ಜಡೇಜಾ ಸೇರಿ ಮೂವರು ಪ್ರಮುಖರು ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ನಿಂದ ಹೊರಕ್ಕೆ!

ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೇ ಭಾರತ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್ ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಮೊದಲಿಗೆ ಇತ್ತಂಡಗಳ ನಡುವೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ನಡೆಯಿತು. ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ವಿರುದ್ಧ ನ್ಯೂಜಿಲೆಂಡ್ ಮಂಕಾಗಿ ಎಲ್ಲಾ 3 ಪಂದ್ಯಗಳಲ್ಲಿಯೂ ಸೋಲುವುದರ ಮೂಲಕ ಟಿ ಟ್ವೆಂಟಿ ಸರಣಿಯಲ್ಲಿ ವೈಟ್ ವಾಷ್ ಅವಮಾನಕ್ಕೆ ಒಳಗಾಯಿತು. ಇತ್ತ ಇದೇ ಮೊದಲ ಬಾರಿಗೆ ಸಂಪೂರ್ಣವಾಗಿ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ವಹಿಸಿಕೊಂಡ ರೋಹಿತ್ ಶರ್ಮಾ ತಮ್ಮ ಮೊದಲನೇ ಸರಣಿಯಲ್ಲಿಯೇ ವೈಟ್ ವಾಷ್ ಸಾಧನೆ ಮಾಡುವ ಮೂಲಕ ಶುಭಾರಂಭವನ್ನು ಮಾಡಿದರು.
ಭಾರತ vs ನ್ಯೂಜಿಲೆಂಡ್: ದ್ರಾವಿಡ್ ಬೌಲಿಂಗ್ಗೆ ಕೊಹ್ಲಿ ಬ್ಯಾಟಿಂಗ್ ಮಾಡುತ್ತಿರೋ ವಿಡಿಯೋ ವೈರಲ್
ಅತ್ತ ಭಾರತ ಪ್ರವಾಸವನ್ನು ಕೈಗೊಂಡು ಟೀಮ್ ಇಂಡಿಯಾ ವಿರುದ್ಧ ಟಿ ಟ್ವೆಂಟಿ ಸರಣಿಯಲ್ಲಿ ವೈಟ್ ವಾಷ್ ಮುಖಭಂಗಕ್ಕೆ ಒಳಗಾಗಿರುವ ನ್ಯೂಜಿಲೆಂಡ್ ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಳ್ಳುವುದರ ಮೂಲಕ ಪ್ರತೀಕಾರ ತೀರಿಸಿಕೊಳ್ಳುವ ಚಿಂತನೆಯಲ್ಲಿತ್ತು. ಆದರೆ ಟೀಮ್ ಇಂಡಿಯಾ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಹೇಳಿಕೊಳ್ಳುವಂತಹ ಉತ್ತಮ ಪ್ರದರ್ಶನವನ್ನೇನೂ ನೀಡಲಿಲ್ಲ. ಹೀಗಾಗಿ ಭಾರತ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಸೋಲಿನ ಸುಳಿಯಲ್ಲಿ ಸಿಲುಕಿಕೊಂಡಿತ್ತು. ಆದರೆ ನ್ಯೂಜಿಲೆಂಡ್ ತಂಡದ ಪರ ರಚಿನ್ ರವೀಂದ್ರ ಅಂತಿಮ ಹಂತದಲ್ಲಿ ಭಾರತೀಯ ಬೌಲರ್ಗಳು ಎಷ್ಟೇ ಕಠಿಣ ಪ್ರಯತ್ನ ನಡೆಸಿದರೂ ಕೂಡ ವಿಕೆಟ್ ಒಪ್ಪಿಸದೇ ತಂಡವನ್ನು ಸೋಲಿನ ಸುಳಿಯಿಂದ ಪಾರುಮಾಡಿದರು. ಹೀಗಾಗಿ ಪ್ರಥಮ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು.
ಹೀಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಪ್ರಥಮ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡರೆ, ದ್ವಿತೀಯ ಟೆಸ್ಟ್ ಪಂದ್ಯ ಮಳೆಯಿಂದಾಗಿ ವಿಳಂಬವಾಗುತ್ತಿದೆ. ಹೌದು, ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಡಿಸೆಂಬರ್ 3ರಿಂದ 7ರವರೆಗೆ ನಡೆಯಬೇಕಿದೆ. ಆದರೆ ಮುಂಬೈ ನಗರದಲ್ಲಿ ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಯ ಪ್ರಭಾವ ಪಂದ್ಯದ ಮೇಲೆ ಬೀರಿದ್ದು ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣ ಸಂಪೂರ್ಣವಾಗಿ ಒದ್ದೆಯಾಗಿದೆ. ಹೀಗಾಗಿ ಪಂದ್ಯದ ಟಾಸ್ ಕೂಡ ವಿಳಂಬವಾಗಿದ್ದು, ಇದರ ಜತೆಗೆ ಬಿಸಿಸಿಐ ಮತ್ತೊಂದು ಬೇಸರದ ಸುದ್ದಿಯನ್ನೂ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯ ಮೂಲಕ ಹಂಚಿಕೊಂಡಿದ್ದು ಅದರ ವಿವರ ಈ ಕೆಳಕಂಡಂತಿದೆ.

ಪಂದ್ಯ ಆರಂಭಕ್ಕೂ ಮುನ್ನವೇ ಹೊರಬಿದ್ದ ಭಾರತದ ಪ್ರಮುಖ 3 ಆಟಗಾರರು
ಟೀಮ್ ಇಂಡಿಯಾದ ಪ್ರಮುಖ ಮೂವರು ಆಟಗಾರರಾದ ರವೀಂದ್ರ ಜಡೇಜಾ, ಇಶಾಂತ್ ಶರ್ಮಾ ಮತ್ತು ಉಪನಾಯಕ ಅಜಿಂಕ್ಯ ರಹಾನೆ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.

ಪಂದ್ಯದಿಂದ ಹೊರಗುಳಿಯಲು ಕಾರಣ?
ಇಶಾಂತ್ ಶರ್ಮಾ, ರವೀಂದ್ರ ಜಡೇಜಾ ಮತ್ತು ಅಜಿಂಕ್ಯ ರಹಾನೆ ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿರುವುದಕ್ಕೆ ಕಾರಣ ಗಾಯದ ಸಮಸ್ಯೆ.
ಭಾರತದ ಪ್ರಮುಖ ವೇಗಿ ಇಶಾಂತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಕಾನ್ಪುರ ಟೆಸ್ಟ್ ಪಂದ್ಯದ ವೇಳೆ ಕಿರು ಬೆರಳಿನ ಗಾಯದ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಇಶಾಂತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲು ಆಗದೇ ತಂಡದಿಂದ ಹೊರಗುಳಿದಿದ್ದಾರೆ.
ಕಾನ್ಪುರ ಟೆಸ್ಟ್ ಪಂದ್ಯದ ವೇಳೆ ತನ್ನ ಬಲಗೈಗೆ ಪೆಟ್ಟು ಮಾಡಿಕೊಂಡಿರುವ ರವೀಂದ್ರ ಜಡೇಜಾ ಕೂಡ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.
ಭಾರತ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಕೂಡ ನ್ಯೂಜಿಲೆಂಡ್ ವಿರುದ್ಧದ ಕಾನ್ಪುರ ಟೆಸ್ಟ್ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಬಲಗೈಗೆ ಗಾಯಮಾಡಿಕೊಂಡಿದ್ದರು. ಹೀಗೆ ಗಾಯದ ಸಮಸ್ಯೆಗೆ ಒಳಗಾಗಿದ್ದ ಅಜಿಂಕ್ಯ ರಹಾನೆ ಇನ್ನೂ ಸುಧಾರಿಸಿಕೊಳ್ಳದ ಕಾರಣ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.

ಕೊಹ್ಲಿ, ಶ್ರೇಯಸ್ ಅಯ್ಯರ್ ಕಣಕ್ಕಿಳಿಯುವುದು ಖಚಿತ
ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಿಂದ ವಿಶ್ರಾಂತಿಗೆಂದು ವಿರಾಟ್ ಕೊಹ್ಲಿ ಹೊರಗುಳಿದಿದ್ದ ಕಾರಣ ಯುವ ಆಟಗಾರ ಶ್ರೇಯಸ್ ಅಯ್ಯರ್ ತನ್ನ ಚೊಚ್ಚಲ ಅಂತರರಾಷ್ಟ್ರೀಯ ಟೆಸ್ಟ್ ಪಂದ್ಯ ಆಡುವ ಅವಕಾಶವನ್ನು ಪಡೆದುಕೊಂಡು ಪ್ರಥಮ ಇನ್ನಿಂಗ್ಸ್ನಲ್ಲಿ ಶತಕ ಮತ್ತು ದ್ವಿತೀಯ ಇನ್ನಿಂಗ್ಸ್ನಲ್ಲಿ ಅರ್ಧ ಶತಕ ಬಾರಿಸಿ ಸಾಧನೆ ಮಾಡಿದ್ದರು. ಹೀಗೆ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದ ಕಾರಣ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಗಿಟ್ಟಿಸಿಕೊಂಡು ಮಿಂಚಿದ ಶ್ರೇಯಸ್ ಅಯ್ಯರ್ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರಿಗೆ ಸ್ಥಾನ ಬಿಟ್ಟುಕೊಟ್ಟು ಪಂದ್ಯದಿಂದ ಹೊರಗುಳಿಯಲಿದ್ದಾರಾ ಎಂಬ ಅನುಮಾನ ಹುಟ್ಟಿಕೊಂಡಿತ್ತು. ಆದರೆ ಇದೀಗ ತಂಡದ ಪ್ರಮುಖ ಮೂವರು ಆಟಗಾರರು ತಂಡದಿಂದ ಹೊರಬಿದ್ದಿರುವ ಕಾರಣ ಶ್ರೇಯಸ್ ಅಯ್ಯರ್ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಕೂಡ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications