ನಡುವೆ ಈಗಾಗಲೇ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮುಗಿದಿದ್ದು, ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಟಿಮ್ ಸೌಥಿ ನಾಯಕತ್ವದ ನ್ಯೂಜಿಲೆಂಡ್ ವಿರುದ್ಧ 3-0 ಅಂತರದಲ್ಲಿ ಜಯ ಗಳಿಸುವುದರ ಮೂಲಕ ವೈಟ್ ವಾಶ್ ಬಳಿದಿದೆ.
ಈ ಮೂಲಕ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲುವುದರ ಮೂಲಕ ಸೆಮಿಫೈನಲ್ ಪ್ರವೇಶಿಸುವ ಅವಕಾಶವನ್ನು ಕಳೆದುಕೊಂಡಿದ್ದ ಟೀಮ್ ಇಂಡಿಯಾ ಪ್ರತೀಕಾರ ತೀರಿಸಿಕೊಂಡಿದೆ. ಅತ್ತ ಭಾರತ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ ಸರಣಿಯಲ್ಲಿ ಕ್ಲೀನ್ ಸ್ವೀಪ್ ಅನುಭವಿಸಿ ಮುಖಭಂಗಕ್ಕೆ ಒಳಗಾಗಿರುವ ನ್ಯೂಜಿಲೆಂಡ್ ಭಾರತ ವಿರುದ್ಧ ಆರಂಭವಾಗಲಿರುವ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಳ್ಳುವ ತವಕದಲ್ಲಿದೆ. ಇತ್ತ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಕೂಡ ಗೆಲ್ಲುವುದರ ಮೂಲಕ ಇದೇ ವರ್ಷ ನಡೆದಿದ್ದ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧದ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಯೋಜನೆಯಲ್ಲಿದೆ.
ಹೀಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಟೆಸ್ಟ್ ಸರಣಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದು, ಇಂದು ( ನವೆಂಬರ್ 25 ) ಕಾನ್ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇತ್ತಂಡಗಳ ನಡುವಿನ ಪ್ರಥಮ ಟೆಸ್ಟ್ ಪಂದ್ಯ ಆರಂಭವಾಗಿದೆ. ತಂಡದ ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮ, ರಿಷಭ್ ಪಂತ್, ಶಾರ್ದೂಲ್ ಠಾಕೂರ್ ಮತ್ತು ಜಸ್ ಪ್ರೀತ್ ಬೂಮ್ರಾ ಅನುಪಸ್ಥಿತಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿರುವ ಟೀಂ ಇಂಡಿಯಾದ ಯುವ ಆಟಗಾರರ ಮೇಲೆ ಸಾಕಷ್ಟು ದೊಡ್ಡ ಜವಾಬ್ದಾರಿಯಿದೆ. ಅದರಲ್ಲಿಯೂ ಅನುಭವಿ ಆಟಗಾರರಾಗಿರುವ ನಾಯಕ ಅಜಿಂಕ್ಯ ರಹಾನೆ ಮತ್ತು ಉಪ ನಾಯಕ ಚೇತೇಶ್ವರ್ ಪೂಜಾರಾ ಮೇಲೆ ನಿರೀಕ್ಷೆ ತುಸು ಹೆಚ್ಚೇ ಇತ್ತು.
ತಂಡದ ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಈ ಇಬ್ಬರು ಆಟಗಾರರು ಉತ್ತಮ ಪ್ರದರ್ಶನವನ್ನು ನೀಡಿ ಆಸರೆಯಾಗಬೇಕಾದ ಅನಿವಾರ್ಯತೆ ಇತ್ತು. ಕಳೆದ 2 ವರ್ಷಗಳಿಂದ ಈ ಇಬ್ಬರು ಆಟಗಾರರು ಸಹ ದೊಡ್ಡ ಮಟ್ಟದ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾಗಿದ್ದು ಈ ಸರಣಿಯ ಮೂಲಕ ಉತ್ತಮ ಪ್ರದರ್ಶನ ನೀಡಿ ಯಶಸ್ಸಿನ ಹಾದಿಗೆ ಮರಳಲಿದ್ದೇವೆ ಎಂಬ ಆಶ್ವಾಸನೆಯನ್ನು ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯ ಆರಂಭವಾಗುವುದಕ್ಕೂ ಮುನ್ನ ನೀಡಿದ್ದರು.
ಆದರೆ ನ್ಯೂಜಿಲೆಂಡ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದ ಪ್ರಥಮ ಇನ್ನಿಂಗ್ಸ್ನಲ್ಲಿ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ್ ಪೂಜಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುವಲ್ಲಿ ಪುನಃ ವಿಫಲರಾಗಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ 13 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರೆ, ಮತ್ತೋರ್ವ ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಅರ್ಧಶತಕ ( 52 ) ಬಾರಿಸಿ ಉತ್ತಮ ಆರಂಭವನ್ನು ಕಟ್ಟಿಕೊಟ್ಟರು. ಹೀಗೆ ಶುಬ್ ಮನ್ ಗಿಲ್ ಉತ್ತಮ ಆರಂಭವನ್ನು ಕಟ್ಟಿಕೊಟ್ಟ ನಂತರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಚೇತೇಶ್ವರ್ ಪೂಜಾರ ಮತ್ತು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಜಿಂಕ್ಯ ರಹಾನೆ ದೊಡ್ಡ ಇನ್ನಿಂಗ್ಸ್ ಕಟ್ಟುವಲ್ಲಿ ವಿಫಲರಾಗಿದ್ದಾರೆ.
ಚೇತೇಶ್ವರ್ ಪೂಜಾರ 88 ಎಸೆತಗಳನ್ನು ಎದುರಿಸಿ 26 ರನ್ ಕಲೆಹಾಕಿ ಔಟ್ ಆದರೆ, ಅಜಿಂಕ್ಯ ರಹಾನೆ 63 ಎಸೆತಗಳಲ್ಲಿ 35 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಹೀಗೆ ಕಣಕ್ಕಿಳಿದಿರುವ ಟೀಮ್ ಇಂಡಿಯಾ ಪೈಕಿ ಅತಿ ಹಿರಿಯ ಆಟಗಾರರೆನಿಸಿಕೊಂಡಿರುವ ಈ ಇಬ್ಬರು ಈ ರೀತಿ ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡುವುದರ ಮೂಲಕ ಮಹತ್ವದ ಪಂದ್ಯದಲ್ಲಿ ಆಸರೆಯಾಗುವಲ್ಲಿ ಎಡವಿದ್ದಾರೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯ ರಹಾನೆ ಕುರಿತು ಸಾಕಷ್ಟು ದೊಡ್ಡ ಮಟ್ಟದ ವಿರೋಧ ವ್ಯಕ್ತವಾಗುತ್ತಿದ್ದು ನೆಟ್ಟಿಗರು ಈ ಕೆಳಕಂಡಂತೆ ಕಿಡಿಕಾರಿದ್ದಾರೆ..
ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ್ ಪೂಜಾರ ಅವರ ಸಾಲು ಸಾಲು ಕಳಪೆ ಪ್ರದರ್ಶನದಿಂದ ಬೇಸರಕ್ಕೆ ಒಳಗಾಗಿರುವ ನೆಟ್ಟಿಗನೋರ್ವ ಈ ಇಬ್ಬರನ್ನು ತಂಡದಿಂದ ಯಾವಾಗ ಕೈ ಬಿಡುತ್ತೀರಿ ಎಂದು ಪ್ರಶ್ನೆಯನ್ನು ಹಾಕಿದ್ದಾರೆ.
ಚೇತೇಶ್ವರ್ ಪೂಜಾರ ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ವಿಫಲವಾದ ನಂತರ ನೆಟ್ಟಿಗನೋರ್ವ ಟ್ವೀಟ್ ಮಾಡಿದ್ದು ಚೇತೇಶ್ವರ್ ಪೂಜಾರಗಿದು ದೇಸಿ ಕ್ರಿಕೆಟ್ ಆಡಲು ಸರಿಯಾದ ಸಮಯ, ಹೀಗಾಗಿ ದೇಸಿ ಕ್ರಿಕೆಟ್ ಆಡುತ್ತಾ ಮನೆಯಲ್ಲಿ ವಿಶ್ರಾಂತಿ ಪಡೆಯಲಿ ಎಂದು ಬರೆದುಕೊಂಡಿದ್ದಾರೆ.
ಮತ್ತೋರ್ವ ಕ್ರಿಕೆಟ್ ವೀಕ್ಷಕ ಟ್ವೀಟ್ ಮಾಡಿದ್ದು ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜಿಂಕ್ಯ ರಹಾನೆಯನ್ನು ಕೈಬಿಟ್ಟು ರವೀಂದ್ರ ಜಡೇಜಾ ಅವರನ್ನು ಐದನೇ ಕ್ರಮಾಂಕದಲ್ಲಿ ಆಡಲು ಕಳುಹಿಸಬೇಕು ಎಂದು ಬರೆದುಕೊಳ್ಳುವುದರ ಮೂಲಕ ರಹಾನೆಯನ್ನು ತಂಡದಿಂದ ಆಚೆ ಹಾಕಬೇಕು ಎಂದಿದ್ದಾರೆ.