
ಭಾರತ ಹಾಗೂ ದ. ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯ ಮಂಗಳವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಎರಡು ಪಂದ್ಯಗಳಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಸಮಬಲದ ಸಾಧನೆ ಮಾಡಿರುವ ಕಾರಣ ಈ ಪಂದ್ಯ ನಿರ್ಣಾಯಕವಾಗಿದ್ದು ಯಾವ ತಂಡ ಗೆಲುವು ಸಾಧಿಸಲಿದೆ ಎಂಬುದು ಕುತೂಹಲ ಮೂಡಿಸಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಸರಣಿಯನ್ನು ವಶಕ್ಕೆ ಪಡೆದುಕೊಳ್ಳಲಿದೆ.
ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 2-1 ಅಂತರದಿಂದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಏಕದಿನ ಮಾದರಿಯಲ್ಲಿಯೂ ಅಂಥಾದ್ದೇ ಸಾಧನೆ ಮಾಡುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ. ಆದರೆ ಈ ಸರಣಿಯಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕಣಕ್ಕಿಳಿದಿಲ್ಲ. ಬದಲಿಗೆ ಶಿಖರ್ ಧವನ್ ನೇತೃತ್ವದಲ್ಲಿ ದ್ವಿತೀಯ ದರ್ಜೆಯ ಟೀಮ್ ಇಂಡಿಯಾ ಬಳಗ ಕಣಕ್ಕಿಳಿದಿದೆ. ಹಾಗಿದ್ದರೂ ದಕ್ಷಿಣ ಆಫ್ರಿಕಾ ವಿರುದ್ಧ ದಿಟ್ಟ ಪ್ರದರ್ಶನ ನೀಡಿದ್ದು ಮೊದಲ ಪಂದ್ಯದಲ್ಲಿ ಸಣ್ಣ ಅಂತರದಿಂದ ಎಡವಿದ್ದರೂ ಎರಡನೇ ಪಂದ್ಯದಲ್ಲಿ ಭರ್ಜರಿಯಾಗಿ ಗೆದ್ದುಕೊಂಡಿದೆ. ಇದೀಗ ಅಂತಿಮ ಪಂದ್ಯದಲ್ಲಿ ಯಾವ ತಂಡಕ್ಕೆ ಗೆಲುವು ದೊರೆಯಲಿದೆ ಎಂಬುದು ಕುತೂಹಲ ಮೂಡಿಸಿದ್ದು ಗೆದ್ದ ತಂಡ ಏಕದಿನ ಸರಣಿಯನ್ನು ತನ್ನ ವಶಕ್ಕೆ ಪಡೆಯಲಿದೆ.
ದೆಹಲಿಯ ಅರುಣ್ ಜೇಟ್ಲೀ ಕ್ರೀಡಾಂಗಣದಲ್ಲಿ ಭಾರತ ತಂಡ ಈವರೆಗೆ 20 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳನ್ನು ಆಡಿದೆ. ಈ ಪೈಕಿ 12 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು 7 ಪಂದ್ಯದಲ್ಲಿ ಸೋಲು ಅನುಭವಿಸಿದೆ. ಒಂದು ಪಂದ್ಯಯ ಯಾವುದೇ ಫಲಿತಾಂಶವಿಲ್ಲದೆ ರದ್ದಾಗಿದೆ. ಮತ್ತೊಂದೆಡೆ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ ಈ ಮೈದಾನದಲ್ಲಿ ಒಂದು ಪಂದ್ಯವನ್ನು ಮಾತ್ರವೇ ಆಡಿದ್ದು ಆ ಪಂದ್ಯದಲ್ಲಿ ಸೋಲು ಅನುಭವಿಸಿದೆ.
ಇತ್ತಂಡಗಳ ಸಂಪೂರ್ಣ ಸ್ಕ್ವಾಡ್
ಭಾರತ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅವೇಶ್ ಖಾನ್, ರುತುರಾಜ್ ಗಾಯಕ್ವಾಡ್, ರವಿ ಬಿಷ್ಣೋಯ್, ರಾಹುಲ್ ತ್ರಿಪಾಠಿ, ರಜತ್ ಪಾಟಿದಾರ್, ಮುಖೇಶ್ ಕುಮಾರ್
ದಕ್ಷಿಣ ಆಫ್ರಿಕಾ: ಜನ್ನೆಮನ್ ಮಲನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್ (ನಾಯಕ), ಜಾರ್ನ್ ಫೋರ್ಚುಯಿನ್, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ, ತೆಂಬಾ ಬವುಮಾ, ಲುಂಗಿ ಎನ್ಗಿಡಿ, ತಬ್ರೈಜ್ ಶಮ್ಸಿ, ಮಾರ್ಕೊ ಜಾನ್ಸೆನ್, ಆಂಡಿಲೆ ಫೆಹ್ಲುಕ್ವಾಯೊ