ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಣ ಮೂರನೇ ಏಕದಿನ ಪಂದ್ಯ ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿ ಗೆಲುವು ಸಾಧಿಸುವ ಇರಾದೆ ಉಭಯ ತಂಡದ್ದಾಗಿದೆ. ಕೊನೆಯ ಪಂದ್ಯದಲ್ಲಿ ಜಯ ಯಾರ ಪಾಲಾಗುತ್ತದೇ ಎಂಬುದು ಕುತೂಹಲ ಮೂಡಿಸಿದೆ.
ವಿಶಾಖಪಟ್ಟಣಂನಲ್ಲಿ ಭಾರತದ ಸಾಧನೆ ಉತ್ತಮವಾಗಿದೆ. ಈ ಮೈದಾನದಲ್ಲಿ ಈಗಾಗಲೇ ಭಾರತ ಆಡಿದ 10 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಿದೆ. ಅಲ್ಲದೆ 2 ಸೋಲು ಕಂಡಿದ್ದು, ಒಂದು ಪಂದ್ಯ ಟೈನಲ್ಲಿ ಅಂತ್ಯವಾಗಿದೆ. ಭಾರತ 2023ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಬಾರಿಗೆ ಅಂಗಳಕ್ಕೆ ಇಳಿದಾಗ ಸೋಲನ್ನು ಕಂಡಿತ್ತು. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿ ಗೆಲುವಿನ ನಗೆ ಬೀರುವ ಕನಸನ್ನು ಭಾರತ ಹೊಂದಿದೆ.

ಈ ಮೈದಾನದಲ್ಲಿ ವಿರಾಟ್ ಕೊಹ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆ. ಈ ಅಂಗಳದಲ್ಲಿ ಆಡಿದ 7 ಪಂದ್ಯಗಳಲ್ಲಿ 97.83ರ ಸರಾಸರಿಯಲ್ಲಿ 3 ಶತಕ ಹಾಗೂ 2 ಅರ್ಧಶತಕ ಸೇರಿದಂತೆ 587 ರನ್ ಸಿಡಿಸಿದ್ದಾರೆ. ಇದೇ ಲಯವನ್ನು ಮೂರನೇ ಏಕದಿನ ಪಂದ್ಯದಲ್ಲೂ ಮುಂದುವರೆಸುವ ವಿಶ್ವಾಸ ವಿರಾಟ್ ಅವರದ್ದಾಗಿದೆ. ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಪಂದ್ಯದಲ್ಲಿ ಶತಕ ಬಾರಿಸುತ್ತಲೇ ವಿರಾಟ್ 7 ವರ್ಷದ ಬಳಿಕ ಹ್ಯಾಟ್ರಿಕ್ ಶತಕ ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಳ್ಳಲಿದ್ದಾರೆ.
ಆರಂಭಿಕರಾಗಿ ಕಾಣಿಸಿಕೊಳ್ಳುವ ಯಶಸ್ವಿ ಜೈಸ್ವಾಲ್ ಮೇಲೆ ಒತ್ತಡ ಹೆಚ್ಚಿದೆ. ಇವರು ಕಳೆದ ಎರಡು ಪಂದ್ಯಗಳಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದಾರೆ. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ರುತುರಾಜ್ ಗಾಯಕ್ವಾಡ್ ಭರ್ಜರಿ ಫಾರ್ಮ್ನಲ್ಲಿದ್ದು, ಭರವಸೆ ಮೂಡಿಸಿದ್ದಾರೆ. ಇನ್ನು ನಾಯಕ ಕೆಎಲ್ ರಾಹುಲ್ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಸಿಡಿಸಿ ಆತ್ಮವಿಶ್ವಾಸದಿಂದ ಬೀಗುತ್ತಿದ್ದಾರೆ. ಆಲ್ರೌಂಡರ್ ರೂಪದಲ್ಲಿ ರವೀಂದ್ರ ಜಡೇಜಾ, ವಾಶಿಂಗ್ಟನ್ ಸುಂದರ್ ಕಾಣಿಸಿಕೊಳ್ಳಲಿದ್ದಾರೆ.

ಎರಡನೇ ಪಂದ್ಯದಲ್ಲಿ ಸ್ಥಿರ ಬೌಲಿಂಗ್ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದ ಪ್ರಸಿದ್ಧ ಕೃಷ್ಣಗೆ ಗೇಟ್ ಪಾಸ್ ನೀಡುವ ಸಾಧ್ಯತೆ ಇದೆ. ಇವರ ಬದಲಿಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಸ್ಥಾನ ಪಡೆಯುವ ಸಂಭವವಿದೆ. ಇನ್ನು ವೇಗದ ಬೌಲರ್ಗಳಾಗಿ ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ ಕಣದಲ್ಲಿದ್ದು, ಕುಲ್ದೀಪ್ ಯಾದವ್ ಸ್ಪಿನ್ ಬೌಲರ್ ಆಗಿ ಕಣಕ್ಕೆ ಇಳಿಯಲಿದ್ದಾರೆ.
ಈಗಾಗಲೇ ದಕ್ಷಿಣ ಆಫ್ರಿಕಾ ಭಾರತ ಪ್ರವಾಸವನ್ನು ಸ್ಮರಣೀಯವಾಗಿಸಿಕೊಂಡಿದೆ. ಇಲ್ಲಿ ನಡೆದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿರುವ ದಕ್ಷಿಣ ಆಫ್ರಿಕಾ, ಮತ್ತೊಂದು ಸರಣಿ ಗೆಲುವಿನ ಆಸೆಯನ್ನು ಹೊಂದಿದೆ. ವಿಶಾಖಟ್ಟಣಂನಲ್ಲಿ ಜಯ ಸಾಧಿಸಿ, ಏಕದಿನ ಸರಣಿಯನ್ನು ಸಹ ವಶಕ್ಕೆ ಪಡೆಯುವ ಪ್ಲ್ಯಾನ್ ಭಾರತ ತಂಡದ್ದಾಗಿದೆ. ಇದಕ್ಕಾಗಿ ದಕ್ಷಿಣ ಆಫ್ರಿಕಾ ಸ್ಥಿರ ಪ್ರದರ್ಶನ ನೀಡುವ ಅನಿವಾರ್ಯತೆ ಇದೆ.