ಪದಾರ್ಪಣೆ ಪಂದ್ಯದಲ್ಲೇ ಮಿಂಚಿದ ಶ್ರೇಯಸ್; ಮುಂದಿನ ಟೆಸ್ಟ್ ಪಂದ್ಯದಲ್ಲಿ ನಾಯಕನಿಗೇ ಸ್ಥಾನ ಅನುಮಾನ!

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದ ನ್ಯೂಜಿಲೆಂಡ್ ತನ್ನ ಚೊಚ್ಚಲ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವ ಕನಸನ್ನು ನನಸು ಮಾಡಿಕೊಳ್ಳಲಾಗದೇ ಟೂರ್ನಿಯಿಂದ ಹೊರಬಂದ ನಂತರ ಇದೀಗ ಭಾರತ ಪ್ರವಾಸವನ್ನು ಕೈಗೊಂಡಿದ್ದು ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿದಿದೆ. ಇತ್ತಂಡಗಳ ನಡುವೆ ಮೊದಲಿಗೆ ನಡೆದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ಗೆ ವೈಟ್ ವಾಶ್ ಬಳಿದು ಸಾಧನೆ ಮಾಡಿತು. ಈಗ ಇತ್ತಂಡಗಳ ನಡುವೆ ಟೆಸ್ಟ್ ಸರಣಿ ಆರಂಭವಾಗಿದ್ದು ಚೊಚ್ಚಲ ಪಂದ್ಯ ಕಾನ್ಪುರದಲ್ಲಿ ನಡೆಯುತ್ತಿದೆ.
ಇನ್ನು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ರಿಷಬ್ ಪಂತ್, ವಿರಾಟ್ ಕೊಹ್ಲಿ ( ಮೊದಲ ಪಂದ್ಯ ಮಾತ್ರ ), ಕೆಎಲ್ ರಾಹುಲ್, ಶಾರ್ದೂಲ್ ಠಾಕೂರ್ ಹಾಗೂ ಜಸ್ಪ್ರಿತ್ ಬೂಮ್ರಾ ವಿಶ್ರಾಂತಿಗೆಂದು ಹೊರಗುಳಿದಿದ್ದು ಯುವ ಆಟಗಾರರಿಗೆ ಕಣಕ್ಕಿಳಿಯುವ ಅವಕಾಶಗಳು ಲಭಿಸಿವೆ. ಅದರಲ್ಲಿಯೂ ಕೆಎಲ್ ರಾಹುಲ್ ಹೊರಗುಳಿದ ನಂತರ ಶುಬ್ಮನ್ ಗಿಲ್ ಆರಂಭಿಕ ಆಟಗಾರನಾಗಿ ನ್ಯೂಜಿಲೆಂಡ್ ವಿರುದ್ಧದ ಚೊಚ್ಚಲ ಪಂದ್ಯದಲ್ಲಿ ಕಣಕ್ಕಿಳಿದ ಸಲುವಾಗಿ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕಿಳಿಯುವ ಅವಕಾಶ ಪಡೆದುಕೊಂಡರು. ಈ ಮೂಲಕ ಶ್ರೇಯಸ್ ಅಯ್ಯರ್ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದರು. ಪದಾರ್ಪಣೆ ಮಾಡಿದ ಪಂದ್ಯದಲ್ಲಿಯೇ ಅದ್ಭುತ ಪ್ರದರ್ಶನ ನೀಡಿರುವ ಶ್ರೇಯಸ್ ಅಯ್ಯರ್ ಮೊದಲ ದಿನದಾಟದಂತ್ಯಕ್ಕೆ 136 ಎಸೆತಗಳಲ್ಲಿ ಅಜೇಯ 75 ರನ್ ಕಲೆ ಹಾಕಿದ್ದು ಎರಡನೇ ದಿನದಾಟದಂದು ಶತಕ ಬಾರಿಸುವ ನಿರೀಕ್ಷೆ ಹುಟ್ಟುಹಾಕಿದ್ದಾರೆ.
ಸದ್ಯ ನ್ಯೂಜಿಲೆಂಡ್ ವಿರುದ್ಧದ ಚೊಚ್ಚಲ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದು, ಅಜಿಂಕ್ಯ ರಹಾನೆ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಆದರೆ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ಟೀಮ್ ಇಂಡಿಯಾಗೆ ಮರಳಲಿದ್ದು ನಾಯಕತ್ವವನ್ನು ನಿರ್ವಹಿಸಲಿದ್ದಾರೆ. ಹೀಗೆ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ಮರಳಲಿದ್ದು, ತಂಡದಿಂದ ಯಾವ ಆಟಗಾರನನ್ನು ಹೊರ ಹಾಕಲಿದ್ದಾರೆ ಎಂಬ ಪ್ರಶ್ನೆ ಇದೀಗ ಕುತೂಹಲ ಮೂಡಿಸಿದೆ. ಅದರಲ್ಲಿಯೂ ಶ್ರೇಯಸ್ ಅಯ್ಯರ್ ನೀಡಿದ ಉತ್ತಮ ಪ್ರದರ್ಶನ ಇದೀಗ ಯಾವ ಆಟಗಾರರನ್ನು ತಂಡದಿಂದ ಹೊರಗಿಡಬೇಕು ಎಂಬ ವಿಷಯದಲ್ಲಿ ಗೊಂದಲ ಏಳುವಂತೆ ಮಾಡಿದೆ. ಶ್ರೇಯಸ್ ಅಯ್ಯರ್ ಉತ್ತಮ ಪ್ರದರ್ಶನ ನೀಡಿದ ಕಾರಣ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದಿಂದ ಸ್ಥಾನ ಕಳೆದುಕೊಳ್ಳಬಹುದಾದ ಆಟಗಾರರ ವಿವರ ಈ ಕೆಳಕಂಡಂತಿದೆ..

ಶ್ರೇಯಸ್ ಅಯ್ಯರ್ ಶತಕ ಬಾರಿಸಿದರೆ ಹಿರಿಯ ಆಟಗಾರ ಹೊರಬೀಳುವುದು ಬಹುತೇಕ ಖಚಿತ
ಮೊದಲ ದಿನದಾಟದಂತ್ಯಕ್ಕೆ ಅಜೇಯ 75 ರನ್ ಬಾರಿಸಿ ಉತ್ತಮ ಪ್ರದರ್ಶನ ನೀಡಿರುವ ಶ್ರೇಯಸ್ ಅಯ್ಯರ್ ಈ ಇನ್ನಿಂಗ್ಸ್ನಲ್ಲಿ ಶತಕ ಬಾರಿಸಿದರೆ ಮುಂಬೈನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆದುಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಹೀಗಾಗಿ ಮುಂಬೈ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮರಳಿ ತಂಡ ಸೇರಲಿದ್ದು ಶ್ರೇಯಸ್ ಅಯ್ಯರ್ ಅವರನ್ನು ತಂಡದಿಂದ ಹೊರಗಿಡಲಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದ ಪ್ರಥಮ ಇನ್ನಿಂಗ್ಸ್ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಅಜಿಂಕ್ಯ ರಹಾನೆ ಅಥವಾ ಚೇತೇಶ್ವರ್ ಪೂಜಾರ ಸ್ಥಾನ ಕಳೆದುಕೊಳ್ಳಬಹುದಾದ ಸಾಧ್ಯತೆಗಳಿವೆ. ಹೌದು, ಶ್ರೇಯಸ್ ಅಯ್ಯರ್ ಉತ್ತಮ ಪ್ರದರ್ಶನ ಮುಂದುವರಿದರೆ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕನಾಗಿ ಕಣಕ್ಕಿಳಿದಿರುವ ಅಜಿಂಕ್ಯ ರಹಾನೆ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಗಳು ಹೆಚ್ಚಿವೆ.

ಅತ್ತ ಮಿಂಚಿದ ಶುಬ್ಮನ್ ಗಿಲ್
ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಒಂದೆಡೆ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಶ್ರೇಯಸ್ ಅಯ್ಯರ್ ಉತ್ತಮ ಪ್ರದರ್ಶನ ನೀಡಿದ್ದರೆ, ಇದಕ್ಕೂ ಮುನ್ನ ಟೀಮ್ ಇಂಡಿಯಾದ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಶುಬ್ಮನ್ ಗಿಲ್ 52 ರನ್ ಬಾರಿಸುವುದರ ಮೂಲಕ ಉತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದ ಶ್ರೇಯಸ್ ಅಯ್ಯರ್ ರೀತಿಯೇ ಶುಬ್ಮನ್ ಗಿಲ್ ಅವರನ್ನು ಕೂಡ ಹೊರಹಾಕುವುದು ಸುಲಭದ ಮಾತಲ್ಲ ಎಂದೇ ಹೇಳಬಹುದು.

ಸುಮಾರು 2 ವರ್ಷಗಳಿಂದ ಕಳಪೆ ಫಾರ್ಮ್ ಎದುರಿಸುತ್ತಿರುವ ರಹಾನೆ - ಪೂಜಾರ
ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯ ರಹಾನೆ ಉತ್ತಮ ಪ್ರದರ್ಶನ ನೀಡಿ ಸುಮಾರು 2 ವರ್ಷಗಳೇ ಕಳೆದಿವೆ. ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಂಡಿದ್ದಾಗ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ್ ಪೂಜಾರ ಉತ್ತಮ ಪ್ರದರ್ಶನ ನೀಡಿದ್ದು ಬಿಟ್ಟರೆ ನಂತರ ಹೇಳಿಕೊಳ್ಳುವಂತಹ ದೊಡ್ಡ ಪ್ರದರ್ಶನವನ್ನು ನೀಡುವಲ್ಲಿ ಯಶಸ್ವಿಯಾಗಿಲ್ಲ. ಹೀಗೆ ಸತತವಾಗಿ ಕಳಪೆ ಪ್ರದರ್ಶನ ನೀಡುತ್ತಾ ಬಂದಿರುವ ಈ ಇಬ್ಬರು ಆಟಗಾರರು ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್ನಲ್ಲಿಯೂ ಮಂಕಾದರೆ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಬೀಳುವ ಸಾಧ್ಯತೆಗಳು ಅಧಿಕವಾಗಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications