ಶನಿವಾರ, ಅಕ್ಟೋಬರ್ 4ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಾಕಿಸ್ತಾನ ವಿರುದ್ಧದ ಹೈ-ವೋಲ್ಟೇಜ್ ಪಂದ್ಯಕ್ಕೂ ಮುನ್ನ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಭಾರತೀಯ ಅಭಿಮಾನಿಗಳಿಗೆ ವಿಶೇಷ ಸಂದೇಶವನ್ನು ನೀಡಿದ್ದಾರೆ.
ಬಹು ನಿರೀಕ್ಷಿತ ಪಂದ್ಯ ಆರಂಭಕ್ಕೂ ಮುನ್ನ ಭಾರತೀಯ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಂಗಣದ ಹೊರಗೆ ಜಮಾಯಿಸಿದರು. ಇದೇ ವೇಳೆ ಪಾಕಿಸ್ತಾನ ಕ್ರಿಕೆಟ್ ತಂಡದ ಹೆಚ್ಚಿನ ಅಭಿಮಾನಿಗಳು ದೃಶ್ಯದಲ್ಲಿ ಕಾಣಲಿಲ್ಲ.
ಟಾಸ್ ನಂತರ ಸ್ಟಾರ್ ಸ್ಪೋರ್ಟ್ಸ್ನಲ್ಲಿ ಮಾತನಾಡಿದ ಗೌತಮ್ ಗಂಭೀರ್, ವಿಶ್ವಕಪ್ನಲ್ಲಿ ಭಾಗವಹಿಸಲು ಭಾರತದಲ್ಲಿರುವ ಪಾಕಿಸ್ತಾನ ತಂಡವನ್ನು ಅಗೌರವಗೊಳಿಸಬೇಡಿ ಎಂದು ಭಾರತೀಯ ಅಭಿಮಾನಿಗಳನ್ನು ಒತ್ತಾಯಿಸಿದರು.

"ನಿಮ್ಮ ತಂಡವನ್ನು ಬೆಂಬಲಿಸಿ. ಆದರೆ ನಿಮ್ಮ ಪ್ರವಾಸಿ ತಂಡದೊಂದಿಗೆ ಅನುಚಿತವಾಗಿ ವರ್ತಿಸಬೇಡಿ. ಅಲ್ಲದಕ್ಕೂ ಮೊದಲು ಅವರು ನಮ್ಮ ಅತಿಥಿಗಳು. ಅವರು ಇಲ್ಲಿ ವಿಶ್ವಕಪ್ ಆಡಲು ಬಂದಿದ್ದಾರೆ ಎಂಬುದನ್ನು ನಾವು ನೆನಪಿಟ್ಟುಕೊಳ್ಳಬೇಕು," ಎಂದು ಗೌತಮ್ ಗಂಭೀರ್ ಹೇಳಿದರು.
ಪಾಕಿಸ್ತಾನದ ಕ್ರಿಕೆಟ್ ಅಭಿಮಾನಿಗಳು ಈ ವಿಶ್ವಕಪ್ ಪಂದ್ಯಕ್ಕೆ ವೀಸಾ ಪಡೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ನರೇಂದ್ರ ಮೋದಿ ಕ್ರೀಡಾಂಗಣವು ಹೆಚ್ಚಾಗಿ ಭಾರತೀಯ ಅಭಿಮಾನಿಗಳ ಉಪಸ್ಥಿತಿಯಿಂದಾಗಿ ನೀಲಿ ಸಮುದ್ರದಂತೆ ಕಾಣುತ್ತಿದೆ.
ಇದಕ್ಕೂ ಮೊದಲು, 120,000ಕ್ಕೂ ಹೆಚ್ಚು ಅಭಿಮಾನಿಗಳು ಪಾಲ್ಗೊಳ್ಳುವ ಬ್ಲಾಕ್ಬಸ್ಟರ್ ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಇದೇ ವೇಳೆ ಆರಂಭಿಕ ಬ್ಯಾಟ್ಸ್ಮನ್ ಶುಭ್ಮನ್ ಗಿಲ್ ಅವರು ಡೆಂಗ್ಯೂ ಜ್ವರದಿಂದ ಚೇತರಿಸಿಕೊಂಡಿದ್ದು, ತಮ್ಮ ಮೊದಲ ಎರಡು ಪಂದ್ಯಗಳನ್ನು ಕಳೆದುಕೊಂಡ ನಂತರ ತಂಡಕ್ಕೆ ಮರಳಿದ್ದಾರೆ. ಆದ್ದರಿಂದ ಇಶಾನ್ ಕಿಶನ್ ಪಂದ್ಯದ ಆಡುವ 11ರ ಬಳಗದಿಂದ ಹೊರಗುಳಿದಿದ್ದಾರೆ.
ವಿಶ್ವಕಪ್ ಟ್ರೋಫಿ ಗೆಲ್ಲುವ ನೆಚ್ಚಿನ ತಂಡವಾಗಿರುವ ಭಾರತವು ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನದ ವಿರುದ್ಧ ಗೆಲುವು ಸಾಧಿಸುವುದರೊಂದಿಗೆ ಅಜೇಯವಾಗಿ ಪಂದ್ಯಕ್ಕೆ ಬಂದಿದೆ.
ಇನ್ನು ನೆದರ್ಲ್ಯಾಂಡ್ಸ್ ಮತ್ತು ಶ್ರೀಲಂಕಾ ವಿರುದ್ಧದ ತನ್ನ ಎರಡು ಪಂದ್ಯಗಳನ್ನು ಗೆದ್ದಿರುವ ಪಾಕಿಸ್ತಾನ ತಂಡ ತನ್ನ ಹಿಂದಿನ ಗೆಲುವಿನಿಂದ ಬದಲಾವಣೆ ಇಲ್ಲದೆ ಆಡುತ್ತಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಪಾಕಿಸ್ತಾನ ತಂಡ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಅಜಂ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್.