ಇತ್ತೀಚೆಗಷ್ಟೇ ಮುಕ್ತಾಯಗೊಂಡ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ವಿರುದ್ಧ ಸೋಲುವುದರ ಮೂಲಕ ತನ್ನ ಚೊಚ್ಚಲ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿಯುವ ಕನಸನ್ನು ನನಸು ಮಾಡಿಕೊಳ್ಳಲು ಆಗದೇ ಟೂರ್ನಿಯಿಂದ ರನ್ನರ್ ಅಪ್ ಆಗಿ ಹೊರಹೊಮ್ಮಿದ ನ್ಯೂಜಿಲೆಂಡ್ ಸದ್ಯ ಭಾರತ ಪ್ರವಾಸವನ್ನು ಕೈಗೊಂಡಿದ್ದು ಈಗಾಗಲೇ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನು ಆಡಿ ಮುಗಿಸಿದ್ದು ಸದ್ಯ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲು ತಯಾರಿ ನಡೆಸುತ್ತಿದೆ.
ಹೌದು, ಭಾರತ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್ ತಂಡ ಟೀಮ್ ಇಂಡಿಯಾ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಸೋಲುವುದರ ಮೂಲಕ ವೈಟ್ ವಾಷ್ ಅವಮಾನಕ್ಕೆ ಈಡಾಗಿದೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನವೆಂಬರ್ 17ರಂದು ಜೈಪುರದಲ್ಲಿ ನಡೆದ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್ಗಳ ಗೆಲುವು ದಾಖಲಿಸುವುದರ ಮೂಲಕ ಟಿ ಟ್ವೆಂಟಿ ಸರಣಿಯಲ್ಲಿ ಶುಭಾರಂಭವನ್ನು ಮಾಡಿತು. ನಂತರ ನವೆಂಬರ್ 19ರಂದು ರಾಂಚಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ 7 ವಿಕೆಟ್ಗಳ ಜಯವನ್ನು ಸಾಧಿಸುವ ಮೂಲಕ ಸತತ ಎರಡನೇ ಗೆಲುವು ಪಡೆದುಕೊಂಡಿತು. ಹಾಗೂ ಅಂತಿಮವಾಗಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 73 ರನ್ಗಳ ಭರ್ಜರಿ ಜಯವನ್ನು ಸಾಧಿಸಿತು. ಹೀಗೆ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟ್ವೆಂಟಿ ಸರಣಿಯನ್ನು ವೈಟ್ ವಾಷ್ ಮಾಡುವ ಮೂಲಕ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಪಂದ್ಯ ಸೋತಿದ್ದರ ಸೇಡನ್ನು ತೀರಿಸಿಕೊಂಡಿದೆ.
" />ಐಪಿಎಲ್ 2022: ಎಬಿ ಡಿವಿಲಿಯರ್ಸ್ ಸ್ಥಾನ ತುಂಬಬಲ್ಲ 5 ಆಟಗಾರರು
ಹೀಗೆ ಟಿ ಟ್ವೆಂಟಿ ಸರಣಿಯನ್ನು ವೈಟ್ ವಾಷ್ ಮಾಡುವ ಮೂಲಕ ಟಿ ಟ್ವೆಂಟಿ ವಿಶ್ವಕಪ್ ಸೋಲಿನ ಸೇಡನ್ನು ತೀರಿಸಿಕೊಂಡ ಟೀಮ್ ಇಂಡಿಯಾ ಇದೀಗ ಇದೇ ವರ್ಷ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಸೋಲುವುದರ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಟ್ರೋಫಿ ಗೆಲ್ಲಲಾಗದೇ ಅಂತಿಮ ಹಂತದಲ್ಲಿ ಎಡವಿದ್ದ ಸೇಡನ್ನು ತೀರಿಸಿಕೊಳ್ಳುವ ಯೋಜನೆಯಲ್ಲಿದೆ.
ಆದರೆ ನ್ಯೂಜಿಲೆಂಡ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅಲಭ್ಯರಾಗಿರುವುದು ಟೀಮ್ ಇಂಡಿಯಾದಲ್ಲಿ ದೊಡ್ಡ ಬದಲಾವಣೆ ಉಂಟಾಗುವುದು ಮಾತ್ರವಲ್ಲದೆ ಪರಿಣಾಮವನ್ನೂ ಸಹ ಬೀರಲಿದೆ. ಹೌದು, ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಕಾನ್ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನವೆಂಬರ್ 25ರಿಂದ ಆರಂಭವಾಗಲಿರುವ ಪ್ರಥಮ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅಲಭ್ಯರಾಗಲಿದ್ದಾರೆ ಹಾಗೂ ಅಜಿಂಕ್ಯ ರಹಾನೆ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ.
ಇನ್ನು ಪಂದ್ಯದಲ್ಲಿ ಆರಂಭಿಕ ಆಟಗಾರರಾಗಿ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಕಣಕ್ಕಿಳಿಯಲಿದ್ದು ಮತ್ತು ಮೂರನೇ ಕ್ರಮಾಂಕದಲ್ಲಿ ಚೇತೇಶ್ವರ್ ಪೂಜಾರ ಬ್ಯಾಟ್ ಬೀಸಲಿದ್ದಾರೆ. ಹೀಗೆ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿಯೂ ಟೀಮ್ ಇಂಡಿಯಾಗೆ ಆರಂಭಿಕ ಆಟಗಾರರ ಆಯ್ಕೆಗಳು ಕೈನಲ್ಲಿವೆ. ಆದರೆ ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಅನುಪಸ್ಥಿತಿಯನ್ನು ಯಾರು ತುಂಬಲಿದ್ದಾರೆ ಎಂಬ ಪ್ರಶ್ನೆ ಇದೀಗ ಚಿಂತೆಗೀಡಾಗುವಂತೆ ಮಾಡಿದೆ. ಶ್ರೇಯಸ್ ಅಯ್ಯರ್ ಅಂತರರಾಷ್ಟ್ರೀಯ ಟೆಸ್ಟ್ ಪದಾರ್ಪಣೆ ಮಾಡಲಿದ್ದು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಿದೆ ಎನ್ನಲಾಗುತ್ತಿದೆ. ಇನ್ನು ದೇಸಿ ಕ್ರಿಕೆಟ್ನಲ್ಲಿ ಶ್ರೇಯಸ್ ಅಯ್ಯರ್ ಉತ್ತಮ ರನ್ ಕಲೆ ಹಾಕಿದ್ದರೂ ಸಹ 2019ರ ಇರಾನಿ ಕಪ್ ನಂತರದ ಯಾವುದೇ ಕೆಂಪು ಚೆಂಡಿನ ಕ್ರಿಕೆಟ್ನಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕಿಳಿದಿಲ್ಲ. ಹೀಗಾಗಿ ಟೆಸ್ಟ್ ಕ್ರಿಕೆಟ್ ಆಡಿ ಹಲವಾರು ವರ್ಷಗಳು ಕಳೆದಿರುವ ಶ್ರೇಯಸ್ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಉತ್ತಮವಾಗಿ ಬ್ಯಾಟ್ ಬೀಸಬಲ್ಲರಾ ಎಂಬ ಪ್ರಶ್ನೆ ಇದೀಗ ಮೂಡಿದೆ.
ಬಾಬರ್, ಅಫ್ರಿದಿ ಸೇರಿದಂತೆ 11 ಅತ್ಯುತ್ತಮ ಆಟಗಾರರನ್ನು ಹೆಸರಿಸಿದ ಪೀಟರ್ಸನ್; ಭಾರತೀಯರಿಗಿಲ್ಲ ಸ್ಥಾನ!
ಇನ್ನುಳಿದಂತೆ ಕಾನ್ಪುರ ಟೆಸ್ಟ್ ಪಂದ್ಯದಿಂದ ಭಾರತದ ವಿಕೆಟ್ ಕೀಪರ್ ರಿಷಭ್ ಪಂತ್ ಕೂಡ ಹೊರಗುಳಿಯಲಿದ್ದು ವೃದ್ಧಿಮಾನ್ ಸಹಾ ವಿಕೆಟ್ ಕೀಪಿಂಗ್ ಜವಾಬ್ದಾರಿ ಹೊತ್ತುಕೊಳ್ಳಲಿದ್ದಾರೆ. ಹೀಗೆ ನ್ಯೂಜಿಲೆಂಡ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಭಾರತದ ಸಂಭಾವ್ಯ ತಂಡ ಈ ಕೆಳಕಂಡಂತೆ ಇರಲಿದ್ದು ಬಲಿಷ್ಠ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.
ಭಾರತ ಸಂಭಾವ್ಯ ತಂಡ: ಕೆ ಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಶ್ರೇಯಸ್ ಅಯ್ಯರ್, ಅಜಿಂಕ್ಯ ರಹಾನೆ (ನಾಯಕ), ವೃದ್ಧಿಮಾನ್ ಸಹಾ ( ವಿಕೆಟ್ ಕೀಪರ್ ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್/ ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್ ಮತ್ತು ಇಶಾಂತ್ ಶರ್ಮಾ