ಪಂದ್ಯ ಆರಂಭಕ್ಕೂ ಮುನ್ನವೇ ಹೊರಬಿದ್ದ ಭಾರತದ ಪ್ರಮುಖ 3 ಆಟಗಾರರು
ಟೀಮ್ ಇಂಡಿಯಾದ ಪ್ರಮುಖ ಮೂವರು ಆಟಗಾರರಾದ ರವೀಂದ್ರ ಜಡೇಜಾ, ಇಶಾಂತ್ ಶರ್ಮಾ ಮತ್ತು ಉಪನಾಯಕ ಅಜಿಂಕ್ಯ ರಹಾನೆ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.
ಪಂದ್ಯದಿಂದ ಹೊರಗುಳಿಯಲು ಕಾರಣ?
ಇಶಾಂತ್ ಶರ್ಮಾ, ರವೀಂದ್ರ ಜಡೇಜಾ ಮತ್ತು ಅಜಿಂಕ್ಯ ರಹಾನೆ ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿರುವುದಕ್ಕೆ ಕಾರಣ ಗಾಯದ ಸಮಸ್ಯೆ.
ಭಾರತದ ಪ್ರಮುಖ ವೇಗಿ ಇಶಾಂತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಕಾನ್ಪುರ ಟೆಸ್ಟ್ ಪಂದ್ಯದ ವೇಳೆ ಕಿರು ಬೆರಳಿನ ಗಾಯದ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಇಶಾಂತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲು ಆಗದೇ ತಂಡದಿಂದ ಹೊರಗುಳಿದಿದ್ದಾರೆ.
ಕಾನ್ಪುರ ಟೆಸ್ಟ್ ಪಂದ್ಯದ ವೇಳೆ ತನ್ನ ಬಲಗೈಗೆ ಪೆಟ್ಟು ಮಾಡಿಕೊಂಡಿರುವ ರವೀಂದ್ರ ಜಡೇಜಾ ಕೂಡ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.
ಭಾರತ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಕೂಡ ನ್ಯೂಜಿಲೆಂಡ್ ವಿರುದ್ಧದ ಕಾನ್ಪುರ ಟೆಸ್ಟ್ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಬಲಗೈಗೆ ಗಾಯಮಾಡಿಕೊಂಡಿದ್ದರು. ಹೀಗೆ ಗಾಯದ ಸಮಸ್ಯೆಗೆ ಒಳಗಾಗಿದ್ದ ಅಜಿಂಕ್ಯ ರಹಾನೆ ಇನ್ನೂ ಸುಧಾರಿಸಿಕೊಳ್ಳದ ಕಾರಣ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.
ಕೊಹ್ಲಿ, ಶ್ರೇಯಸ್ ಅಯ್ಯರ್ ಕಣಕ್ಕಿಳಿಯುವುದು ಖಚಿತ
ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಿಂದ ವಿಶ್ರಾಂತಿಗೆಂದು ವಿರಾಟ್ ಕೊಹ್ಲಿ ಹೊರಗುಳಿದಿದ್ದ ಕಾರಣ ಯುವ ಆಟಗಾರ ಶ್ರೇಯಸ್ ಅಯ್ಯರ್ ತನ್ನ ಚೊಚ್ಚಲ ಅಂತರರಾಷ್ಟ್ರೀಯ ಟೆಸ್ಟ್ ಪಂದ್ಯ ಆಡುವ ಅವಕಾಶವನ್ನು ಪಡೆದುಕೊಂಡು ಪ್ರಥಮ ಇನ್ನಿಂಗ್ಸ್ನಲ್ಲಿ ಶತಕ ಮತ್ತು ದ್ವಿತೀಯ ಇನ್ನಿಂಗ್ಸ್ನಲ್ಲಿ ಅರ್ಧ ಶತಕ ಬಾರಿಸಿ ಸಾಧನೆ ಮಾಡಿದ್ದರು. ಹೀಗೆ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದ ಕಾರಣ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಗಿಟ್ಟಿಸಿಕೊಂಡು ಮಿಂಚಿದ ಶ್ರೇಯಸ್ ಅಯ್ಯರ್ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರಿಗೆ ಸ್ಥಾನ ಬಿಟ್ಟುಕೊಟ್ಟು ಪಂದ್ಯದಿಂದ ಹೊರಗುಳಿಯಲಿದ್ದಾರಾ ಎಂಬ ಅನುಮಾನ ಹುಟ್ಟಿಕೊಂಡಿತ್ತು. ಆದರೆ ಇದೀಗ ತಂಡದ ಪ್ರಮುಖ ಮೂವರು ಆಟಗಾರರು ತಂಡದಿಂದ ಹೊರಬಿದ್ದಿರುವ ಕಾರಣ ಶ್ರೇಯಸ್ ಅಯ್ಯರ್ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಕೂಡ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.